Belagavi NewsBelgaum NewsElection NewsKannada NewsKarnataka NewsPolitics

ಬೆಳಗಾವಿ, ಚಿಕ್ಕೋಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಖಚಿತ ; ಬುಡರಕಟ್ಟಿ, ಗೋವನಕೊಪ್ಪದಲ್ಲಿ ಸಚಿವರ ಪ್ರಚಾರ  

ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ಬೆಳಗಾವಿ ಜಿಲ್ಲಾದ್ಯಂತ ಕಾಂಗ್ರೆಸ್ ಅಲೆ ಬೀಸುತ್ತಿದ್ದು, ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು. 

ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಬುಡರಕಟ್ಟಿ, ಗೋವನಕೊಪ್ಪ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಮತಯಾಚಿಸಿದ ಸಚಿವರು,  ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಏಳಿಗೆ ಸಾಧ್ಯ ಎಂದರು. ಬಡವರ, ದೀನ ದಲಿತರ ಬಗ್ಗೆ ಸದಾ ಚಿಂತಿಸುವ ಏಕೈಕ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಎಂದು ಹೇಳಿದರು. 

ಕರೋನಾ ಸಂಕಷ್ಟ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಅನುಕೂಲವಾಗುವ ಸಲುವಾಗಿ 2023ರ ವಿಧಾನಸಭೆ ಚುನಾವಣೆಗೂ ಮುನ್ನ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಯಿತು. ನಿರೀಕ್ಷೆಯಂತೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತು. ಅಧಿಕಾರಕ್ಕೆ ಬಂದ ಕೇವಲ100  ದಿನಗಳಲ್ಲಿ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು ಎಂದರು. 

ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್ ಡಿಎ ಸರ್ಕಾರ ಶ್ರೀಮಂತರ ಪರ ಕೆಲಸ ಮಾಡುತ್ತಿದೆ. ಬಡವರ ಅನುಕೂಲಕ್ಕಾಗಿ ಜಾರಿಗೆ ತರಲಾಗಿರುವ ಯೋಜನೆಗಳ ವಿರುದ್ಧ ಬಿಜೆಪಿಯವರು ಕೋರ್ಟ್‌ನಲ್ಲಿ ಕೇಸ್ ಹಾಕಿಸಿದ್ದಾರೆ. ಬಿಜೆಪಿಯವರಿಗೆ ಅಂಬಾನಿ, ‌ಅದಾನಿಯವರ ಚಿಂತೆ ಎಂದು ಆರೋಪಿಸಿದರು. ಬೈಲಹೊಂಗಲ ಕ್ಷೇತ್ರದಿಂದ ಅತಿಹೆಚ್ಚು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬರಲಿವೆ ಎಂದು ಸಚಿವರು ಭರವಸೆ ವ್ಯಕ್ತಪಡಿಸಿದರು.

ದೂರದ ಹುಬ್ಬಳ್ಳಿಯವರ ಬದಲಿಗೆ ಸ್ಥಳೀಯ ಮನೆ ಮಗ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಿ. ನಿಮ್ಮ ಕಷ್ಟ ಸುಖಗಳಿಗೆ ಸ್ಪಂದಿಸಲಿದ್ದಾನೆ ಎಂದು ಹೇಳಿದರು. ಬಿಜೆಪಿ ಗೆದ್ದರೆ ಬೆಳಗಾವಿ ಜನ ಅವರನ್ನು ಹುಡುಕಿಕೊಂಡು ಹುಬ್ಬಳ್ಳಿಗೆ ಹೋಗುವ ಪರಿಸ್ಥಿತಿ ಬರುತ್ತದೆ. ಜನರು ಎಚ್ಚರಿಕೆಯಿಂದ ಮತ ಹಾಕಬೇಕು ಎಂದು ಸಚಿವರು ಹೇಳಿದರು. 

* *ನಿಮ್ಮ ಸೇವಕನಾಗಿ ಕೆಲಸ ಮಾಡುವೆ* 

ಯುವಕರೇ ಈ ದೇಶದ ಆಸ್ತಿ. ನಾನೊಬ್ಬ ಯುವಕನಿದ್ದು, ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಮನೋಭಾವ ಹೊಂದಿದ್ದೇನೆ. ಈ ಬಾರಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಮನವಿ ಮಾಡಿದರು. ಕ್ಷೇತ್ರದಲ್ಲಿ ಬಿಜೆಪಿ ಸತತ ಐದು ಬಾರಿ ಗೆದ್ದಿದ್ದರೂ ಅಭಿವೃದ್ಧಿ ಮಾತ್ರ ಮಾಡಲಿಲ್ಲ. ಕೇವಲ ಪಕ್ಷ, ಮೋದಿ ಹೆಸರಿನಲ್ಲಿ ಗೆದ್ದಿದ್ದೆ ಅವರ ಸಾಧನೆ ಎಂದು ಮೃಣಾಲ್‌ ಹೆಬ್ಬಾಳ್ಕರ್ ಹೇಳಿದರು. ಜಿಲ್ಲೆಯ ಅಭಿವೃದ್ಧಿ ಬಗ್ಗೆ ನನ್ನದೇ ಕನಸು ಕಟ್ಟಿಕೊಂಡಿರುವೆ, ಜಿಲ್ಲಾದ್ಯಂತ ಯುವ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.

* *ಸುಖದೇವಾನಂದ ಮಠಕ್ಕೆ ಭೇಟಿ* 

 ಬೈಲಹೊಂಗಲ ತಾಲೂಕಿನ ನಯಾನಗರದಲ್ಲಿರುವ ಶ್ರೀ ಸುಖದೇವಾನಂದ ಮಠಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಭೇಟಿ ನೀಡಿದರು. ಶ್ರೀ ಅಭಿನವ ಸಿದ್ಧಲಿಂಗ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. 

ಈ ವೇಳೆ ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ, ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ್ ಪಾಟೀಲ್, ಶಿವರುದ್ರಪ್ಪ ಹಟ್ಟಿಹೊಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರಗೌಡ ಪಾಟೀಲ, ಮಹಾದೇವಿ ಬೊಡ್ಕಿ, ಜಾನವ್ವ ಬಾವನ್ವರ್, ಬಸವನಗೌಡ ಪಾಟೀಲ, ವೀರಭದ್ರ ಡೊಂಬರಕೊಪ್ಪ‌,ಮಹಲಿಂಗ ಕಿತ್ತೂರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button