*ಕಲುಷಿತ ನೀರು ಸೇವನೆ: ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ :ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಘಟನೆ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಈ ಘಟನೆಯು ವಿಜಯನಗರದ ಹರಪ್ಪನಹಳ್ಳಿಯ ಟಿ. ತುಂಬಿಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಬೋವಿ ಸುರೇಶ್ (35) ಹಾಗೂ ಮಹಾಂತೇಶ್( 45) ಎಂದು ಗುರುತಿಸಲಾಗಿದೆ. ಇನ್ನುಅಸ್ವಸ್ಥ 15 ಮಂದಿಗೆ ತೀವ್ರ ವಾಂತಿ ಭೇದಿ ಕಾಣಿಸಿಕೊಂಡಿದ್ದು, ದಾವಣಗೆರೆ ಆಸ್ಪತ್ರೆ ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಶುದ್ಧ ನೀರು ಕುಡಿಯುವ ಘಟಕದ ಪೈಪ್ ನಲ್ಲಿ ಕೊಳಚೆ ನೀರು ಮಿಶ್ರಣಗೊಂಡು ಅವಘಡ ನಡೆದಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದಾರೆ . ಕೂಡಲೇ ಮೃತಪಟ್ಟ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೆ ಹೊಸ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸುವಂತೆ ಆಗ್ರಹಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.




