*ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ: ಕೆ. ಎನ್. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಾಲಕಾರ್ಮಿಕ ಪದ್ದತಿ ಕಾಯ್ದೆಯು ಜಾರಿಗೆ ಬಂದು ಸುಮಾರು ನಲವತ್ತು ವರ್ಷಗಳಾಗಳಾದರು ಸಹ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತವಾಗಿದ್ದು, ಇಂತಹ ಅನಿಷ್ಠ ಪದ್ದತಿಯ ನಿರ್ಮೂಲನೆಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಸಮನ್ವಯದ ಅಗತ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಎನ್. ಶಿವಕುಮಾರ ತಿಳಿಸಿದರು.
ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಜೂನ್ 12 (ಶುಕ್ರವಾರ) ಆಯೋಜಿಸಲಾಗಿದ್ದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿಯಲ್ಲಿ ಸಿಲುಕುವ ಬಹುತೇಕರು ಬಡ ಕುಟುಂಬಗಳ ಮಕ್ಕಳಾಗಿದ್ದು ಅಧಿಕಾರಿಗಳು ಕೇವಲ ಪ್ರಕರಣ ದಾಖಲಿಸದೇ, ಅಂತಹ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಕಾರ್ಯಕ್ಕೆ ಮುಂದಾಗಬೇಕು. ಯಾವುದೇ ಒಂದು ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ವಿವಿಧ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಶಿಕ್ಷಣಾರ್ಥಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್ ಅವರು ಮಾತನಾಡಿ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳು ಕೇವಲ ಕಾನೂನು ಜಾರಿಗೆ ಸೀಮಿತವಾಗದೆ, ಬಾಲಕಾರ್ಮಿಕ ಪದ್ಧತಿಯನ್ನು ಬಲವಾಗಿ ವಿರೋಧಿಸಿ, ಆ ಜಾಲದಿಂದ ಮುಕ್ತರಾದ ಮಕ್ಕಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಿ ಅವರು ಮತ್ತೆ ಶಿಕ್ಷಣದ ಮುಖ್ಯವಾಹಿನಿಗೆ ಬರುವಂತೆ ಸಹಕರಿಸಬೇಕು ಎಂದು ತಿಳಿಸಿದರು.
ಬೆಳಗಾವಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರಾದ ನಾಗೇಶ ಡಿ. ಜಿ. ಮಾತನಾಡಿ ಪ್ರತಿವರ್ಷ ಜೂನ್ 12 ರಂದು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಒಂದೊಂದು ವಿಶಿಷ್ಟ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಜಗತ್ತಿನಲ್ಲಿ ತಮ್ಮ ಮಕ್ಕಳು ಚೆನ್ನಾಗಿ ಓದಿ, ನೌಕರಿ ಹಿಡಿದು, ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಗಳಿಸಬೇಕು. ಇನ್ನೊಬ್ಬರ ಮನೆಯಲ್ಲೋ ಅಥವಾ ಅಪಾಯಕಾರಿ ಕೆಲಸಗಳಲ್ಲೋ ತೊಡಗಬಾರದು ಎಂಬ ಆಸೆ ಪ್ರತಿಯೊಬ್ಬ ತಂದೆ-ತಾಯಿಗೂ ಇರುತ್ತದೆ. ಆದರೆ ಬಡತನದ ಬೇಗೆಯಿಂದಾಗಿ ಬಡ ಕುಟುಂಬಗಳಲ್ಲಿ ಪರಿಸ್ಥಿತಿ ತದ್ವಿರುದ್ಧವಾಗಿದೆ ಎಂದು ವಿಷಾದಿಸಿದರು.
ಮಕ್ಕಳ ಮೇಲಾಗುವ ದುಷ್ಪರಿಣಾಮಗಳು
ಬಡತನದಲ್ಲಿರುವ ಮಕ್ಕಳು, ಅನಾಥರು, ಪೋಷಕರನ್ನು ಕಳೆದುಕೊಂಡು ಅಜ್ಜ-ಅಜ್ಜಿಯ ಆಶ್ರಯದಲ್ಲಿ ಬೆಳೆಯುತ್ತಿರುವ ಮಕ್ಕಳೇ ಹೆಚ್ಚಾಗಿ ಬಾಲಕಾರ್ಮಿಕ ಪದ್ದತಿಗೆ ಬಲಿಯಾಗುತ್ತಿದ್ದಾರೆ. ಈ ಪದ್ದತಿಯು ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅದರಲ್ಲೂ ಹೆಣ್ಣುಮಕ್ಕಳು ಈ ವ್ಯವಸ್ಥೆಗೆ ಸಿಲುಕಿದಾಗ ಲೈಂಗಿಕ ದೌರ್ಜನ್ಯಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ.
ಯಾವ ಕುಟುಂಬಗಳಲ್ಲಿ ಮಕ್ಕಳ ರಕ್ಷಣೆ ಸಾಧ್ಯವಿಲ್ಲವೋ ಅಥವಾ ಶಿಕ್ಷಣ ನೀಡಲು ಆರ್ಥಿಕವಾಗಿ ಅಸಹಾಯಕರಾಗಿದ್ದಾರೋ, ಅಂತಹ ಮಕ್ಕಳನ್ನು ಹಾಗೂ ಅನಾಥರನ್ನು ಮಕ್ಕಳ ಕಲ್ಯಾಣ ಸಮಿತಿ (ಅಘಅ) ಮೂಲಕ ರಕ್ಷಿಸುವ ಕಾರ್ಯ ನಡೆಯುತ್ತಿದೆ. ಇದೇ ಮಾದರಿಯಲ್ಲಿ ಶಾಲಾ-ಕಾಲೇಜು ಮಟ್ಟದಲ್ಲೂ ಮಕ್ಕಳ ರಕ್ಷಣೆಯ ಕಾರ್ಯಗಳು ನಿರಂತರವಾಗಿ ನಡೆಯಬೇಕು ಮತ್ತು ಇದಕ್ಕೆ ಎಲ್ಲ ಇಲಾಖೆಗಳು ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಸ್ಪಂದನ ಸಂಸ್ಥೆಯ ನಿರ್ದೇಶಕಿ ಸುಶೀಲಾ ಅವರು ಮಾತನಾಡಿ, ಬಾಲಕಾರ್ಮಿಕ ಪದ್ಧತಿ ನಿಷೇಧದ ಕುರಿತು ಕೇವಲ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ, ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಿಂದಲೂ ವ್ಯಾಪಕ ವಿರೋಧ ಹಾಗೂ ಜಾಗೃತಿ ಕಾರ್ಯಕ್ರಮಗಳು ನಡೆಯಬೇಕು ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ ಎಸ್. ಜೋಗೂರ ನಮ್ಮ ದೇಶದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಹಲವು ಕಠಿಣ ಕಾಯ್ದೆಗಳನ್ನು ತರಲಾಗಿದೆ. ಇದರ ಫಲವಾಗಿ, ಈ ಹಿಂದೆ ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿದ್ದ ಬಾಲಕಾರ್ಮಿಕರ ಪ್ರಮಾಣವು ಪ್ರಸ್ತುತ ನೂರರ ಸಂಖ್ಯೆಗೆ ಬಂದು ತಲುಪಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಮಹಿಳಾ ಪೊಲೀಸ್ ಠಾಣೆ ನಿರೀಕ್ಷಕರಾದ ನಿರ್ಮಲ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಅಧಿಕಾರಿ ಈಶ್ವರ ಗಡಾದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನ ಕುಮಾರ, ಸಹಾಯಕ ಕಾರ್ಮಿಕ ಆಯುಕ್ತ ಕೆ. ಪಿ ನಾಗರಾಜ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ರಾಜೇಶ ಜಾದವ, ಸಂಜೀವ ಬೋಸ್, ರಾಜೇಶ ಅನ್ನೋಟಿಕರ, ರಮೇಶ ಕೆಸರೂರು, ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ ಉಪಸ್ಥಿತರಿದ್ದರು.




