Latest

ಬೆಳಗಾವಿ ಜಿಲ್ಲೆಯ 26 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕುಡಿಯುವ ನೀರಿನ ಬೇಡಿಕೆ ಆಧರಿಸಿ ಸಮಸ್ಯಾತ್ಮಕ ಗ್ರಾಮಗಳಿಗೆ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಪ್ರಾದೇಶಿಕ ಆಯುಕ್ತ ತುಷಾರ ಗಿರಿನಾಥ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿಕ್ಕೋಡಿ ವಿಭಾಗದಲ್ಲಿ ೧೩೧ ಹಾಗೂ ಬೆಳಗಾವಿ ವಿಭಾಗದಲ್ಲಿ ೩೯ ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳು ಎಂದು ಗುರುತಿಸಲಾಗಿದ್ದು, ಇವುಗಳ ಪೈಕಿ ೨೬ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಬರ ಹಿನ್ನೆಲೆಯಲ್ಲಿ ಈ ಮುಂಚೆ ಕೊರೆಯಲಾಗಿರುವ ಕೊಳವೆಬಾವಿಗಳನ್ನು ಪರಿಶೀಲಿಸಿ ತಹಶಿಲ್ದಾರರ ಮೂಲಕ ವರದಿಯನ್ನು ತರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಅದೇ ರೀತಿ ಅಗತ್ಯ ಇರುವ ಕಡೆಗಳಲ್ಲಿ ಮಾತ್ರ ತಕ್ಷಣ ಮೇವು ಬ್ಯಾಂಕ್ ಆರಂಭಿಸುವಂತೆ ಸೂಚನೆ ನೀಡಿದ ಪ್ರಾದೇಶಿಕ ಆಯುಕ್ತರು, ಮೇವು ಖರೀದಿಯಲ್ಲಿ ಮಿತವ್ಯಯ ನೀತಿ ಪಾಲಿಸುವಂತೆ ತಿಳಿಸಿದರು.
ಈಗಾಗಲೇ ಅಥಣಿಯಲ್ಲಿ ಮಾತ್ರ ಮೇವು ಬ್ಯಾಂಕ್ ಆರಂಭಿಸಲಾಗಿದ್ದು, ಮುಂದಿನ ಎರಡು ತಿಂಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಜಿಲ್ಲೆಯಲ್ಲಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕ ಡಿ.ಎಸ್. ಹವಾಲ್ದಾರ ಸಭೆಯಲ್ಲಿ ತಿಳಿಸಿದರು.
ಬೆಳೆಹಾನಿ ಬಗ್ಗೆ ಚರ್ಚೆ: ಕಳೆದ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಬೆಳೆಹಾನಿಯಾಗಿರುವ ಬಗ್ಗೆ ಚರ್ಚೆ ನಡೆಸಿದ ತುಷಾರ್ ಗಿರಿನಾಥ್ ಅವರು, ಕೇಂದ್ರ ಬರ ಅಧ್ಯಯನ ತಂಡಗಳ ವರದಿ ಆಧರಿಸಿ ಕೇಂದ್ರ ಸರ್ಕಾರ ಈಗಾಗಲೇ ಮೊದಲ ಕಂತಿನಲ್ಲಿ ಹಣ ಬಿಡುಗಡೆಗೊಳಿಸಿದೆ. ಪಟ್ಟಣ ಪ್ರದೇಶಗಳಿಗೆ ನೀರು ಸರಬರಾಜಿಗಾಗಿ ಕೈಗೆತ್ತಿಕೊಂಡಂಥ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಮಹಾತ್ಮಾ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯಡಿ ನಿಗದಿಪಡಿಸಲಾದ ಗುರಿಯನ್ನು ತಲುಪುವ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತ ತುಷಾರ್ ಗಿರಿನಾಥ್ ಅವರು ನಿರ್ದೇಶನ ನೀಡಿದರು.
ಮುಂಗಾರು ಹಂಗಾಮಿನಲ್ಲಿ ಆಗಿರುವ ಬೆಳೆಹಾನಿಗೆ ೫೮.೪೯ ಕೋಟಿ ರೂಪಾಯಿ ಇನ್ ಪುಟ್ ಸಬ್ಸಿಡಿ ಬಿಡುಗಡೆ ಮಾಡುವಂತೆ ಕೇಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ ವಿವರಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಇಬ್ರಾಹಿಂ ಮೈಗೂರ್, ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ್ ಹೊನಕೇರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related Articles

Back to top button