
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಂಗಳೂರಿನಲ್ಲಿ ನಡೆಯುತ್ತಿರುವ ಗಲಭೆ ಇನ್ನೂ ನಿಯಂತ್ರಣಕ್ಕೆ ಬರುತ್ತಿಲ್ಲ. 2 ಪೊಲೀಸ್ ಠಾಣೆಗಳನ್ನು ಪುಂಡರು ವಶಕ್ಕೆ ಪಡೆದಿದ್ದು, ಸಿಕ್ಕಸಿಕ್ಕಲ್ಲಿ ಕಲ್ಲು ತೂರಾಟ, ಬೆಂಕಿ ಹಚ್ಚುವ ಕೃತ್ಯ ಮುಂದುವರಿಸಿದ್ದಾರೆ.
ಪೊಲೀಸ್ ಫೈರಿಂಗ್ ಗೆ ಓರ್ವ ಬಲಿಯಾಗಿದ್ದಾನೆ ಎನ್ನುವ ಮಾಹಿತಿ ಬಂದಿದೆ.
ನೂರಾರು ವಾಹನಗಳು ಧ್ವಂಸವಾಗಿವೆ. ಕಂಡ ಕಂಡ ಮನೆಗಳಿಗೆ ನುಗ್ಗಿ ದಾಂದಲೆ ನಡೆಸುತ್ತಿದ್ದಾರೆ. ಮಾಧ್ಯಮಗಳ ಮೇಲೆ, ಪೊಲೀಸರ ಮೇಲೂ ದಾಳಿ ನಡೆಯುತ್ತಿದೆ. ಎಲ್ಲಿ ನೋಡಿದರಲ್ಲಿ ಗಲಭೆ, ಬೆಂಕಿ ಹಲ್ಲು ಕೃತ್ಯ ನಡೆಯುತ್ತಿದೆ. 3 ಗಂಟೆಯಾದರೂ ಪರಿಸ್ಥಿತಿ ನಿಯಂತ್ರಣಕ್ಕೆ ಸಿಗುತ್ತಿಲ್ಲ.
ಮೂಲಗಳ ಪ್ರಕಾರ ಗಲಭೆಕೋರರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ ಬರುತ್ತಿದ್ದಾರೆ. ಪೊಲೀಸರ ಸಂಖ್ಯೆ ಹೆಚ್ಚುತ್ತಿದ್ದಂತೆ ಗಲಭೆಕೋರರೂ ಸಾವಿರಾರು ಸಂಖೆಯಲ್ಲಿ ಆಗಮಿಸುತ್ತಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಇನ್ನು ಕೆಲವೇ ಸಮಯದಲ್ಲಿ ಪರಿಸ್ಥಿತಿ ನಿಯಂತ್ರಿಸುತ್ತೇವೆ ಎಂದಿದ್ದಾರೆ. ಆದರೆ ನಡೆಯುತ್ತಿರುವ ಬೆಳವಣಿಗೆ ನೋಡಿದರೆ ಅಂತಹ ಸಾಧ್ಯತೆ ಕಾಣುತ್ತಿಲ್ಲ.
ಹತ್ತಕ್ಕೂ ಹೆಚ್ಚು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. 15ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಎಲ್ಲಿ, ಏನು ನಡೆಯುತ್ತಿದೆ ಎನ್ನುವುದು ಯಾರಿಗೂ ತಿಳಿಯುತ್ತಿಲ್ಲ. ಎಷ್ಟೋ ಕಡೆ ಪೊಲೀಸರು ಅಸಹಾಯಕರಾಗಿ ನೋಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಕೆಜಿಹಳ್ಳಿ ಮತ್ತು ಡಿಜಿ ಹಳ್ಳಿ ಪೊಲೀಸ್ ಠಾಣೆಗಳನ್ನು ಪುಂಡರು ವಶಕ್ಕೆ ಪಡೆದು ಬೆಂಕಿ ಹಚ್ಚಿದ್ದಾರೆ. ಶಾಸಕ ಅಖಂಡ ಶ್ರೀನಿವಾಸ ಮನೆಗೂ ಬೆಂಕಿ ಹಚ್ಚಿದ್ದಾರೆ.
ಇದು ಪೂರ್ವಯೋಜಿತ ಕೃತ್ಯ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಇದರ ಹಿಂದೆ ದೊಡ್ಡ ದೊಡ್ಡ ಜನರ ಕೈವಾಡವಿದೆ ಎಂದೂ ಅವರು ಹೇಳಿದ್ದಾರೆ.
ಪೈಗಂಬರರ ಕುರಿತು ಬರಹ ಆರೋಪ: ಬೆಂಗಳೂರಿನಲ್ಲಿ ಭಾರಿ ದಾಂಧಲೆ