Kannada NewsKarnataka NewsLatest

ಜಿಲ್ಲೆಯಲ್ಲಿ ಕರೊನಾ ಸೋಂಕು: ಬಿಗಿ ಕ್ರಮ ಕೈಗೊಳ್ಳಲು ಸಚಿವ ರಮೇಶ್ ಜಾರಕಿಹೊಳಿ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ಜಿಲ್ಲೆಯಲ್ಲಿ ಮೂರು ಪಾಸಿಟಿವ್ ಪ್ರಕರಣ ದೃಢಪಟ್ಟಿರುವುದರಿಂದ ಲಾಕ್ ಡೌನ್ ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕು. ನಾಗರಿಕರಿಗೆ ಅಗತ್ಯ ಸಾಮಗ್ರಿಗಳ ಪೂರೈಕೆ ಮತ್ತು ತುರ್ತು ಸಂದರ್ಭ ಹೊರತುಪಡಿಸಿ ಉಳಿದಂತೆ ಜನಸಂಚಾರ ನಿಯಂತ್ರಣಕ್ಕೆ ಬಿಗಿ ಕ್ರಮಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್-೧೯ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭಾನುವಾರ (ಏ.೫) ನಗರದ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಈಗಾಗಲೇ ಒಮ್ಮೆ ನೆಗೆಟಿವ್ ಬಂದಿರುವವರಿಗೆ ಕೆಲ ದಿನಗಳ ಬಳಿಕ ಮತ್ತೊಮ್ಮೆ ಕಡ್ಡಾಯವಾಗಿ ಪರಿಶೀಲಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಅದೇ ರೀತಿ ನಗರ ಪ್ರದೇಶಗಳಲ್ಲಿ ಕೂಡ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿಕೊಂಡರು.
ಗೋಕಾಕ ನಲ್ಲಿ ಈಗಾಗಲೇ ಎಲ್ಲ ಜಮಾತ್ ಗಳ ಪ್ರತಿನಿಧಿಗಳ ಸಭೆ ನಡೆಸಿ ಲಾಕ್ ಡೌನ್ ಪಾಲಿಸುವ ಅಗತ್ಯತೆ ಬಗ್ಗೆ ಮನವರಿಕೆ ಮಾಡಲಾಗಿದೆ.
ಔಷಧಿ ಸಾಮಗ್ರಿಗಳ ಲಭ್ಯತೆ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಸಚಿವ ರಮೇಶ್ ಜಾರಕಿಹೊಳಿ ಅವರು, ನಗರದ ಹೊರಹೊಲಯದಲ್ಲಿ ನಾಲ್ಕು ದಿಕ್ಕುಗಳಲ್ಲಿ ಹೋಲಸೇಲ್ ತರಕಾರಿ ಮಾರುಕಟ್ಟೆ ಸ್ಥಾಪನೆ ಹಾಗೂ ಮೂಲಸೌಕರ್ಯಗಳನ್ನು ಒದಗಿಸಿರುವ ಬಗ್ಗೆ ಚರ್ಚೆ ನಡೆಸಿದರು.
ರಾಯಬಾಗ, ಚಿಕ್ಕೋಡಿ, ಕುಡಚಿ ಸೇರಿದಂತೆ ವಿವಿಧ ಕಡೆಯ ಮಾಹಿತಿಯನ್ನು ಪಡೆದುಕೊಂಡ ಸಚಿವರು, ಜಿಲ್ಲೆಯ ಎಲ್ಲ ಭಾಗಗಳ ಮೇಲೆ ನಿಗಾ ವಹಿಸುವಂತೆ ತಿಳಿಸಿದರು.
ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಗಾಗಿ ವಿವಿಧ ಕಡೆ ವಸತಿಗೃಹಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ವಿವರಿಸಿದರು.
ಸರ್ಕಾರದ ಮಾರ್ಗಸೂಚಿ ಪ್ರಕಾರ ಕ್ವಾರಂಟೈನ್ ನಲ್ಲಿ ಇರುವವರ ತಪಾಸಣೆ ಸೇರಿದಂತೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್. ವಿ.ಮುನ್ಯಾಳ ತಿಳಿಸಿದರು.
ಕಾನೂನು ಸುವ್ಯವಸ್ಥೆ ಪಾಲನೆ ಕುರಿತು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸಚಿವರಿಗೆ ಮಾಹಿತಿಯನ್ನು ನೀಡಿದರು.
ನಗರ ಪೊಲೀಸ್ ಆಯುಕ್ತರಾದ ಬಿ.ಎಸ್. ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button