
ಪ್ರಗತಿವಾಹಿನಿ ಸುದ್ದಿ: ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ಹಂಚಲಾಗುತ್ತಿದೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿ.ಆರ್.ಪಾಟೀಲ್ ಯಾವ ಉದ್ದೇಶಕ್ಕೆ ಈ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಆದರೆ ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಗರಂ ಆದರು.
ಮನೆ ಬಗ್ಗೆ ಪಂಚಾಯಿತಿ, ಸ್ಥಳೀಯ ಸಂಸ್ಥೆಯಿಂದ ನಿರ್ಧಾರವಾಗುತ್ತೆ. ಒಂದೂವರೆ ಲಕ್ಷ ಹಣ ಕೊಡುವ ವಿಚಾರಕ್ಕೆ ಮಂತ್ರಿಗಳು ಬರ್ತಾರ? ಬಿ.ಆರ್.ಪಾಟೀಲ್ ಬಿ.ಆರ್. ಪಾಟೀಲ್ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರ ಹೇಳಿಕೆ ಗಮನಿಸಿದ್ದಾರೆ. ನಾನು, ಸಿಎಂ ಹಾಗೂ ಎಲ್ಲರೂ ಸೇರಿ ಚರ್ಚೆ ಮಾಡಿ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದರು.
2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು ಸರ್ಕಾರದ ಗುರಿ: ಡಿಸಿಎಂ ಡಿ.ಕೆ. ಶಿವಕುಮಾರ್
ಆದ್ಯತೆ ಮೇರೆಗೆ ಕಾಮಗಾರಿ ಪೂರ್ಣ
ಬೆಂಗಳೂರು, ಜೂ.21
“2027ರ ಒಳಗಾಗಿ ಕೋಲಾರ ಭಾಗಕ್ಕೆ ಎತ್ತಿನ ಹೊಳೆ ನೀರನ್ನು ಹರಿಸಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.
“ಈ ಯೋಜನೆಗೆ ಅರಣ್ಯ ಇಲಾಖೆಗೆ ಸಂಬಂಧಿತ ಸಮಸ್ಯೆಗಳು, ಭೂ ಸ್ವಾಧೀನ ಪ್ರಕ್ರಿಯೆ, ಬೈರಗೊಂಡಲು, ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ಭೂ ಸ್ವಾಧೀನ ಹಾಗೂ ಆರ್ಥಿಕ ವಿಚಾರವಾಗಿ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ಹೀಗಾಗಿ ಈ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇವೆ” ಎಂದು ತಿಳಿಸಿದರು.
“ಈ ಯೋಜನೆಯಲ್ಲಿ ಮಾರ್ಪಾಟು ಮಾಡಿರುವ ಅಂಶಗಳು, ಸಚಿವರುಗಳ ಸಲಹೆಗಳನ್ನು ನೀಡಿದ್ದಾರೆ. ಇಲ್ಲಿ ಕೆಲವು ತಾಂತ್ರಿಕ ಅಂಶಗಳು ಕೂಡ ಇವೆ. ಎಲ್ಲವನ್ನು ಅಧ್ಯಯನ ಮಾಡಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುತ್ತೇನೆ. ಬೇರೆ ಯೋಜನೆಗಳು ವಿಳಂಬವಾದರೂ ಚಿಂತೆಯಿಲ್ಲ, ಎತ್ತಿನಹೊಳೆ ಯೋಜನೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸುವಂತೆ ಸಿಎಂ ನನಗೆ ನಿರ್ದೇಶನ ನೀಡಿದ್ದಾರೆ” ಎಂದು ಹೇಳಿದರು.
ಶಾಸಕರ ಹೇಳಿಕೆ ಖಂಡಿಸುತ್ತೇನೆ
ಶಾಸಕ ಬಿ.ಆರ್ ಪಾಟೀಲ್ ಅವರು ಆಡಿಯೋದಲ್ಲಿ ಮಾಡಿರುವ ಆರೋಪ ನಿಜ ಎಂದು ಪುನರುಚ್ಚರಿಸಿದ್ದಾರೆ ಎಂದು ಕೇಳಿದಾಗ, “ಅವರು ಏನು ಹೇಳಿದ್ದಾರೆ ನನಗೆ ಗೊತ್ತಿಲ್ಲ. ಈ ವಿಚಾರ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಅವರು ಈ ವಿಚಾರವಾಗಿ ಕ್ರಮ ಕೈಗೊಳ್ಳಲಿದ್ದಾರೆ. ಪಾರದರ್ಶಕವಾಗಿ ವಸತಿ ಹಂಚಿಕೆಯಾಗುವಾಗ ಫಲಾನುಭವಿ ಹಣ ನೀಡಲು ಹೇಗೆ ಸಾಧ್ಯ? ವಸತಿ ಹಂಚುವ ನಿರ್ಧಾರ ತೆಗೆದುಕೊಳ್ಳುವವರು ಪಂಚಾಯ್ತಿ ಹಾಗೂ ಸ್ಥಳೀಯ ಸಂಸ್ಥೆಗಳು. ಶಾಸಕರು ಯಾವ ಉದ್ದೇಶದಲ್ಲಿ ಹೇಳಿದ್ದಾರೋ ಇದು ಸರಿ ಇಲ್ಲ. ನಾನಿದನ್ನು ಖಂಡಿಸುತ್ತೇನೆ. ನಮ್ಮ ಸರ್ಕಾರದಲ್ಲಿ ಇಂತಹ ವಿಚಾರ ಇಲ್ಲ. ಈ ವಿಚಾರವಾಗಿ ನಾನು ಹಾಗೂ ಸಿಎಂ, ಶಾಸಕರ ಜೊತೆ ಮಾತನಾಡುತ್ತೇವೆ” ಎಂದು ತಿಳಿಸಿದರು.
ಕಾಲವೇ ಉತ್ತರ ಕೊಡಲಿದೆ
ಮೇಕೆದಾಟು ಪಾದಯಾತ್ರೆ ವಿಚಾರವಾಗಿ ನಮಗೆ ಆಹ್ವಾನ ನೀಡಿಲ್ಲ, ಹೀಗಾಗಿ ನಟ್ಟು ಬೋಲ್ಟ್ ಟೈಟ್ ಮಾಡುತ್ತೇವೆ ಎಂದು ಹೇಳಿರುವುದು ಸರಿಯಲ್ಲ ಎಂಬ ನಟ ಸುದೀಪ್ ಹೇಳಿಕೆ ಬಗ್ಗೆ ಕೇಳಿದಾಗ, “ಈಗ ನಾನು ಈ ವಿಚಾರವಾಗಿ ಉತ್ತರ ನೀಡುವುದಿಲ್ಲ. ನಾನು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋಗಿ ಆಹ್ವಾನ ನೀಡಿದ್ದೇನೆ. ಮಾಧ್ಯಮಗಳ ದಾಖಲೆಗಳಲ್ಲಿ ಎಲ್ಲವೂ ಇದೆ. ಕಾಲವೇ ಉತ್ತರ ನೀಡಲಿದೆ” ಎಂದು ತಿಳಿಸಿದರು.