Karnataka NewsLatestPolitics

*ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*

ಇಂದಿನಿಂದ ಜಿಬಿಎ ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಅರ್ಜಿ ಲಭ್ಯ

ಪ್ರಗತಿವಾಹಿನಿ ಸುದ್ದಿ: “ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೇ ಎಂಬುದು ಇರಲೇ ಬೇಕಲ್ಲವೇ?” ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಅಲೆಗ್ಸಾಂಡರ್ ದಿ ಗ್ರೇಟ್ ಇಡೀ ಪ್ರಪಂಚದ ಮುಕ್ಕಾಲು ಪಾಲು ಗೆದ್ದವರೇ ಶಾಶ್ವತವಲ್ಲ. ಸದ್ದಾಂ ಹುಸೇನ್ ಕೊನೆಗಾಲದಲ್ಲಿ ಅವಿತುಕೊಳ್ಳಬೇಕಾಯಿತು. ಇನ್ನು ಬೇರೆಯವರದು ಯಾವ ಲೆಕ್ಕ? ಮನರೇಗಾ ಹೆಸರು ಬದಲಾವಣೆ ವಿರೋಧಿಸಿ 2026 ರ ಜನವರಿ 5 ನೇ ತಾರೀಕಿನಿಂದ ಹೊಸ ಹೋರಾಟ ರೂಪಿಸಲಾಗುವುದು. ಪಂಚಾಯತಿ ಮಟ್ಟದಿಂದ ಈ ಹೋರಾಟ ಆರಂಭಿಸಲಾಗುವುದು” ಎಂದು ತಿಳಿಸಿದರು.

Home add -Advt

“ಗ್ಯಾರಂಟಿ ಸಮಿತಿ ಸದಸ್ಯರು, ಬೆಸ್ಕಾಂ, ಆರೋಗ್ಯ ಸಮಿತಿ ಸೇರಿದಂತೆ ಇತರೇ ಇಲಾಖೆಗಳಿಂದ ನಾಮನಿರ್ದೇಶನ ಮಾಡಿರುವ ಸದಸ್ಯರ ಸಂಖ್ಯೆಯೇ 150- 200 ಇದ್ದು ಇವರೆಲ್ಲರೂ ಹೋರಾಟದ ಜವಾಬ್ದಾರಿ ತೆಗೆದುಕೊಳ್ಳಬೇಕು. ಇದರ ಉಸ್ತುವಾರಿಗೆ ಜಿ.ಸಿ.ಚಂದ್ರಶೇಖರ್ ‌ಅವರ ನೇತೃತ್ವದಲ್ಲಿ ವೀಕ್ಷಕರನ್ನು ನೇಮಿಸಲಾಗುತ್ತದೆ” ಎಂದರು.

“ಎರಡು ಮೂರು ತಿಂಗಳಿನಲ್ಲಿ ಜಿಲ್ಲಾ ಪಂಚಾಯಿತಿ‌ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಬೇಕಿದೆ.‌‌ ಅದಕ್ಕೂ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಪ್ರಿಯಾಂಕ್ ಖರ್ಗೆ ಅವರಿಗೂ ಇದರ ಬಗ್ಗೆ ತಿಳಿಸಿದ್ದು, ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ” ಎಂದರು.

“ಅಂದು ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ಎಐಸಿಸಿ ಅಧಿವೇಶನ ಹೇಗೆ ನಡೆಯಿತು ಎನ್ನುವ ಕುರಿತಾದ ಗಾಂಧಿ ಭಾರತ ಪುಸ್ತಕವನ್ನ ರೂಪಿಸಿದ್ದೇನೆ. ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಲಭ್ಯವಿದೆ. ಇದರ ಬಿಡುಗಡೆಗೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ಬಿಡುಗಡೆ ಮಾಡಿಸಬೇಕು ಎಂದು ಅವರ ಸಮಯ ಕೇಳಿದ್ದೇನೆ. ಇದೇ ಭಾರತ್ ಜೋಡೋ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಗುವುದು” ಎಂದರು.

“ಇದರ ನೆನಪಿಗೆ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಾಣ ಮಾಡಬೇಕು ಎಂದು ಹೊರಟಿದ್ದೇವೆ. ಈಗಾಗಲೇ 70 ಕಾಂಗ್ರೆಸ್ ಕಚೇರಿಗಳು ನಿರ್ಮಾಣವಾಗಿವೆ. ಬೆಂಗಳೂರಿನಲ್ಲೂ ಎರಡು ಕಚೇರಿಗಳ ನಿರ್ಮಾಣ ಮಾಡಲಾಗುವುದು. ಒಂದಕ್ಕೆ ರಾಮಲಿಂಗಾರೆಡ್ಡಿ ಅವರು ಇನ್ನೊಂದು ಕಚೇರಿ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದೇನೆ. ಒಂದು ಜಿಲ್ಲಾ ಕಚೇರಿ ಇನ್ನೊಂದು ರಾಜ್ಯ ಕಚೇರಿ. ಮೈಸೂರಿನಲ್ಲಿಯೂ ಸಹ ದೊಡ್ಡ ಕಚೇರಿ ನಿರ್ಮಾಣ ಮಾಡಲಾಗುವುದು. ಇದರ ಜವಾಬ್ದಾರಿಯನ್ನು ಮುಖ್ಯಮಂತ್ರಿಯವರು ತೆಗೆದುಕೊಂಡಿದ್ದಾರೆ. ಮೈಸೂರು ಕಾಂಗ್ರೆಸ್ ಭವನಕ್ಕೆ ಎಲ್ಲಾ ಯೋಜನೆ ಅಂತಿಮ ಮಾಡಿ ಭೂಮಿಪೂಜೆ ಕೂಡ ನೆರವೇರಿಸಿದ್ದೇನೆ” ಎಂದು ಹೇಳಿದರು.

“ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರುಗಳು ಅಡಿಪಾಯ ಹಾಕಲು ಕಾಯಲು ಹೋಗಬೇಡಿ. ಏಕೆಂದರೆ ಮಲ್ಲಿಕಾರ್ಜುನ ಖರ್ಗೆ ಅವರು ಹಾಗು ರಾಹುಲ್‌ ಗಾಂಧಿಯವರು ಬೆಂಗಳೂರಿನಲ್ಲಿ ವರ್ಚುಯಲ್ ಆಗಿ ಎಲ್ಲಾ ಕಾಂಗ್ರೆಸ್ ಭವನಗಳ ಅಡಿಪಾಯಗಳಿಗೆ ಚಾಲನೆ ನೀಡಲಿದ್ದಾರೆ. ಆದರೆ ಎಲ್ಲಾ ತಯಾರಿಗಳನ್ನು ಈಗಲೇ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ” ಎಂದರು.

ಬಿಜೆಪಿ ಆಡಳಿತ ರಾಜ್ಯಗಳಲ್ಲಿ ವಿಬಿ ಜಿ ರಾಮ್ ಜಿ ಯೋಜನೆ ಜಾರಿ ಅಸಾಧ್ಯ

“ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದು ಇಂದಿಗೆ 101 ವರ್ಷವಾಗಿದೆ. ಕಳೆದ ವರ್ಷ ಬೆಳಗಾವಿಯಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದೆವು. ಇಂತಹ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವ ಕೆಲಸ ಮಾಡಲಾಗುತ್ತಿದೆ. ನಿನ್ನೆ ನಡೆದ ಸಿಡ್ಬ್ಲ್ಯೂಸಿ ಸಭೆಯಲ್ಲಿ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ಗ್ರಾಮೀಣ ಭಾಗದಲ್ಲಿ ಬಡವರಿಗೆ ಉದ್ಯೋಗ ನೀಡುವ ಮನರೇಗಾ ಯೋಜನೆ ತಂದಿತ್ತು. ಕೇಂದ್ರ ಬಿಜೆಪಿ ಸರ್ಕಾರ ಈ ಯೋಜನೆಯನ್ನು ಹತ್ಯೆ ಮಾಡಲು ಮುಂದಾಗಿದೆ. ಈ ಯೋಜನೆಯಲ್ಲಿ 60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡಿಕೊಳ್ಳುವ ಬದಲಾವಣೆ ತಂದಿದ್ದಾರೆ. ಬರಗಾಲ ಪ್ರದೇಶದಲ್ಲಿ ವರ್ಷಕ್ಕೆ 150 ಮಾನವ ದಿನಗಳ ಉದ್ಯೋಗ ನೀಡಲು ಕಾನೂನಿನಲ್ಲಿ ಸೂಚಿಸಲಾಗಿತ್ತು. ಆದರೆ ಅವರು ನಮ್ಮ ರಾಜ್ಯಕ್ಕೆ ಬರಗಾಲ ಇದ್ದಾಗಲೂ ನೀಡಲಿಲ್ಲ, ಕೋವಿಡ್ ಸಮಯದಲ್ಲೂ ನೀಡಲಿಲ್ಲ” ಎಂದರು.

“ಕೇಂದ್ರ ಸರ್ಕಾರದ ತರಲಾಗಿರುವ 60:40 ಅನುಪಾತದ ನೂತನ ತಿದ್ದುಪಡಿ ಯೋಜನೆಯನ್ನು ಬಿಜೆಪಿ ಆಡಳಿತ ರಾಜ್ಯಗಳಲ್ಲೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ. ಈ ಹಿಂದೆ ಮನರೇಗಾ ಯೋಜನೆಯನ್ನು ನನ್ನ ತಾಲ್ಲೂಕಿನಲ್ಲಿ ಬಹಳ ಯಶಸ್ವಿಯಾಗಿ ಅಷ್ಠಾನಕ್ಕೆ ತರಲಾಗಿತ್ತು. ಇಡೀ ದೇಶದಲ್ಲಿ ಕನಕಪುರ ಕ್ಷೇತ್ರದಲ್ಲಿ ಅತಿ ಹೆಚ್ಚು ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಲಾಗಿದೆ. ನಾನು ಇದರಲ್ಲಿ ಹಣ ಲೂಟಿ ಮಾಡಿರಬಹುದು ಎಂದು ಪರಿಶೀಲನೆ ಮಾಡಲು ಕೇಂದ್ರ ಸರ್ಕಾರ ಸುಮಾರು ಹತ್ತು ತಂಡಗಳನ್ನು ಕಳುಹಿಸಿ ತನಿಖೆ ಮಾಡಿಸಿತ್ತು. ನಂತರ ಕೇಂದ್ರ ಸರ್ಕಾರ ನಮ್ಮ ಕ್ಷೇತ್ರಕ್ಕೆ ಪ್ರಶಸ್ತಿಯನ್ನು ನೀಡಿದೆ. ನನಗೆ ಪ್ರಶಸ್ತಿ ನೀಡಬೇಕಾಗುತ್ತದೆ ಎಂದು ಪಂಚಾಯ್ತಿ ಅಧ್ಯಕ್ಷರನ್ನು ಕರೆದು ಅವರಿಗೆ ಪ್ರಶಸ್ತಿ ಕೊಟ್ಟರು” ಎಂದು ಹೇಳಿದರು.

“ಈ ಯೋಜನೆ ಮೂಲಕ ನನ್ನ ಕ್ಷೇತ್ರದಲ್ಲಿ 57 ಸಾವಿರ ರೈತ ಕುಟುಂಬಗಳಿಗೆ ದನದ ಕೊಟ್ಟಿಗೆ ಕಟ್ಟಿಕೊಳ್ಳಲು ಅನುದಾನ ನೀಡಲಾಗಿದೆ. ಕೋಳಿ ಸಾಕಾಣಿಕೆ ಶೆಡ್ ಗಳು, ಇಂಗುಗುಂಡಿ ನಿರ್ಮಾಣಕ್ಕೆ ಸೇರಿದಂತೆ ಹೀಗೆ ಅನೇಕ ಯೋಜನೆಗಳಿಗೆ ನರೇಗಾವನ್ನು ಬಳಸಿಕೊಳ್ಳಲಾಗಿದೆ. ಸುಮಾರು 200 ಕೋಟಿಗೂ ಹೆಚ್ಚು ಹಣವನ್ನು ಒಂದೇ ತಾಲ್ಲೂಕಿಗೆ ಬಳಸಿಕೊಳ್ಳಲಾಗಿದೆ. ಇಂತಹ ಕಾರ್ಯಕ್ರಮವನ್ನು ಮುಗಿಸುತ್ತಿದ್ದಾರೆ” ಎಂದು ತಿಳಿಸಿದರು.

ಇಂದಿನಿಂದ ಜಿಬಿಎ ಚುನಾವಣೆ ಟಿಕೆಟ್ ಆಕಾಂಕ್ಷಿ ಅರ್ಜಿ ಬಿಡುಗಡೆ:

“ಮೀಸಲಾತಿ ನಿಗದಿಯಾದ ಮೇಲೆ ಜಿಬಿಎ ಚುನಾವಣೆಗೆ ತಯಾರಿ ನಡೆಸಿದರಾಯಿತು ಎಂದುಕೊಂಡರೆ ನೀವುಗಳು ಗೆಲ್ಲಲು ಸಾಧ್ಯವಿಲ್ಲ. ‌ಏಕೆಂದರೆ ನೀವು ಎಷ್ಟೇ ದೊಡ್ಡ ನಾಯಕರಾದರೂ ಸಹ ಎಲ್ಲಾ ನಿಗದಿಯಾದಾಗ ಮಾಡುತ್ತೇನೆ ಎಂದರೆ ಈ ಡಿ.ಕೆ.ಶಿವಕುಮಾರ್ ನಿಮ್ಮನ್ನು ಗುರುತಿಸುವುದಿಲ್ಲ. ಇಂದಿನಿಂದ ಆಕಾಂಕ್ಷಿ‌ ಅಭ್ಯರ್ಥಿಗಳ ಅರ್ಜಿಯನ್ನು ಬಿಡುಗಡೆ ಮಾಡಲಾಗುತ್ತಿದೆ” ಎಂದರು.

“ಸಾಮಾನ್ಯ ಅಭ್ಯರ್ಥಿಗಳಿಗೆ 50 ಸಾವಿರ, ಪರಿಶಿಷ್ಟ ಅಭ್ಯರ್ಥಿಗಳಿಗೆ 25 ಸಾವಿರ. ಹಣ ಕಟ್ಟಡ ನಿಧಿಗೆ ಹೋಗಲಿದೆ. ಏಕೆಂದರೆ ಜಿಲ್ಲಾ ಕಚೇರಿ ನಿರ್ಮಾಣಕ್ಕೆ 20 ಕೋಟಿ, ರಾಜ್ಯ ಕಚೇರಿ ನಿರ್ಮಾಣಕ್ಕೆ 60 ಕೋಟಿ ‌ಖರ್ಚಾಗಲಿದೆ.‌ ತಾಲ್ಲೂಕು ಕಚೇರಿಗಳ ನಿರ್ಮಾಣಕ್ಕೂ ಕೆಪಿಸಿಸಿಯಿಂದ ಹಣ ನೀಡಬೇಕಲ್ಲವೇ” ಎಂದರು.

“ಎಂಎಲ್ ಎ ಚುನಾವಣೆ ವೇಳೆ 2 ಲಕ್ಷ ಹಣ ನಿಗದಿ ಮಾಡಲಾಗಿತ್ತು. ಇದರಿಂದ 20 ಕೋಟಿ ಹಣ ಸಂಗ್ರಹವಾಯಿತು.‌ ಇದರಿಂದ ಪಕ್ಷದ ಪರವಾಗಿ ಜಾಹಿರಾತು ನೀಡಲು ಸಾಧ್ಯವಾಯಿತು. ಮಹಿಳೆಯರಿಗೆ ರಿಯಾಯಿತಿ ಇಲ್ಲ.‌ ಒಂದು ಚುನಾವಣೆಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ತಿಳಿದಿದೆ” ಎಂದರು.

ಮಹಿಳೆಯರಿಗೆ ಹಾಗೂ ಓಬಿಸಿಗಳಿಗೆ ರಿಯಾಯಿತಿ ನೀಡಿ ಎಂದು ಸಭಿಕರು ಕೂಗಿದ ವೇಳೆಯಲ್ಲಿ, “ಈಗಾಗಲೇ ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ, ಉಚಿತ ‌ಬಸ್ ನೀಡಲಾಗುತ್ತಿದೆ. ಈ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ಸಹ ಓಬಿಸಿ, ಒಕ್ಕಲಿಗರು ಓಬಿಸಿ ಎಂದು ತಿಳಿದಿದೆಯೇ? ಲಿಂಗಾಯತರು ಓಬಿಸಿ, ಆದಾಯ ಇಲ್ಲದ ಬ್ರಾಹ್ಮಣರು ಓಬಿಸಿ” ಎಂದರು.

ಸಿಎಂ ಹಾಗೂ ಜಾರ್ಜ್ ಹೇಳುತ್ತಿದ್ದಾರೆ ಎಂದು ಮಹಿಳೆಯರಿಗೆ 25 ಸಾವಿರ

ಇದೇ ವೇಳೆ ವೇದಿಕೆಯಲ್ಲಿದ್ದ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು ಮಹಿಳೆಯರಿಗೆ 25 ಸಾವಿರ ಇರಲಿ ಎಂದರು. ಆಗ ಡಿಸಿಎಂ ಶಿವಕುಮಾರ್ ಅವರು “ಸಿಎಂ ಹಾಗೂ ಜಾರ್ಜ್ ಹೇಳುತ್ತಿದ್ದಾರೆ ಎಂದು ಮಹಿಳೆಯರಿಗೆ 25 ಸಾವಿರ ನಿಗದಿ ಮಾಡಲಾಗುತ್ತಿದೆ. ನಿಮ್ಮ ದುಡ್ಡು ನನಗೆ ಬೇಡ ಮುಂದಿನ ಜನವರಿ 15 ನೇ ತಾರೀಕಿನ ಒಳಗೆ ಅರ್ಜಿ ಹಾಕಬೇಕು. 369 ವಾರ್ಡ್ ಗಳಿಂದ ಶೇ.50 ರಷ್ಟು ಮೀಸಲಾತಿ ನೀಡಲಾಗಿದೆ. ಒಂದೊಂದು ಕ್ಷೇತ್ರದಿಂದ 10 ಮಂದಿ‌‌ ಮಹಿಳೆಯರಾದರೂ ಅರ್ಜಿ ಸಲ್ಲಿಕೆ ಮಾಡಬೇಕು. ಯಾರೇ ಆದರೂ ಚೆನ್ನಾಗಿ ಕೆಲಸ ಮಾಡಿರಬೇಕು. ಅಂತಹವರಿಗೆ ಪ್ರಾಮುಖ್ಯತೆ ನೀಡಲಾಗುವುದು” ಎಂದರು.

“ಯಾರು ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಾರೋ ಅವರಿಗೆ ಅವಕಾಶ. ಸಿದ್ದರಾಮಯ್ಯ, ಶಿವಕುಮಾರ್ ಹಿಂದೆ ತಿರುಗಿದರೆ ಅವಕಾಶವಿಲ್ಲ‌. ಕೆಲಸ ಮಾಡಿದವರಿಗೆ ಹೆಚ್ಚು ಆದ್ಯತೆ” ಎಂದರು.

ವಿದ್ಯಾರ್ಥಿ ಚುನಾವಣೆ ನಡೆಸುವ ಬಗ್ಗೆ ಸಮಿತಿ ರಚನೆ:

“ವಿದ್ಯಾರ್ಥಿ ಚುನಾವಣೆ ಹೇಗೆ ನಡೆಸಬೇಕು ಎಂದು ತೀರ್ಮಾನಿಸಲು ಹೊಸ ಸಮಿತಿ ರಚನೆ ಮಾಡಲಾಗಿದೆ. ಇದರಿಂದ ಹೊಸ ನಾಯಕರನ್ನು ಬೆಳಕಿಗೆ ತರಲಾಗುವುದು. ಶರಣ ಪ್ರಕಾಶ್ ಪಾಟೀಲ್, ಡಾ.ಸುಧಾಕರ್, ಸಲೀಂ ಅಹಮದ್, ಪುಟ್ಟಣ್ಣ, ಎನ್ ಎಸ್ ಯುಐ ಮಾಜಿ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು ಹೀಗೆ ಒಂಬತ್ತು ಜನರ ಸಮಿತಿ ರಚನೆ ಮಾಡಲಾಗಿದೆ. ಇವರು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದ್ದಾರೆ. ನಾವುಗಳು ಸಹ ಈ ಹಿಂದೆ ವಿದ್ಯಾರ್ಥಿ ಚುನಾವಣೆಗಳ ಮೂಲಕವೇ ರಾಜಕೀಯಕ್ಕೆ ಬಂದವರು. ಆನಂತರ ಗಲಾಟೆಗಳು ಹೆಚ್ಚಾದ ಕಾರಣಕ್ಕೆ ರಂಗನಾಥ್ ಅವರು ಇದನ್ನು ನಿಲ್ಲಿಸಿಬಿಟ್ಟರು. ಈಗ ಇದರ ಅವಶ್ಯಕತೆ ಹೆಚ್ಚು ಕಾಣುತ್ತಿದೆ” ಎಂದರು.

“140 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷ ಸ್ಥಾಪನೆಯಾಯಿತು. ಈ ಶುಭ ಸಂದರ್ಭದಲ್ಲಿ ರಾಜ್ಯ ಹಾಗೂ ರಾಷ್ಟ್ರದ ಎಲ್ಲಾ ಕಾಂಗ್ರೆಸಿಗರಿಗೆ ಶುಭಕೋರುತ್ತೇನೆ. ಇಂದು ಸೇವಾದಳದ ಸಂಸ್ಥಾಪನಾ ದಿನವೂ ಆಗಿದೆ. ಸೇವಾದಳ ಸೇವೆಯ ಉದ್ದೇಶವಾಗಿದೆ. ಇಂದಿರಾ ಗಾಂಧಿ ಅವರು ಪ್ರಧಾನಮಂತ್ರಿಯಾಗಿದ್ದಾಗ ಸೇವಾದಳದ ಅಧ್ಯಕ್ಷರಾಗಿ ಇದನ್ನು ವಿಭಾಗವಾನ್ನಾಗಿ ಪರಿಗಣಿಸಿದರು” ಎಂದರು.

“ಇಂದು ನಾವೆಲ್ಲರೂ ಕಾಂಗ್ರೆಸಿಗರೆಂದು ಗುರುತಿಸಿಕೊಳ್ಳುತ್ತೇವೆ. ನಾವು ಈ ದೇಶಕ್ಕೆ ಸ್ವಾತಂತ್ರ್ಯ ಹೋರಾಟಕ್ಕಾಗಿ ಹುಟ್ಟುಕೊಂಡ ಪಕ್ಷ. ಈ ದೇಶದ ಇತಿಹಾಸ, ದೇಶಗೃದ ಒಗ್ಗಟ್ಟಿಗೆ ಶ್ರಮಿಸಿರುವ ಪಕ್ಷ. ವಿವಿಧ ಭಾಷೆ, ಸಮುದಾಯಗಳನ್ನು ತ್ರಿವರ್ಣ ಧ್ವಜದ ಕೆಳಗೆ ಒಂದಾಗಿ ಇಟ್ಟ ಪಕ್ಷ ಕಾಂಗ್ರೆಸ್. ಇಂತಹ ಇತಿಹಾಸವನ್ನು ಕಾಂಗ್ರೆಸಿಗರು ಮಾತ್ರ ಹೇಳಲು ಸಾಧ್ಯವೇ ಹೊರತು, ಬಿಜೆಪಿಯವರಿಗೆ ಇತಿಹಾಸ ಹೇಳಲು ಸಾಧ್ಯವಿಲ್ಲ” ಎಂದರು.

“ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಎಲ್ಲಾ ವರ್ಗದ ಬಗ್ಗೆ ಚಿಂತನೆ ಮಾಡಿದೆ. ಕಾರ್ಮಿಕರು, ರೈತರು, ವರ್ಕತಕರು, ವಿದ್ಯಾರ್ಥಿಗಳು ಮಕ್ಕಳಿಂದ ವಯಸ್ಸಾದವರವರೆಗೆ ಕಾರ್ಯಕ್ರಮ ಕೊಟ್ಟಿದರೆ ಅದು ಕಾಂಗ್ರೆಸ್ ಸಕ್ತಾರ ಮಾತ್ರ. ನೆಹರು ಅವರು ಪಂಚವಾರ್ಷಿಕ ಯೋಜನೆ ಮಾಡಿದರು. ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದರು. ಆಮೂಲಕ ಜನರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ ಒದಗಿಸುವಂತಾಗಿದೆ. ಉಳಉವವನೆ ಭೂಮಿಯ ಒಡೆಯ ಮಾಡಿ ಲಕ್ಷಾಂತರ ಜನರಿಗೆ ಬದುಕು ಕೊಟ್ಟಿದ್ದೇವೆ. ಮನಮೋಹನ್ ಸಿಂಗ್ ಅವರ ಸರ್ಕಾರದಲ್ಲಿ ಅರಣ್ಯ ಹಕ್ಕು ಕಾಯ್ದೆ ತಂದ್ದಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ಸಂವಿಧಾನಬದ್ಧವಾಗಿ ನೀಡಿದ್ದೇವೆ” ಎಂದರು.

ಕಾಂಗ್ರೆಸ್ ಕಾರ್ಯಕ್ರಮ ಬದಲಿಸಲು ಅಸಾಧ್ಯ:

“ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಸಣ್ಣ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ಕೊಡಲಾಯಿತು. ಶಾಲೆಯಿಂದ ವಿಮುಖರಾಗುತ್ತಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲಾಯಿತು. ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮ ಮಾಡಲಾಗುತ್ತಿದೆ. ಸಣ್ಣ ಮಕ್ಕಳಿಗೆ ಅಂಗನವಾಡಿ ಕಾರ್ಯಕ್ರಮ ರೂಪಿಸಿದ್ದು ಇಂದಿರಾ ಗಾಂಧಿ ಅವರು. ಇವರು ವೃದ್ಧಾಪ್ಯ ವೇತನ ತಂದರು, ಮನಮೋಹನ್ ಸಿಂಗ್ ಅವರು ಶಿಕ್ಷಣದ ಹಕ್ಕು ಕೊಟ್ಟರು. ಹೀಗೆ ಕಾಂಗ್ರೆಸ್ ಸರ್ಕಾರ ತಂದ ಯೋಜನೆಗಳನ್ನು ಬೇರೆ ಸರ್ಕಾರಗಳು ತೆಗೆದುಹಾಕಲು ಸಾಧ್ಯವಾಯಿತೇ? ಆಮೂಲಕ ದೇಶದ ಜನರ ಬದುಕಿನಲ್ಲಿ ಬದಲಿಸಿದ್ದೇವೆ. ಆಹಾರ ಭದ್ರತಾ ಕಾಯ್ದೆ, ಶೈಕ್ಷಣಿಕ ಹಕ್ಕು, ಮಾಹಿತಿ ಹಕ್ಕನ್ನು ಯುಪಿಎ ಸರ್ಕಾರದಲ್ಲಿ ಜಾರಿಗೆ ತರಲಾಯಿತು. ಇದರ ಆಧಾರದ ಮೇಲೆ ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆ ಜಾರಿಗೆ ತಂದರು. ಈಗ ಈ ಸರ್ಕಾರದಲ್ಲಿ ಐದು ಗ್ಯಾರಂಟಿ ನೀಡಿದ್ದೇವೆ. ನಮ್ಮ ಈ ಗ್ಯಾರಂಟಿ ಯೋಜನೆಗಳನ್ನು ಯಾರು ಎಷ್ಟೇ ತಿಪ್ಪರಲಾಗ ಹಾಕಿದರೂ ಯಾವುದೇ ಸರ್ಕಾರ ತೆಗೆದುಹಾಕಲು ಸಾಧ್ಯವಿಲ್ಲ” ಎಂದರು.

“ಪ್ರಧಾನಮಂತ್ರಿಗಳು ಈ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದರು. ನಂತರ ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಬಿಹಾರ ರಾಜ್ಯದ ಚುನಾವಣೆವರೆಗೂ ಇದೇ ಯೋಜನೆಗಳನ್ನು ನಕಲು ಮಾಡಿದರು. ಬಿಹಾರದಲ್ಲಿ ಚುನಾವಣೆಗೆ ಒಂದು ತಿಂಗಳು ಮುಂಚಿತವಾಗಿ ಮಹಿಳೆಯರ ಖಾತೆಗೆ 10 ಸಾವಿರ ಹಾಕಿದರು. ಬೆಲೆ ಏರಿಕೆ ಗಗನಕ್ಕೇರಿದು, ಆದಾಯ ಪಾತಾಳಕ್ಕೆ ಕುಸಿಯುತ್ತಿದೆ ಇದನ್ನು ತಪ್ಪಿಸಲು ನಾವು ಈ ಯೋಜನೆ ಜಾರಿಗೆ ತಂದೆವು. ಡುಗೆ ಅನಿಲ 400 ರೂ. ನಿಂದ 1000 ರೂ.ಗೆ ಏರಿಕೆಯಾಯಿತು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಪದಾರ್ಥ ಬೆಲೆ ಹೆಚ್ಚಾಯಿತು. ಹೀಗಾಗಿ ಐದು ಗ್ಯಾರಂಟಿ ಯೋಜನೆ ಮೂಲಕ ಬಡವರಿಗೆ ಪ್ರತಿ ತಿಂಗಳು ಸುಮಾರು 5 ಸಾವಿರ ಆರ್ಥಿಕ ನೆರವು ನೀಡಲು ಮುಂದಾದೆವು. ನಮ್ಮ ಈ ಐತಿಹಾಸಿಕ ತೀರ್ಮಾನ ದೇಶಕ್ಕೆ ಮಾದರಿಯಾಗಿದೆ” ಎಂದರು.

“ಗ್ಯಾರಂಟಿ ಯೋಜನೆಗಳಿಗೆ ನಮ್ಮ ಸರ್ಕಾರ 1 ಲಕ್ಷ ಕೋಟಿ ವೆಚ್ಚ ಮಾಡಿದೆ. ಇದರ ಸಂಭ್ರಮಾಚರಣೆ ಮಾಡಬೇಕು. ಇದನ್ನು ಬೆಂಗಳೂರಿನಲ್ಲಿ ಮಾಡುವುದಲ್ಲ, ಪ್ರತಿ ಪಂಚಾಯ್ತಿಯಲ್ಲಿ ನಮ್ಮ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಲು ಸಜ್ಜಾಗಬೇಕು” ಎಂದರು.

“ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ‌ ಹೆಗಲ ಮೇಲೆ ರಾಷ್ಟ್ರಧ್ವಜವಿದೆ. ಬಿಜೆಪಿಯವರಿಗೆ ಇದು ಸಾಧ್ಯವಿಲ್ಲ. ಒಬ್ಬ ಕಾರ್ಯಕರ್ತ ಸತ್ತರೆ ರಾಷ್ಟ್ರಧ್ವಜ ಪ್ರತಿನಿಧಿಸುವ ನೂಲನ್ನು ಹಾಕಿ ಗೌರವ ಸಲ್ಲಿಸುವ ಅವಕಾಶವಿದೆ. ತಳಮಟ್ಟದಲ್ಲಿ ನಾಯಕರನ್ನು ಸೃಷ್ಟಿ ಮಾಡಲು ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಅವಕಾಶ ನೀಡಿದೆ. ಇಲ್ಲಿ ಶೇ.50 ರಷ್ಟು ಹೆಣ್ಣು ಮಕ್ಕಳಿಗೆ ಮೀಸಲಾತಿ ನೀಡಲಾಗಿದೆ. ದೇಶದಾದ್ಯಂತ ಮಹಿಳೆಯರಿಗೆ ಶೇ33 ರಷ್ಟು ಮೀಸಲಾತಿ ನೀಡುವ ಬಿಲ್ ಅನ್ನು ರಾಜ್ಯಸಭೆಯಲ್ಲಿ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಮಂಡಿಸಲಾಯಿತು” ಎಂದರು.

Related Articles

Back to top button