
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ್ ಇದೇ ಮೊದಲ ಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿದ್ದು, ಈ ವೇಳೆ ಮೆಟ್ರೋದಲ್ಲಿ ಪ್ರಯಾಣಿಸಿ ಸಿಎಂ ಗಮನ ಸೆಳೆದರು.
ಬೆಂಗಳೂರಿನ ಸದಾಶಿವನಗರ ನಿವಾಸದಿಂದ ವಿಧಾನಸೌಧದ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಡಿ.ಕೆ.ಶಿವಕುಮಾರ್, ಅಲ್ಲಿಂದ ಕನಕಪುರ ರಸ್ತೆವರೆಗೂ ಮೆಟ್ರೋದಲ್ಲಿ ತೆರಳಿದರು. ಮೆಟ್ರೋದಲ್ಲಿ ಪ್ರಯಾಣಿಕರು ಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಸಂತಸ ವ್ಯಕ್ತಪಡಿಸಿದರು.
ಸಾರ್ವಜನಿಕರಿಗೆ ಜೀರೋ ಟ್ರಾಫಿಕ್ನಿಂದ ಉಂಟಾಗುವ ವಾಹನ ಸಂಚಾರದ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದರು.

ವಿಧಾನಸೌಧದ ಎದುರಿನ ಮೆಟ್ರೋ ನಿಲ್ದಾಣದಿಂದ ಕನಕಪುರ ರಸ್ತೆ ಕೊನೆಯ ಮೆಟ್ರೋ ನಿಲ್ದಾಣದವರೆಗೆ ಸಿಎಂ ಮೆಟ್ರೋ ರೈಲಿನಲ್ಲಿ ಸಂಚರಿಸಿದ್ದು, ಅಲ್ಲಿಂದ ತಮ್ಮ ವಾಹನದಲ್ಲಿ ಕನಕಪುರಕ್ಕೆ ತೆರಳಿದ್ದಾರೆ. ಹಾರೋಹಳ್ಳಿ ಹಾಗೂ ಕನಕಪುರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಜನರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ‘ಕೃತಜ್ಞತೆ ಸಮರ್ಪಣಾ ಪ್ರವಾಸ’ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಾಮಾನ್ಯವಾಗಿ ಮುಖ್ಯಮಂತ್ರಿ ನಿವಾಸ ಸದಾಶಿವನಗರದಿಂದ ಕನಕಪುರ ರಸ್ತೆವರೆಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಜಾರಿಗೊಳಿಸಿದರೆ ಸಾರ್ವಜನಿಕ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದನ್ನು ಪರಿಗಣಿಸಿ, ಜನಸ್ನೇಹಿ ಕ್ರಮವಾಗಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.


