Belagavi NewsBelgaum NewsPolitics

*ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿಯ ಬೆಳಗಾವಿ ಚಲೋ ಬಗ್ಗೆ ಕೇಳಿದಾಗ, ಈಗ ಆ ಮಾತು ಏಕೆ. ಯಾರಾದರೂ ಕೆಡಿಸುವ ಪ್ರಯತ್ನ ಮಾಡಲಿ. ಕಾಂಗ್ರೆಸ್ ಪಕ್ಷದ ಶಕ್ತಿ ಅವರಿಗೂ ಗೊತ್ತಿದೆ. ನಮಗೂ ಗೊತ್ತಿದೆ. ಮೊದಲು ಐತಿಹಾಸಿಕ ಕಾರ್ಯಕ್ರಮ ಮಾಡುವ ಮೂಲಕ ಇತಿಹಾಸದ ಪುಟ ಸೇರೋಣ ಎಂದು ತಿಳಿಸಿದರು.

ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿದ್ದು, ಸಾರ್ವಜನಿಕರು ಈ ವೈಭವವನ್ನು ಕಣ್ತುಂಬಿಕೊಳ್ಳಬೇಕು ಎಂದು ತಿಳಿಸಿದರು.

Home add -Advt

“ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರು, ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ. ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎನ್ನುವುದನ್ನು ಗಮನದಲ್ಲಿಟ್ಟು ಕೊಂಡು ಕಾರ್ಯಕ್ರಮ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡುತ್ತೇನೆ” ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎಂದು ಎನಿಸಿಕೊಂಡವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು. ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಜನರನ್ನು ಕರೆತನ್ನಿ ಎಂದು ಹೇಳುವುದಿಲ್ಲ. ನೂರು ಜನರನ್ನು ಕರೆದುಕೊಂಡು ಬಂದರೂ ಸಾಕು. ಕಾರ್ಯಕ್ರಮ ನಡೆಯುವ ಜಾಗಗಳಿಗೆ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲನೆ ಮಾಡುತ್ತಿದ್ದೇನೆ. ಮಂಗಳವಾರ (ಇಂದು) ಎಲ್ಲಾ ಸಿದ್ಧತೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಕಾರ್ಯಕ್ರಮಗಳ ವಿವರದ ಬಗ್ಗೆ ಕೇಳಿದಾಗ, 26ರಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. 26ರಂದು ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. 27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಅಂದು ಸುವರ್ಣ ಸೌಧದಲ್ಲಿ ಫೋಟೋ ಸೆಷನ್, ಭೋಜನ ಕೂಟವಿದೆ. 27ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ ಎಂದು ತಿಳಿಸಿದರು.

Related Articles

Back to top button