Kannada NewsKarnataka NewsLatestPolitics

*ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರಿಗೆ ಗುಡ್ ನ್ಯೂಸ್*

ಶೀಘ್ರದಲ್ಲೇ ಕಾವೇರಿ ನೀರು ಪೂರೈಕೆಗೆ ಡಿಸಿಎಂ ಸೂಚನೆ

ಪ್ರಗತಿವಾಹಿನಿ ಸುದ್ದಿ: ಮೂರ್ನಾಲ್ಕು ತಿಂಗಳುಗಳಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರಿಗೆ ಕುಡಿಯಲು ಕಾವೇರಿ ನೀರನ್ನು ಪೂರೈಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಲಚೇನಹಳ್ಳಿಯಲ್ಲಿ ಗುರುವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಸದರಾದ ಡಿ.ಕೆ. ಸುರೇಶ್ ಅವರು ಈ ಭಾಗದ ಟ್ರಾಫಿಕ್ ಸಮಸ್ಯೆ ಹಾಗು ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಈ ಕ್ಷೇತ್ರದ ಜನರಿಗೆ ಕುಡಿಯಲು ಕಾವೇರಿ ನೀರನ್ನು ಪೂರೈಸಬೇಕು ಎಂಬುದು ಸುರೇಶ್ ಅವರ ಸಂಕಲ್ಪ.

ಬಿಡಿಎ ಹಾಗೂ ಬಿಡಬ್ಲ್ಯೂಎಸ್ಎಸ್ ಬಿ ಅಧಿಕಾರಿಗಳು ಈ ಭಾಗದ ಜನರಿಗೆ ಕುಡಿಯಲು ಕಾವೇರಿ ನೀರು ಪೂರೈಸುವತ್ತ ಆದ್ಯತೆ ನೀಡಬೇಕು ಎಂದು ಸೂಚಿಸುತ್ತೇನೆ ಎಂದರು.

ಎಲ್ಲೂ ನ್ಯಾಯ ಸಿಗದಿದ್ದಾಗ ಮಾತ್ರ ಜನ ನಮ್ಮ ಬಳಿ ಬರುತ್ತಾರೆ. ಹೀಗಾಗಿ ಜನರ ಸಮಸ್ಯೆಗೆ ಅಧಿಕಾರಿಗಳಿಂದ ಪರಿಹಾರ ಕೊಡಿಸುವ ಉದ್ದೇಶದಿಂದ ನಾನು ಇಂದು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ಈ ತಿಂಗಳು ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಸಮಸ್ಯೆ ಬಗೆಹರಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಿಮ್ಮ ಸಮಸ್ಯೆ ಆಲಿಸಲು ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಯ 500 ಅಧಿಕಾರಿಗಳು ಇಲ್ಲಿದ್ದಾರೆ. ನೀವು ನನಗೆ ಅಹವಾಲು ನೀಡುವುದಕ್ಕಿಂದ ಮುಖ್ಯವಾಗಿ ನೀವು ನಿಮ್ಮ ಅಹವಾಲುಗಳನ್ನು ನೋಂದಣಿ ಮಾಡಿಸಬೇಕು. ಜತೆಗೆ ನಿಮ್ಮ ದೂರವಾಣಿ ಸಂಖ್ಯೆಯನ್ನು ಕೂಡ ನಮೂದಿಸುವುದು ಬಹಳ ಮುಖ್ಯ. ಇದರಿಂದ ಅಧಿಕಾರಿಗಳು ಮತ್ತೆ ನಿಮ್ಮನ್ನು ಸಂಪರ್ಕ ಮಾಡಲು ನೆರವಾಗುತ್ತದೆ.

ಒಂದೇ ದಿನದಲ್ಲಿ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಲು ಸಾಧ್ಯವಾಗದಿದ್ದರೂ ಕಾನೂನು ಚೌಕಟ್ಟಿನಲ್ಲಿ ನಿಮಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಜನ ಸೇವೆ ಜನಾರ್ದನ ಸೇವೆ ಎಂಬ ಮಾತನ್ನು ನಂಬಿ ಅದರಂತೆ ನಾವು ಕೆಲಸ ಮಾಡುತ್ತಿದ್ದೇವೆ. ಶಿವಕುಮಾರ ಸ್ವಾಮೀಜಿಗಳು, ‘ದೊಡ್ಡವನಾಗಲು ಪ್ರಯತ್ನ ಮಾಡಬೇಡ, ಒಳ್ಳೆಯವನಾಗಲು ಪ್ರಯತ್ನ ಮಾಡು, ಆಗ ತಂತಾನೇ ದೊಡ್ಡವನಾಗುತ್ತೀಯಾ’ ಎಂದು ಹೇಳಿದ್ದಾರೆ. ನಮ್ಮ ಸರ್ಕಾರ ಜನಪರ ಸರ್ಕಾರವಾಗಿ ಕೆಲಸ ಮಾಡುತ್ತಿದೆ.

ಕೃಷ್ಣಪ್ಪ ಅವರ ಕ್ಷೇತ್ರದಲ್ಲಿರುವ 18 ಕಿ. ಮೀ ರಸ್ತೆಯ ಒತ್ತಡ ಕಡಿಮೆ ಮಾಡಲು ಪರ್ಯಾಯ ರಸ್ತೆ ಮಾಡಬೇಕಿದೆ. ಕನಕಪುರ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ ಮಧ್ಯೆ ಹೊಸ ರಸ್ತೆ ಯೋಜನೆಗೆ ಈ ಹಿಂದೆ ಬಿಡಿಎ ನೋಟಿಫಿಕೇಶನ್ ಆಗಿದ್ದು ಅದಕ್ಕೆ ಮರುಜೀವ ನೀಡಲು ಪ್ರಯತ್ನ ಆರಂಭವಾಗಿದೆ ಎಂದರು.

ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಲ್ಲಿ 1.04 ಕೋಟಿ ಜನರಿಗೆ ಪ್ರತಿ ತಿಂಗಳು ತಲಾ 2 ಸಾವಿರ ಹಣ ತಲುಪುತ್ತಿದೆ. ಬೆಸ್ಕಾಂ ನಲ್ಲಿ 80 ಲಕ್ಷ ಸಂಪರ್ಕಗಳಿದ್ದು, 67 ಲಕ್ಷ ಜನರು ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಆ ಮೂಲಕ ಬೆಂಗಳೂರಿನ
ಶೇ. 74 ರಷ್ಟು ಜನರು ಇದರ ಉಪಯೋಗ ಪಡೆದಿದ್ದಾರೆ. ಇದಕ್ಕಾಗಿ ಸರ್ಕಾರ 362 ಕೋಟಿ ಹಣ ನೀಡಿದೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button