ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಪಾಕಿಸ್ತಾನ ಪರ ಘೋಷಣೆ ಕೂಗುತ್ತಿದ್ದ ಇಬ್ಬರನ್ನು ಬೆಳಗಾವಿಯ ಕಾಮತ್ ಗಲ್ಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭಾನುವಾರ ಸಂಜೆ ಈ ಘಟನೆ ನಡೆದಿದ್ದು, 4-5 ಜನರ ಗುಂಪಿನಲ್ಲಿ ಇಬ್ಬರು ಪಾಕಿಸ್ತಾನ ಪರ ಘೋಷಣೆ ಕೂಗಿದರೆನ್ನಲಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮುಂದುವರಿದಿದೆ.
ರಾಮದುರ್ಗದಲ್ಲಿ ಮಾಜಿ ಶಾಸಕ ಅಶೋಕ ಪಟ್ಟಣ ಅವರ ಬೆಂಬಲಿಗ ಶಫಿ ಬೆಣ್ಣಿ ಎನ್ನುವಾತ ಪಾಕಿಸ್ತಾನ ಪರ ವಾಟ್ಸಪ್ ಸ್ಟೇಟಸ್ ಹಾಕಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಭಾರೀ ವಿವಾದ ಸೃಷ್ಟಿಯಾಗಿದೆ. ಆತ ತನ್ನ ಮೊಬೈಲ್ ಹ್ಯಾಕ್ ಮಾಡಲಾಗಿದೆ ಎನ್ನುವ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಮಧ್ಯೆ ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಗ್ಗೆ ಮತ್ತು ಸ್ಟೇಟಸ್ ಹಾಕಿದವರ ಬಗ್ಗೆ ಪೊಲೀಸರು ಲಘು ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸಂಸದ ಸುರೇಶ ಅಂಗಡಿ ತಮ್ಮ ಬೆಂಬಲಿಗರೊಂದಿಗೆ ಬೆಳಗಾವಿ ಎಸ್ಪಿ ಕಚೇರಿ ಎದುರು ಧರಣಿ ನಡೆಸಿದ್ದಾರೆ. ಎಸ್ಪಿ ಸುಧೀರ ಕುಮಾರ ರಡ್ಡಿ ಜೊತೆ ವಾಗ್ವಾದವನ್ನೂ ಅಂಗಡಿ ನಡೆಸಿದ್ದು, ಕ್ರಮ ಕೈಗೊಳ್ಳಲಾಗದ ಅಧಿಕಾರಿಗಳು ಮನೆಗೆ ತೆರಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.