Kannada NewsKarnataka NewsLatestPolitics

*ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪೊಲೀಸರ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಿಷ್ಟು;

“ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಪೊಲೀಸರಿಗೆ ತನಿಖೆ ನಡೆಸಲು ಸ್ವಾತಂತ್ರ್ಯ ನೀಡಿದ್ದೇವೆ. ಈ ಬಗ್ಗೆ ಗೃಹಸಚಿವರು ಹೇಳಿಕೆ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ನಮ್ಮ ರಾಜ್ಯಸಭಾ ಸದಸ್ಯರು ಕೂಡ ಅವತ್ತೇ ಹೇಳಿಕೆ ನೀಡಿದ್ದಾರೆ.

ಬಿಜೆಪಿಯವರು ತಮಗೆ ಬೇಕಾದವರ ಕೈಯಿಂದ ಏನೇ ವರದಿ ತರಿಸಿಕೊಳ್ಳಬಹುದು ಅದು ಅಧಿಕೃತವಲ್ಲ. ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ಮಾಡಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಬಿಜೆಪಿ ಕಾರ್ಯಕರ್ತರ ಪ್ರಕರಣವೂ ತನಿಖೆ:

ಕೆಲ ಸಚಿವರು ಪಾಕ್ ಪರ ಘೋಷಣೆ ಕೂಗಿಲ್ಲ ಎಂದು ಹೇಳಿದ್ದರ ಬಗ್ಗೆ ಕೇಳಿದಾಗ, “ಅವರ ಅಭಿಪ್ರಾಯ ಅವರು ಹೇಳಿದ್ದಾರೆ. ಇಲ್ಲಿ ವಿಡಿಯೋ ತಿರುಚಿರಬಹುದು. ಇಲ್ಲಿ ನಮ್ಮ ಅಭಿಪ್ರಾಯಕ್ಕಿಂತ ಪೊಲೀಸರ ತನಿಖೆಯ ವರದಿ ಮುಖ್ಯ. ಈ ಪ್ರಕರಣದ ತನಿಖೆಗಾಗಿ ಧ್ವನಿ ಮಾದರಿ ನೀಡಬೇಕು. ನಿನ್ನೆಯೇ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಮಂಡ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದ ಪ್ರಕರಣವನ್ನು ತನಿಖೆ ಮಾಡುತ್ತೇವೆ. ಬಿಜೆಪಿ ಸ್ನೇಹಿತರು ಅದಕ್ಕೂ ಉತ್ತರ ನೀಡಬೇಕು”ಎಂದು ತಿಳಿಸಿದರು.

ಇದರಿಂದ ಪಕ್ಷಕ್ಕೆ ಮುಜುಗರ ಆಗುವುದಿಲ್ಲವೇ ಎಂದು ಕೇಳಿದಾಗ, “ನನ್ನ ಪ್ರಕಾರ ಇಲ್ಲಿ ಯಾರೂ ತಪ್ಪು ಮಾಡಿಲ್ಲ. ಆದರೆ ತನಿಖೆ ಪ್ರಕ್ರಿಯೆಯಲ್ಲಿದೆ” ಎಂದು ತಿಳಿಸಿದರು.

ಕುಡಿಯುವ ನೀರಿನ ಕೊರತೆ ಗಂಭೀರವಾಗಿ ಪರಿಗಣಿಸಿದ್ದೇವೆ:

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕೇಳಿದಾಗ, “ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದೇವೆ. ನಾವು ಖಾಸಗಿ ಕೊಳವೆ ಬಾವಿ ಹಾಗೂ ಟ್ಯಾಂಕರ್ ಗಳನ್ನ ವಶಕ್ಕೆ ಪಡೆಯುತ್ತಿದ್ದೇವೆ. ಎಲ್ಲೆಲ್ಲಿ ನೀರಿನ ಲಭ್ಯತೆ ಇದೆ ಎಂದು ಗುರುತಿಸುತ್ತಿದ್ದೇವೆ. ಇನ್ನು ಕಾವೇರಿ 5ನೇ ಹಂತ ಮೇ ಅಂತ್ಯದ ವೇಳೆಗೆ ಮುಕ್ತಾಯವಾಗಲಿದೆ. ನಾವು ಜನರಿಗೆ ರಿಯಾಯಿತಿ ದರದಲ್ಲಿ ನೀರು ಪೂರೈಸುತ್ತೇವೆ. ನನ್ನ ಮನೆಯ ಕೊಳವೆಬಾವಿ ಸೇರಿದಂತೆ ನಗರದಲ್ಲಿ ಸಾವಿರಾರು ಕೊಳವೆ ಬಾವಿಗಳು ಬತ್ತಿವೆ” ಎಂದು ತಿಳಿಸಿದರು.

7ರಂದು ಚುನಾವಣಾ ಸಮಿತಿ ಸಭೆ:

ಸುರ್ಜೇವಾಲ ಅವರ ಜತೆಗಿನ ಸಭೆ ಕುರಿತು ಕೇಳಿದಾಗ, “ನಿನ್ನೆ ನಾನು, ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಗ್ಯಾರಂಟಿ ಸಮಿತಿಯಲ್ಲಿ ಕಾರ್ಯಕರ್ತರಿಗೆ ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಇದರಲ್ಲಿ ನಾಲ್ಕು ಸಾವಿರ ಕಾರ್ಯಕರ್ತರನ್ನು ನಾಮನಿರ್ದೇಶನ ಮಾಡಲಾಗುವುದು. ಇನ್ನು 7ರಂದು ದೆಹಲಿಯಲ್ಲಿ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ನಾನು ಹಾಗೂ ಮುಖ್ಯಮಂತ್ರಿಗಳು ಇದರಲ್ಲಿ ಭಾಗವಹಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ” ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button