
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕದ ಗಡಿ ಭಾಗದ ಕೃಷ್ಣಾ ನದಿ ತಿರದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ದತ್ತ ಮಂದಿರವು ಸಂಪೂರ್ಣವಾಗಿ ಜಲಾವೃತಗೊಂಡು ಭಕ್ತರಿಗೆ ನಿಷೇದ ಹೆರಲಾಗಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೊಂಕಣ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ.
ಸದ್ಯ ಕೃಷ್ಣಾ ನದಿಗೆ ಬರೋಬ್ಬರಿ 1 ಲಕ್ಷ 35 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದು ಬರುತ್ತಿದ್ದು, ನದಿಯ ನೀರಿನ ಮಟ್ಟ ಗಂಟೆಯಿಂದ ಗಂಟೆಗೆ ಹೆಚ್ಚಾಗುತ್ತಿದೆ.
ಕಲ್ಲೋಳ ಗ್ರಾಮದ ಕೃಷ್ಣಾ ನದಿ ತೀರದ ಪ್ರಸಿದ್ಧ ದತ್ತ ಮಂದಿರದ ಗರ್ಭಗುಡಿಯವರೆಗೆ ನೀರು ನುಗ್ಗಿದ್ದು, ದೇವಸ್ಥಾನವು ಜಲಾವೃತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರು ಹಾಗೂ ಭಕ್ತಾದಿಗಳಿಗೆ ದತ್ತಾತ್ರೇಯ ದೇವರ ದರ್ಶನವನ್ನು ಸದ್ಯಕ್ಕೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುವುದನ್ನು ತಡೆಯಲು ನದಿ ತೀರದುದ್ದಕ್ಕೂ ಪೊಲೀಸರು ಬ್ಯಾರಿಕೇಡ್ಗಳನ್ನು ಅಳವಡಿಸಿದ್ದಾರೆ.



