Belagavi NewsBelgaum NewsKannada NewsKarnataka NewsNational

*ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಜ್ಜಾಗಿರಲು ಡಿಸಿ ಮೊಹಮ್ಮದ್ ರೋಷನ್ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆ‌ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ‌ ಬೆಳಗಾವಿ ಜಿಲ್ಲೆಯಲ್ಲಿನ ನದಿಗಳ ಒಳಹರಿವು ಹೆಚ್ಚಾಗುತ್ತಿದೆ‌. ಜಿಲ್ಲೆಯ‌ ನದಿ ಪಾತ್ರದ ಗ್ರಾಮಗಳಲ್ಲಿ ಸಂಭವಿಸಬಹುದಾದ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್‌ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ (ಜೂ.28) ಜರುಗಿದ ಜಿಲ್ಲಾ‌ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಡಿಯೋ ಸಂವಾದ ಸಭೆಯ‌ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿದರು.

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಬಹುತೇಕ ಆಣೆಕಟ್ಟುಗಳು ಭರ್ತಿಯಾಗುತ್ತಿವೆ. ಜಲಾಶಯಗಳ ನೀರಿನ ಮಟ್ಟ ಕುರಿತು ಅಲ್ಲಿನ‌ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕ ಸಾಧಿಸಿ ನಿಯಮಿತವಾಗಿ ವರದಿ ಪಡೆದುಕೊಂಡು ಜಾಗೃತರಾಗಿರುವಂತೆ ತಿಳಿಸಿದರು. 

ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳಲ್ಲಿನ  ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಗತ್ಯದ ಸಿದ್ಧತೆ ಮಾಡಿಕೊಳ್ಳಬೇಕು.

Home add -Advt

ಜಿಲ್ಲೆಯಲ್ಲಿ ಗುರುತಿಸಲಾಗಿರುವ ಕಾಳಜಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ವ್ಯವಸ್ಥೆಗೆ ಕ್ರಮವಹಿಸಬೇಕು.‌ ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಕಾಳಜಿ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದರು.

ಅಪಾಯ ಮಟ್ಟ ಮೀರಿ ಹರಿಯುವ ನದಿ, ಹಳ್ಳ ಕೊಳ್ಳಗಳ ಪಾತ್ರದ ಹತ್ತಿರ ಜನ-ಜಾನುವಾರುಗಳ ಸಂಚಾರ ನಿಷೇಧಿಸಬೇಕು. ಸೇತುವೆಗಳ ಮೇಲೆ ಜನ, ವಾಹನ ಸಂಚಾರ ಮಾಡದಂತೆ ಅಪಾಯದ ಕುರಿತು ಪ್ರದರ್ಶನ‌ ಫಲಕ ಅಳವಡಿಕೆ ಹಾಗೂ ಅಗತ್ಯವಿದ್ದಲ್ಲಿ ಪೋಲಿಸ ಸಿಬ್ಬಂದಿಯನ್ನು ನಿಯೋಜಿಸಲು‌ ಜಿಲ್ಲಾಧಿಕಾರಿ ತಿಳಿಸಿದರು.

ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕ‌ ನಿರ್ವಹಣೆಗಾಗಿ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನೋಡಲ್ ಅಧಿಕಾರಿಗಳು ನಿಯಮಿತವಾಗಿ ಸಭೆಗಳನ್ನು ಜರುಗಿಸಿ ಪ್ರವಾಹ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿನ ಅನೇಕ ಪ್ರವಾಸಿ ಸ್ಥಳಗಳಿಗೆ ಹೆಚ್ಚಿನ ಜನ ಬರುವಂತಹ ಸ್ಥಳಗಳಲ್ಲಿ ಯಾವುದೇ ದುರ್ಘಟನೆಗಳು ಆಗದಂತೆ ಅಗತ್ಯದ ಸುರಕ್ಷತಾ ಕ್ರಮಗಳನ್ನು‌ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.

ಡಿ.ಸಿ.ಪಿ. ರೋಹನ್ ಜಗದೀಶ್ ಅವರು ಮಾತನಾಡಿ, ಸಂಭವನೀಯ  ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ನಗರ ವ್ಯಾಪ್ತಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ನಗರ ಹಾಗೂ ಜಿಲ್ಲೆಯಲ್ಲಿ ಯಾವುದೇ ರಿತಿಯ ತೊಂದರೆಗಳು ಎದುರಾದಲ್ಲಿ ಸಾರ್ವಜನಿಕರು  112 ಕ್ಕೆ ಕರೆ ಮಾಡಿದಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. 

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ ಪ್ರವಾಹ ಭೀತಿಗೆ ಒಳಗಾಗಬಹುದಾದ ನದಿಪಾತ್ರದ ಗ್ರಾಮಗಳಿಗೆ ಅಗತ್ಯದ ಮುಂಜಾಗೃತಾ ಕ್ರಮ‌ವಹಿಸುವಂತೆ ಸ್ಥಳೀಯ ಆಡಳಿತಕ್ಜೆ  ಸೂಚನೆ ನೀಡಿದರು.  

ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ‌ ಮಕ್ಕಳನ್ನು ಸುರಕ್ಷಿತವಾಗಿ ಮನೆ ಸೇರಿಸುವ ಕುರಿತು ಶಾಲಾ ಮುಖ್ಯಸ್ಥರು, ಸ್ಥಳೀಯ ಆಡಳಿತ ನಿಗಾವಹಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಶಾಲಾ‌ ಕೊಠಡಿಗಳಲ್ಲಿ ತರಗತಿಗಳನ್ನು‌ ನಡೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತರಾದ ಶುಭ ಬಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ, ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಲೀಲಾವತಿ ಹಿರೇಮಠ, ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಬಸವರಾಜ ಪಾಟೀಲ್, ತೋಟಗಾರಿಕೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಸೇರಿಯಂತೆ ಹೆಸ್ಕಾಂ, ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಎಲ್ಲ ತಹಸೀಲ್ದಾರರುಗಳು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಹಾಜರಿದ್ದರು.

Related Articles

Back to top button