
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ಸಂಬಂಧ ಉದ್ವಿಗ್ನಗೊಂಡಿದೆ. ಭಾರತ ಸರ್ಕಾರ ದೇಶಾದ್ಯಂತ ನಾಗರಿಕ ರಕ್ಷಣಾ ಸನ್ನದ್ಧತೆಯನ್ನು ಹೆಚ್ಚಿಸುತ್ತಿದೆ. ಪಾಕಿಸ್ತಾನಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿ ಭಾರತ ನಾಳೆ ದೇಶಾದ್ಯಂತ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಸಲು ಸಿದ್ಧತೆ ನಡೆಸುತ್ತಿದ್ದು, ಈ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ದದ ವಾತಾವರಣ ನಿರ್ಮಾಣ ಆಗಿದೆ. ಇದನ್ನು ಎದುರಿಸಲು ಕೇಂದ್ರ ಸರ್ಕಾರ ತಯಾರಾಗಿದೆ. ಅದಕ್ಕೆ ಬೇಕಾದ ಪೂರ್ವ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.
ನಿನ್ನೆ ಅಧಿಕಾರಿಗಳ ಸಭೆಯನ್ನು ಮಾಡಲಾಗಿದೆ. ಯುದ್ಧ ಡಿಕ್ಲೇರ್ ಆದ ನಂತರ ನಾಗರೀಕರ ರಕ್ಷಣೆಗೆ ಮುಂದಾಗಬೇಕಿದೆ. ಮೋದಿಯವರು ಪಾಕಿಸ್ತಾನಕ್ಕೆ ಪಾಠ ಕಲಿಸುತ್ತಾರೆ ಎನ್ನುವ ನಿರೀಕ್ಷೆ ಜನರಲ್ಲಿದೆ. 224 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಮಾಡುವ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.
ಯುದ್ಧವೆಂದರೆ ಕೇವಲ ನೇರಾನೇರ ಯುದ್ಧವಲ್ಲ. ಸಿಂಧೂ ನದಿ ಒಪ್ಪಂದ ರದ್ದಾಯ್ತು. ನದಿಯ ಹರಿವು ಕಟ್ ಮಾಡಿದ್ದಾರೆ. ನೇರ ಹಾಗೂ ಪರೋಕ್ಷ ಯುದ್ಧ ಪ್ರಾರಂಭ ಮಾಡಿದೆ. ಪಾಕಿಸ್ತಾನದ ಮೇಲೆ ಹಾರಿ ಬರುವ ವಿಮಾನಗಳನ್ನು ಬಂದ್ ಮಾಡಲಾಗಿದೆ ಎಂದರು.
ಪಾಕಿಸ್ತಾನಿ ಪ್ರಜೆಗಳನ್ನು ಹೊರಗೆ ಹಾಕ್ತಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ನಡೆದುಕೊಳ್ಳಬೇಕಿತ್ತು. ಕರ್ನಾಟಕದಲ್ಲಿ ಎಲ್ಲೆಲ್ಲೆ ಪಾಕಿಸ್ತಾನಿಯರಿದ್ದಾರೋ ಅವರನ್ನು ಹೊರ ಹಾಕುವ ಕೆಲಸ ಆಗಬೇಕು ಎಂದು ಆಗ್ರಹಿಸಿದರು.