Latest

ನನಗೆ ಯಾವುದೇ ಅಹಂ ಇಲ್ಲ; ಸಾರಿಗೆ ಸಿಬ್ಬಂದಿ ಹಿತಾಸಕ್ತಿ ರಕ್ಷಣೆಯೇ ನನ್ನ ಆದ್ಯತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ಸಿಬ್ಬಂದಿಗಳ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಸಹಾನುಭೂತಿ ಇದ್ದು, ಅವರ ಬೇಡಿಕೆಗಳ ಬಗ್ಗೆ ಈಗಾಗಲೇ ಒಕ್ಕೂಟಗಳ ಮುಖಂಡರ ಒಂದು ಸುತ್ತಿನ ಸಭೆ ನಡೆಸಲಾಗಿದೆ. ಅಗತ್ಯವಿದ್ದರೆ ಮತ್ತಷ್ಟು ಮಾತುಕತೆಗಳನ್ನು ನಡೆಸಿ ಸಂಧಾನ ಮಾರ್ಗದಲ್ಲಿ ಸಮಸ್ಯೆ ಪರಿಹರಿಸುವ ಉದ್ದೇಶ ನಮ್ಮ ಸರ್ಕಾರದ್ದಾಗಿದೆ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ವಿಕಾಸಸೌಧದ ಕಛೇರಿಯಲ್ಲಿ ಸಾರಿಗೆ ಸಂಸ್ಥೆಯ ನೌಕರರ ಒಕ್ಕೂಟಗಳ ಮುಖಂಡರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಢೀರ್ ಆಗಿ ಬಸ್ ಸಂಚಾರವನ್ನು ಕೆಲವೆಡೆ ಸ್ಥಗಿತಗೊಳಿಸಿರುವುದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗಿದೆ. ಆದ್ದರಿಂದ ತಕ್ಷಣ ಮುಷ್ಕರನಿರತ ಸಿಬ್ಬಂದಿಗಳು ಕರ್ತವ್ಯಕ್ಕೆ ಮರಳಬೇಕೆಂದು ನಾನು ಮನವಿ ಮಾಡಿದರು.

Related Articles

ನಿಗಮದ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವ ಬೇಡಿಕೆ ಬಗ್ಗೆ ಪರಿಶೀಲಿಸಲು ಮುಖ್ಯಮಂತ್ರಿಯವರೊಂದಿಗೆ ಒಕ್ಕೂಟದ ಮುಖಂಡರುಗಳ ಸಭೆಯನ್ನು ಏರ್ಪಡಿಸಿ ಶೀಘ್ರವೇ ಮುಂದಿನ ಮಾರ್ಗೋಪಾಯಗಳನ್ನು ನಿರೂಪಿಸಲಾಗುವುದು. ಕೋವಿಡ್‍ನಿಂದಾಗಿ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ನೌಕರರ ಕುಟುಂಬದವರಿಗೆ ಇನ್ನು 15 ದಿನಗಳೊಳಗಾಗಿ 30 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು. ಸಿಬ್ಬಂದಿಗಳಿಗೆ ಕೆಲಸಗಳನ್ನು ವಿಂಗಡಿಸುವಾಗ ಕೆಲವು ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಬಗ್ಗೆ ಒಕ್ಕೂಟದ ಮುಖಂಡರು ಗಮನ ಸೆಳೆದಿದ್ದಾರೆ. ಆದ್ದರಿಂದ ಈ ರೀತಿಯ ಕಿರುಕುಳ ನೀಡುವ ಘಟನೆಗಳು ಮುಂದೆ ನಡೆದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

ನಿನ್ನೆ ವಿಧಾನಮಂಡಲದ ಅಧಿವೇಶನದಲ್ಲಿ ನಾನು ಪಾಲ್ಗೊಂಡಿದ್ದರಿಂದ ಸಾರಿಗೆ ಅಧಿಕಾರಿಗಳನ್ನು ಕಳುಹಿಸಿ ಪ್ರತಿಭಟನಾನಿರತರ ಮನವೊಲಿಸುವ ಪ್ರಯತ್ನ ಮಾಡಲಾಗಿತ್ತು. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ಕಾರ್ಮಿಕರ ಹಿತಾಸಕ್ತಿ ರಕ್ಷಿಸುವುದೇ ನನ್ನ ಪ್ರಥಮ ಆದ್ಯತೆಯೇ ಹೊರತು ನನಗೆ ಯಾವುದೇ ಪ್ರತಿಷ್ಠೆಯ ಪ್ರಶ್ನೆ ಉದ್ಭವಿಸಿಲ್ಲ ಎಂಬುದನ್ನು ಪ್ರತಿಭಟನಾಕಾರರು ಗಮನಿಸಬೇಕು. ಸಾರಿಗೆ ಸಿಬ್ಬಂದಿಗಳ ಬಗ್ಗೆ ನನಗೆ ಮತ್ತು ನಮ್ಮ ಸರ್ಕಾರಕ್ಕೆ ಯಾವತ್ತೂ ಸಹಾನುಭೂತಿ ಇದೆ. ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದರೂ ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿಯೂ ಸಹ ಎಲ್ಲಾ ಸಿಬ್ಬಂದಿಗಳಿಗೆ ಯಾವುದೇ ಕಡಿತವಿಲ್ಲದೇ ಸಂಬಳ ನೀಡಿದ್ದು ಇದಕ್ಕೆ ನಿದರ್ಶನವಾಗಿದೆ ಎಂದರು.

ಸಭೆಯಲ್ಲಿ ಎ.ಐ.ಟಿ.ಯು.ಸಿ ಮುಖಂಡರಾದ ಅನಂತ ಸುಬ್ಬರಾವ್, ಸಿ.ಐ.ಟಿ.ಯು. ಮುಖಂಡರಾದ ಪ್ರಕಾಶ್, ಮಹಾಮಂಡಲದ ಪ್ರತಿನಿಧಿಗಳು, ಭಾರತೀಯ ಮಜ್ದೂರ್ ಸಂಘದ ಪೂಂಜಾ, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷರಾದ ಚಂದ್ರಪ್ಪ, ಬಿ.ಎಂ.ಟಿ.ಸಿ ಅಧ್ಯಕ್ಷರಾದ ನಂದೀಶ್ ರೆಡ್ಡಿ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್, ಬೆಂಗಳೂರು ಪೊಲೀಸ್ ಆಯುಕ್ತರಾದ ಕಮಲ್ ಪಂತ್, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಕಳಸದ್, ಬಿ.ಎಂ.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಶಿಖಾ, ಸಾರಿಗೆ ಆಯುಕ್ತರಾದ ಶಿವಕುಮಾರ್ ಮುಂತಾದವರು ಭಾಗವಹಿಸಿದ್ದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button