Belagavi NewsBelgaum NewsKannada NewsKarnataka NewsLatest

*ಜಿಲ್ಲಾಮಟ್ಟದ ಉದ್ಯೋಗ ಮೇಳಕ್ಕೆ ಚಾಲನೆ: 10 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳ ನೋಂದಣಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಒಬ್ಬರು ಉದ್ಯೋಗ ಪಡೆಯುವುದರಿಂದ ಅವರ ಭವಿಷ್ಯ ಮಾತ್ರ ರೂಪವಾಗುವುದಿಲ್ಲ. ಬದಲಾಗಿ ಇಡೀ ಕುಟುಂಬಕ್ಕೆ ಅನುಕೂಲವಾಗುತ್ತದೆ. ಹೀಗಾಗಿ, ಉದ್ಯೋಗವೆಂಬುದು ಎಲ್ಲರಿಗೂ ಮುಖ್ಯವಾಗಿದೆ ಎಂದು ಶಾಸಕರಾದ ಆಸಿಫ್ (ರಾಜು) ಶೇಟ್ ಅವರು ಹೇಳಿದರು.

ಬೆಳಗಾವಿ ನಗರದ ಎಸ್.ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಉದ್ಯೋಗಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವಕ-ಯುವತಿಯರು ತಮ್ಮ ಶಿಕ್ಷಣದ ನಂತರ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸಲ್ಲಿಸುತ್ತಾ, ಸಂದರ್ಶನಗಳನ್ನು ಎದುರಿಸುತ್ತಿರುತ್ತೀರಿ. ಬದುಕು ಎಂಬುದು ಒಂದು ದಿನದಲ್ಲಿ ಕೂಡ ಬದಲಾಗಬಹುದು. ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಛಲ ನಮ್ಮಲ್ಲಿರಬೇಕು. ಹೀಗಾಗಿ, ತಮಗೆ ಕಲ್ಪಿಸಲಾಗಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಉದ್ಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಐಟಿ ಪಾರ್ಕ್ ನಿರ್ಮಾಣಕ್ಕೆ ಪ್ರಯತ್ನ

Home add -Advt

ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಶಿಕ್ಷಣವನ್ನು ಪಡೆದಿರುವಂತಹ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಬೆಳಗಾವಿ ನಗರದಲ್ಲಿ ಒಂದು ಐಟಿ ಪಾರ್ಕ್ ನಿರ್ಮಾಣವಾಗಲಿ ಎಂಬುದು ನಮ್ಮ ಉದ್ದೇಶವಾಗಿದೆ. ಇಲ್ಲಿ ಐಟಿ ಪಾರ್ಕ್ ನಿರ್ಮಾಣವಾದರೇ ಇಂಜಿನಿಯರಿಂಗ್ ಸೇರಿ ವಿವಿಧ ಶಿಕ್ಷಣ ಪೂರೈಸಿರುವ ಈ ಭಾಗದ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಇಲ್ಲಿಯೇ ಉದ್ಯೋಗಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

10000ಕ್ಕೂ ಹೆಚ್ಚು ಅಭ್ಯರ್ಥಿಗಳ ನೋಂದಣಿ

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಜಿಲ್ಲಾಮಟ್ಟದ ಉದ್ಯೋಗ ಮೇಳಕ್ಕೆ ಅತೀ ಕಡಿಮೆ ಸಮಯದಲ್ಲಿ ಆನಲೈನ್ ನಲ್ಲಿ 8000 ಹಾಗೂ ನೇರವಾಗಿ 2000ಕ್ಕೂ ಹೆಚ್ಚು ಅಭ್ಯರ್ಥಿಗಳು ಸೇರಿ ಒಟ್ಟು 10,152 ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಇಂದು 7500ಕ್ಕೂ ಹೆಚ್ಚು ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದಾರೆ. 104 ಕಂಪನಿಗಳು ಆನಲೈನ್ ನಲ್ಲಿ ನೋಂದಣಿ ಮಾಡಿಕೊಂಡು ಇಲ್ಲಿ ಭಾಗವಹಿಸಿವೆ. 19,000 ಅಭ್ಯರ್ಥಿಗಳ ಅಗತ್ಯತೆ ಇದೆ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದ್ದಾರೆ. ಹೀಗಾಗಿ, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಅಭ್ಯರ್ಥಿಗಳು ತಮ್ಮ ಜ್ಞಾನ ಹಾಗೂ ಕೌಶಲ್ಯವನ್ನು ಬಳಿಸಿ ಉದ್ಯೋಗಗಳನ್ನು ಪಡೆದುಕೊಳ್ಳಬೇಕು ಹಾಗೂ ಸೂಕ್ತ ರೀತಿಯಲ್ಲಿ ಕೆಲಸ ನಿರ್ವಹಿಸಿ ಇನ್ನೊಬ್ಬರಿಗೆ ಮಾದರಿಯಾಗಬೇಕು. ಜಿಲ್ಲೆಯ ಯುವಕ-ಯುವತಿಯರು ಆಸಕ್ತಿ ತೋರಿದರೆ ಮುಂದಿನ ವರ್ಷವೂ ಕೂಡ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ಉದ್ಯೋಗಮೇಳಕ್ಕೆ ಎಸ್.ಜಿ. ಬಾಳೆಕುಂದ್ರಿ ಕಾಲೇಜಿನಲ್ಲಿ ಎಲ್ಲ ರೀತಿಯಿಂದಲೂ ಅನುಕೂಲ ಕಲ್ಪಿಸುವ ಮೂಲಕ ಸಂಸ್ಥೆಯ ಅಧ್ಯಕ್ಷರಾದ ಡಾ. ಅಲ್ಲಮಪ್ರಭು ಸ್ವಾಮೀಜಿ ಅವರು ಹಾಗೂ ಆಡಳಿತ ಮಂಡಳಿಯವರು ಉತ್ತಮ ಸಹಕಾರ ನೀಡಿದ್ದಾರೆ. ಇದರಿಂದ ನಾವು ಅಚ್ಚುಕಟ್ಟಾಗಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲು ಸಾಧ್ಯವಾಗಿದೆ ಎಂದರು.

ತಾವು ಕೂಡ ಕೆಲಸ ನೀಡುವಂತವರಾಗಿ:

ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಡಾ. ಅಲ್ಲಮಪ್ರಭು ಸ್ವಾಮೀಜಿಯವರು ಸಾನಿಧ್ಯ ವಹಿಸಿ ಮಾತನಾಡಿ, ಕಂಪನಿಗಳು ಹಾಗೂ ಅಭ್ಯರ್ಥಿಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ ಕಂಪನಿಗಳು ಹಾಗೂ ಅಭ್ಯರ್ಥಿಗಳು ಇಬ್ಬರು ಕೂಡ ಏಲ್ಲೆ ಹೊಂದಲು ಸಾಧ್ಯವಾಗುತ್ತದೆ. ಹೀಗಾಗಿ, ಉದ್ಯೋಗ ಮೇಳದಲ್ಲಿ ಕೆಲಸ ಪಡೆಯುವ ಅಭ್ಯರ್ಥಿಗಳು ಶ್ರದ್ಧೆಯಿಂದ ಕೆಲಸ ಮಾಡಬೇಕು. ಮುಂದೆ ತಾವು ಕೂಡ ಇತರರಿಗೆ ಕೆಲಸ ನೀಡುವಂತವರಾಗಬೇಕು ಎಂದು ಸಲಹೆ ನೀಡಿದರು.

ಸಮಾರಂಭದಲ್ಲಿ ಜಿ.ಪಂ. ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ್, ಸಹಾಯಕ ಯೋಜನಾಧಿಕಾರಿ ಭಾಗ್ಯಶ್ರೀ ಜಹಾಗೀರದಾರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಾಶ ದೇಶಪಾಂಡೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕ ಗುರುಪಾದಯ್ಯಾ ಹಿರೇಮಠ, ಎಸ್.ಜಿ. ಬಾಳೆಕುಂದ್ರಿ ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ಡಾ.ಬಿ.ಆರ್. ಪಟಗುಂದಿ, ಬೆಳಗಾವಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ, ಸರ್ಕಾರಿ ಐಟಿಐ ಕಾಲೇಜಿನ ನಿರ್ದೇಶಕ ಚಿದಾನಂದ ಬಾಕೆ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾವಿರಾರು ಯುವಕ-ಯುವತಿಯರು ಭಾಗವಹಿಸಿದ್ದರು.

Related Articles

Back to top button