
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಧನ್ಯವಾದ ತಿಳಿಸಲು ದೆಹಲಿಗೆ ತೆರಳಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಡರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದರೆ ದೆಹಲಿ ಪ್ರವಾಸದ ವೇಳೆ ಅವರು ಸಚಿವರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಬಂದಿದ್ದಾರೆ ಎನ್ನಲಾಗಿದೆ.
ಸಿಎಂ ಪದಗ್ರಹಣದ ಸಂದರ್ಭದಲ್ಲಿ ಯಾರೆಲ್ಲಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕು ಎಂಬ ಗೊಂದಲಕ್ಕೆ ತೆರೆ ಎಳೆಯಲು ದೆಹಲಿಗೆ ಹೋಗುವಾಗಲೇ ಪಟ್ಟಿಯೊಂದನ್ನು ರೆಡಿ ಮಾಡಿಕೊಂಡಿದ್ದ ಡಿಕೆಶಿ, ಹೈಕಮಾಂಡ್ ಜೊತೆ ಚರ್ಚಿಸಿ ಅದನ್ನು ಫೈನಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇತ್ತ ಡಿ.ಕೆ. ಶಿವಕುಮಾರ್ ಅವರು ದೇವನಹಳ್ಳಿ ವಿಮಾನ ನಿಲ್ದಾಣದಿಂದ ಸದಾಶಿವನಗರದ ತಮ್ಮ ನಿವಾಸಕ್ಕೆ ತಲುಪುತ್ತಿದ್ದಂತೆ, ಮಂಡ್ಯ ಭಾಗದ ಕಾಂಗ್ರೆಸ್ ನಾಯಕರು ತಡರಾತ್ರಿಯೇ ಅಲ್ಲಿಗೆ ದೌಡಾಯಿಸಿದ್ದಾರೆ. ಡಿ.ಕೆ. ಶಿವಕುಮಾರ್ ಬರುವ ಮುನ್ನವೇ ಅವರ ಮನೆಗೆ ಬಂದು ಕಾಯುತ್ತಿದ್ದ ನಾಯಕರು, ಮಧ್ಯರಾತ್ರಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಹತ್ವದ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ರವಿ ಗಾಣಿಗ, ವಿಧಾನ ಪರಿಷತ್ ಸದಸ್ಯರಾದ ಗೂಳಿಗೌಡ, ಕದಲೂರು ಉದಯ್, ರಮೇಶ್ ಬಂಡಿಸಿದ್ದೇಗೌಡ, ಆಪ್ತ ನಾಯಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ಮಾಜಿ ಅಧ್ಯಕ್ಷ ನಲಪಾಡ್ ಕೂಡ ಈ ವೇಳೆ ಉಪಸ್ಥಿತರಿದ್ದರು.
ಈ ಮಿಡ್ ನೈಟ್ ಮೀಟಿಂಗ್ನಲ್ಲಿ ಮುಂಬರುವ ಸಿಎಲ್ಪಿ ಸಭೆ, ಸಚಿವ ಸ್ಥಾನದ ಹಂಚಿಕೆ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಿದ್ಧತೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ನಾಯಕರ ನಡುವೆ ಭಾರಿ ಲಾಬಿ ಶುರುವಾಗಿದ್ದು, ಮಂಡ್ಯ ಜಿಲ್ಲೆಯ ಕೈ ನಾಯಕರು ತಮಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಡಿಕೆಶಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.




