
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ಕಬಡ್ಡಿ ಪಟು ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನ ಆದರ್ಶ ನಗರದ ಮನೆಯಲ್ಲಿ ಪತ್ತೆಯಾಗಿದೆ.
25 ವರ್ಷದ ಧನಲಕ್ಷ್ಮಿ ಮೃತ ಕಬಡ್ಡಿ ಪಟು. ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದ ನಿವಾಸಿ. ಕಳೆದ 5 ವರ್ಷಗಳಿಂದ ನೆಲಮಂಗಲದ ಆದರ್ಶನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಾಡುಗೊಡಿಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಮಂಗಳವಾರ ಮೈಸೂರು ದಸರಾಗೆ ಹೋಗಿ ಬಂದಿದ್ದ ಧನಲಕ್ಷ್ಮೀ, ಈಗ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 3 ಬಾರಿ ಅಂತರಾಷ್ಟ್ರೀಯ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ತಂದೆ ಹಾಗೂ ತಮ್ಮ ಮನೆಯಲ್ಲಿರುವಗಲೇ ಧನಲಕ್ಷ್ಮೀ ತನ್ನ ರೂಮಿನಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧನಲಕ್ಷ್ಮೀ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.