*ಭಯೋತ್ಪಾದನೆಗೆ ಜಾತಿ, ಧರ್ಮದ ಬಣ್ಣ ಕಟ್ಟುವುದು ಬೇಡ: ನಿರ್ಮಲಾನಂದನಾಥ ಶ್ರೀ*

ಪ್ರಗತಿವಾಹಿನಿ ಸುದ್ದಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ಪೈಶಾಚಿಕ ಕೃತ್ಯವನ್ನು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಡಾ. ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ.
ಘಟನೆಯಲ್ಲಿ 26 ಮಂದಿ ಸಾವನ್ನಪ್ಪಿರುವುದು ಮನಸ್ಸಿಗೆ ಆಘಾತ ನೀಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದವರಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಚುಂಚಶ್ರೀ ಗಳು ಹಾರೈಸಿದ್ದಾರೆ.
ಭಯೋತ್ಪಾದಕರ ದಾಳಿಯಲ್ಲಿ ಕರ್ನಾಟಕದ ಮೂವರು ಸಾವನ್ನಪ್ಪಿರುವುದು ಅತ್ಯಂತ ದುರದೃಷ್ಟಕರ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿರುವ ಸ್ವಾಮೀಜಿಯವರು ಈ ಸಂದರ್ಭದಲ್ಲಿ ಸಂತ್ರಸ್ತರ ಕುಟುಂಬದವರ ಜೊತೆ ಶ್ರೀ ಮಠ ಇರಲಿದೆ ಎಂದು ಆಶ್ವಾಸನೆ ನೀಡಿದ್ದಾರೆ.
ಮೃತಪಟ್ಟವರ ಕಳೆಬರವನ್ನು ಜಮ್ಮುಕಾಶ್ಮೀರದಿಂದ ಸ್ವಗ್ರಾಮಕ್ಕೆ ತರಲು ಸರ್ಕಾರ ಮುಂದಾಗಿರುವುದು ಶ್ಲಾಘನೀಯ. ಒಂದು ಕಾಲದಲ್ಲಿ ಜಮ್ಮು-ಕಾಶ್ಮೀರ ಅಶಾಂತಿಯ ಬೀಡಾಗಿತ್ತು. ಪ್ರಧಾನಿ ನರೇಂದ್ರಮೋದಿ ಅವರ ದಿಟ್ಟ ನಿರ್ಧಾರಗಳಿಂದಾಗಿ ಕಣಿವೆ ರಾಜ್ಯದಲ್ಲಿ ಕಳೆದ ಹಲವು ವರ್ಷಗಳಿಂದ ಶಾಂತಿ ನೆಲೆಸಿದೆ. ಇದನ್ನು ಸಹಿಸದ ಉಗ್ರರು ಮನುಷ್ಯತ್ವವನ್ನು ಮರೆತು ಅತ್ಯಂತ ಬರ್ಭರವಾಗಿ ಗುಂಡಿನ ದಾಳಿ ನಡೆಸಿರುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಕಂಬನಿ ಮಿಡಿದಿದ್ದಾರೆ.
ಭಯೋತ್ಪಾದನೆಗೆ ಜಾತಿ ಮತ್ತು ಧರ್ಮದ ಬಣ್ಣ ಕಟ್ಟುವುದು ಬೇಡ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಅದನ್ನು ನಾವು ಖಂಡಿಸಲೇಬೇಕು. ಪಕ್ಷ ರಾಜಕಾರಣ ಮರೆತು ನಾವೆಲ್ಲರೂ ಒಗ್ಗಟ್ಟಾಗಿರಬೇಕಾದ ಸಮಯ ಇದು ಎಂದು ಸಲಹೆ ಕೊಟ್ಟಿದ್ದಾರೆ.
ಇಲ್ಲಿ ತಪ್ಪುಗಳನ್ನು ಹುಡುಕುವ ಅಗತ್ಯವಿಲ್ಲ. ನಾವೆಲ್ಲರೂ ಕೇಂದ್ರ ಸರ್ಕಾರಕ್ಕೆ ಭಯೋತ್ಫಾದನೆ ಮತ್ತು ಭಯೋತ್ಪಾದಕರ ವಿರುದ್ಧ ಹೋರಾಡಲು ಸಹಕಾರ ನೀಡಬೇಕು. ನಾವು ಒಂದಾಗಿದ್ದೇವೆ ಎಂಬ ಸಂದೇಶವನ್ನು ರವಾನಿಸಲೇಬೇಕು.
ಇದು ಭಾರತದ ಸಾರ್ವಭೌಮತೆ ಮೇಲೆ ನಡೆದಿರುವ ದಾಳಿಯಾಗಿದೆ. ಉಗ್ರರನ್ನು ಮಟ್ಟ ಹಾಕಲು ಸರ್ಕಾರ ಏನೆಲ್ಲಾ ಸಾಧ್ಯವೋ ಅದನ್ನು ಮಾಡಬೇಕು. ಅದಕ್ಕೆ ಸಹಕಾರ ಕೊಡಬೇಕು ಎಂದು ಸ್ವಾಮಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.