*ಡಾ.ಸರಜೂ ಕಾಟ್ಕರ್ ಅವರಿಗೆ ಪ್ರತಿಷ್ಠಿತ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’*

ಬೆಂಗಳೂರು ಜುಲೈ ೨೯:
ಪ್ರಗತಿವಾಹಿನಿ ಸುದ್ದಿ: ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಹಯೋಗದಲ್ಲಿ ನೀಡುವ ಅತ್ಯಂತ ಪ್ರತಿಷ್ಟಿತ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಬೆಳಗಾವಿಯ ಸಾಹಿತಿ ಮತ್ತು ಪತ್ರಕರ್ತ ಡಾ ಸರಜೂ ಕಾಟ್ಕರ್ ಭಾಜನರಾಗಿದ್ದಾರೆ.
ಈ ಪ್ರಶಸ್ತಿಯು ರೂ 7 ಲಕ್ಷ ನಗದು ಹಾಗೂ ಶಾಲು ಸನ್ಮಾನ ಒಳಗೊಂಡಿರುತ್ತದೆ.ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ಧವಾದ ಮತ್ತು ಮೌಲಿಕವಾದ ಕೊಡುಗೆ ನೀಡಿದ ಲೇಖಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
‘ನೃಪತುಂಗ ಸಾಹಿತ್ಯ ಪ್ರಶಸ್ತಿಯು ಕನ್ನಡ ಸಾಹಿತ್ಯದ ಅತ್ಯುಚ್ಛ ಪ್ರಶಸ್ತಿಯೆಂದು ಗಣಿಸಲ್ಪಡುತ್ತದೆ.
ಡಾ ಸರಜೂ ಕಾಟ್ಕರ್ ಅವರು 80 ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ಕಥೆ, ಕಾದಂಬರಿ, ಕಾವ್ಯ, ವೈಚಾರಿಕ ಸಾಹಿತ್ಯ, ನಾಟಕ, ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ. ಮರಾಠಿ, ಹಿಂದಿ , ಇಂಗ್ಲಿಷ್ ಭಾಷೆಗಳಲ್ಲಿದ್ದ ಅತ್ಯುತ್ತಮವಾದ ಸಾಹಿತ್ಯವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಡಾ ಬಾಬಾಸಾಹೇಬ ಅಂಬೇಡ್ಕರ್ ಅವರ ಬರೆಹಗಳನ್ನು ಕನ್ನಡಕ್ಕೆ ತಂದಿದ್ದಾರೆ.
ಅವರ 5 ಕಾದಂಬರಿಗಳು ಚಲನಚಿತ್ರಗಳಾಗಿ ರಾಜ್ಯ , ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿವೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಡಾ ಬಾಬು ಜಗಜೀವನರಾಮ್ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, , ಕರ್ನಾಟಕ ಮಿಡಿಯಾ ಅಕಾಡೆಮಿ ಪ್ರಶಸ್ತಿ, ಸಂಶೋಧಕ ಕುಂದಣಗಾರ ಪ್ರಶಸ್ತಿ, ಟಿಎಸ್ಆರ್ ಪತ್ರಕರ್ತ ಪ್ರಶಸ್ತಿ ಮುಂತಾದ ಪ್ರಶಸ್ತಿಗಳಿಗೆ ಭಾಜನರಾಗಿರುವ ಡಾ ಸರಜೂ ಕಾಟ್ಕರ್ ಅವರು ಸಧ್ಯ ಕರ್ನಾಟಕ ಸರಕಾರದ ಡಾ ದ ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾಗಿದ್ಸಾರೆ.
ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಯವರು ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ವಿತರಿಸಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿ ಕೆ ಎ ದಯಾನಂದ ಅವರು ಹೇಳಿದ್ದಾರೆ.



