Film & Entertainment

*ಪಂಚಭೂತಗಳಲ್ಲಿ ಲೀನರಾದ ನಟ ದ್ವಾರಕೀಶ್*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ, ಪ್ರಚಂಡ ಕುಳ್ಳ ಖ್ಯಾತಿಯ ದ್ವಾರಕೀಶ್ (81) ನಿನ್ನೆ ಹೃದಯಾಘಾತದಿಂದ ವಿಧಿವಶರಾಗಿದ್ದು, ಇಂದು ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಬೆಂಗಳೂರಿನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ದ್ವಾರಕೀಶ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು.

ಇದಕ್ಕೂ ಮುನ್ನ ಇಂದು ಬೆಳಿಗ್ಗೆ ರವೀಂದ್ರಕಲಾ ಕ್ಷೇತ್ರದಲ್ಲಿ ದ್ವಾರಕೀಶ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರಾಜಕೀಯ ನಾಯಕರು, ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದರು. ಸಿಎಂ ಸಿದ್ದರಾಮಯ್ಯ, ಸಚಿವ ಶಿವರಾಜ್ ತಂಗಡಗಿ, ನಟರಾದ ಜಗ್ಗೇಶ್, ಕಿಚ್ಚ ಸುದೀಪ್, ಯಶ್, ಧ್ರುವ ಸರ್ಜಾ, ಸುಮಲತಾ ಅಂಬರೀಶ್, ಸುಧಾರಾಣಿ, ಶೃತಿ, ಗಿರಿಜಾ ಲೋಕೇಶ್ ಸೇರಿದಂತೆ ಹಲವು ಗಣ್ಯರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

ಬಳಿಕ ಮೃತದೇಹವನ್ನು ಚಾಮರಾಜಪೇಟೆಯ ಚಿತಾಗಾರಕ್ಕೆ ತರಲಾಯಿತು. ಮಧ್ಯಾಹ್ನ 1 ಗಂಟೆಯ ವೇಳೆಗೆ ಬ್ರಾಹ್ಮಣ ಸಂಪ್ರದಾಯದಂತೆ ದ್ವಾರಕೀಶ್ ಅವರ ಐವರು ಮಕ್ಕಳು ಅಂತಿಮ ವಿಧಿ-ವಿಧಾನ ನೆರವೇರಿಸಿದರು. ಈ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ಸಲ್ಲಿಸಿದರು. ಬಳಿಕ ದ್ವಾರಕೀಶ್ ಹಿರಿಯ ಪುತ್ರ ಯೋಗೀಶ್ ದ್ವಾರಕೀಶ್ ಅವರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ಪಂಚಭೂತಗಳಲ್ಲಿ ಲೀನರಾದರು,

ಅಂತ್ಯಕ್ರಿಯೆಯಲ್ಲಿ ಕುಟುಂಬ ಸದಸ್ಯರು, ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು.

Related Articles

Back to top button