ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಅಕ್ರಮ ಮರಳು ಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪವೆಸಗಿದ್ದ ಚಾಮರಾಜನಗರ ಡಿವೈಎಸ್ ಪಿ ಮೋಹನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಚಾಮರಾಜನಗರದಲ್ಲಿ ಮೇ 15ರಂದು ನಡೆದಿದ್ದ ಪ್ರಕರಣ ಸಂಬಂಧ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ನೀಡಿದ ವರದಿ ಅನುಸಾರ ಡಿವೈಎಸ್ ಪಿ ಮೋಹನ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಾದಾಪುರದ ಬಳಿ ಟಿಪ್ಪರ್ ಲಾರಿಯೊಂದರಲ್ಲಿ ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಮಂಜು ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನಿಡಲಾಗಿತ್ತು. ಪೊಲೀಸ್ ವಾಹನ ಕಾಣುತ್ತಿದ್ದಂತೆಯೇ ಟಿಪ್ಪರ್ ಚಾಲಕ ಗಾಡಿಯಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಎದುರಿನಿಂದ ಬಂದ ಲಾರಿಗೆ ಡಿಕ್ಕಿಹೊಡೆದು ಸಾವನ್ನಪ್ಪಿದ್ದ.
ಹಿರಿಯ ಅಧಿಕಾರಿಗಳ ಕಣ್ತಪ್ಪಿಸಲು ಅಕ್ರಮ ಮರಳನ್ನು ಟಿಪ್ಪರ್ ನಿಂದ ರಸ್ತೆಗೆ ಸುರಿದುಎಂ ಸ್ಯಾಂಡ್ ಎಂದು ಬಿಂಬಿಸಲಾಗಿತ್ತು. ಈ ಪ್ರಕರಣ ಸಂಬಂಧ ಸರ್ಕಲ್ ಇನ್ಸ್ ಪೆಕ್ಟರ್ ಮಂಜು ಸೇರಿ ಮೂವರನ್ನು ಅಮಾನತು ಮಾಡಲಾಗಿತ್ತು. ಇದೇ ಪ್ರಕರಣ ಸಂಬಂಧ ಇದೀಗ ಡಿವೈ ಎಸ್ ಪಿಯವರನ್ನು ಸಸ್ಪೆಂಡ್ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ