Politics

*ಭಾರತಕ್ಕೆ ಇಂಧನ ಭದ್ರತೆ ಕಲ್ಪಿಸಲು ಬದ್ಧ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ಶುದ್ಧ ಇಂಧನ ಒದಗಿಸುವ ಜತೆಗೆ ಇಂಧನ ಭದ್ರತೆ ಕಲ್ಪಿಸುವ ಮೂಲಕ ಭಾರತವನ್ನು ಜಾಗತಿಕವಾಗಿ ಬಲಿಷ್ಠಗೊಳಿಸುವ ಸಂಕಲ್ಪ ಮಾಡಲಾಗಿದೆ ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ನೂತನ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನವದೆಹಲಿಯಲ್ಲಿ ಇಂದು ನೂತನ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿ ಕಾರ್ಯಾರಂಭ ಮಾಡಿದ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದರು.

ಭಾರತದ ಇಂಧನ ಕ್ಷೇತ್ರದಲ್ಲಿ ನವೀಕರಿಸಬಹುದಾದ ಇಂಧನಕ್ಕೆ ಹೆಚ್ಚು ಹೆಚ್ಚು ಕೊಡುಗೆಗಳನ್ನು ನೀಡುವತ್ತ ಕೇಂದ್ರ ಸರ್ಕಾರ ಮತ್ತಷ್ಟು ಹೊಸ ಹೊಸ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ ಮತ್ತು ಈಗಾಗಲೇ ನವೀಕರಿಸಬಹುದಾದ ಇಂಧನದಲ್ಲಿ ಭಾರತ ಜಾಗತಿಕವಾಗಿ 4ನೇ ಸ್ಥಾನದಲ್ಲಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಅವರು ಈ ಇಲಾಖೆಯನ್ನು ಮತ್ತಷ್ಟು ಬಲಪಡಿಸಿ ಮುನ್ನಡೆಸುವ ಹೊಣೆ ವಹಿಸಿದ್ದಾರೆ. ಅಂತೆಯೇ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ಅವರ ನಿರೀಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಪ್ರಲ್ಹಾದ ಜೋಶಿ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಹೊಸ ಮತ್ತು ನವೀಕರಿಸಬಹುದಾದ ಇಂಧನ ವಲಯ ಭಾರತದ ಇಂಧನ ಭದ್ರತೆಗೆ ಈಗಾಗಲೇ ಕೊಡುಗೆ ನೀಡುತ್ತಿದೆ. ಈ ದಿಕ್ಕಿನಲ್ಲಿ ನಾವು ಮತ್ತಷ್ಟು ಪರಿಣಾಮಕಾರಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

ತಮ್ಮ ಹಿಂದಿನ ಅವಧಿಯಲ್ಲಿ ಕಲ್ಲಿದ್ದಲು ಉತ್ಪಾದನೆ ಹೆಚ್ಚಿಸುವ ಮೂಲಕ ಇಂಧನ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದೇನೆ. ಅಂತೆಯೇ ಭವಿಷ್ಯದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರವನ್ನು ಸಬಲಗೊಳಿಸಿ ಇಂಧನದಲ್ಲಿ ಭಾರತ ಸ್ವಾವಲಂಬಿಯಾಗಿ ರೂಪುಗೊಳ್ಳಲು ಪ್ರಯತ್ನಿಸುವುದಾಗಿ ತಿಳಿಸಿದರು.

ಇಲಾಖೆಯಲ್ಲಿ ಅನುಭವಿ ಹಾಗೂ ಹಿರಿಯ ಅಧಿಕಾರಿಗಳಿದ್ದು, ಅವರೆಲ್ಲರ ಸಹಕಾರದಲ್ಲಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಮತ್ತಷ್ಟು ಹೊಸ ಆಯಾಮ ನೀಡಲಾಗುತ್ತದೆ ಎಂದು ತಿಳಿಸಿದರು.

Related Articles

Back to top button