Kannada NewsLatest

ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಕೇಂದ್ರ ಸಚಿವ, ರೈತ ನಾಯಕ ಬಾಬಾಗೌಡ ಪಾಟೀಲ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಬಾಬಾಗೌಡ ಪಾಟೀಲ್ ಕಳೆದ 15 ದಿನಗಳಿಂದ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಬಾಬಾಗೌಡ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು.

Home add -Advt

ಬೆಳಗಾವಿಯ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಪಾಟೀಲ್ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕರ್ನಾಟಕದ ಪ್ರಬಲ ರೈತಪರ ನಾಯಕರಾಗಿ ಗುರುತಿಸಿಕೊಂಡಿದ್ದ ಬಾಬಾಗೌಡ ಪಾಟೀಲ ಬಿಜೆಪಿ, ಸಮಾಜವಾದಿ ಪಕ್ಷ, ಜಾತ್ಯಾತೀತ ಜನತಾ ದಳ ಸೇರಿದಂತೆ ವಿವಿಧ ಪಕ್ಷಗಳನ್ನು ಪದೇಪದೆ ಬದಲಾಯಿಸಿ ಪಕ್ಷಾಂತರ ರಾಜಕಾರಣಕ್ಕೆ ಹೆಸರುವಾಸಿಯಾಗಿದ್ದರು.

ತಮ್ಮ ತತ್ವ ಸಿದ್ಧಾಂತಗಳು ಒಗ್ಗದ ಸಂದರ್ಭದಲ್ಲಿ ದಿಢೀರನೆ ಆ ಪಕ್ಷವನ್ನು ತ್ಯಜಿಸಿ ಇನ್ನೊಂದು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದರು. ಬೆಳಗಾವಿ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಅವರು ಡಿ. ಕೆ. ಶಿವಕುಮಾರ್ ಜತೆ ಚರ್ಚೆ ನಡೆಸಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಬಗ್ಗೆ ಬೆಂಬಲ ಸೂಚಿಸಿದ್ದರು.

1998 ರಲ್ಲಿ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಖಾತೆ ಸಚಿವರಾಗಿ ಕೆಲಸ ಮಾಡಿದ್ದರು. ಬೆಳಗಾವಿ ಜಿಲ್ಲೆಯಲ್ಲದೆ ನೆರೆಯ ಧಾರವಾಡ ಜಿಲ್ಲೆಯಲ್ಲೂ ಅವರು ವಿವಿಧ ಚುನಾವಣೆಯಲ್ಲಿ ಕಣಕ್ಕಿಳಿದಿದ್ದರು.

1989-94 ರಲ್ಲಿ ವಿಧಾನಸಭೆ, 1998 ರಲ್ಲಿ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು.

 

Related Articles

Back to top button