
ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ (76) ಭೀಕರ ಕಾರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.
ರಾಜಸ್ಥಾನದ ಬೀವರ್ ಜಿಲ್ಲೆಯ ರಾಯ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜೂಂತಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ.
ಲೀಲಂಬಾ ಗ್ರಾಮದಲ್ಲಿ ನಡೆದ ಸಂಬಂಧಿಕರ ಮದುವೆ ಸಮಾರಂಭ ಮುಗಿಸಿ ಜೋನ್ಪುರಕ್ಕೆ ಮರಳುತ್ತಿದ್ದಾಗ, ರಸ್ತೆಗೆ ದನಕರುಗಳು ಅಡ್ಡ ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗೋಡೆಗೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಆರ್.ಬಿ. ಚೌಧರಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅವರ ಕಾರು ಚಾಲಕ ಗೌತಮ್ ಸೀರ್ವಿ ತೀವ್ರವಾಗಿ ಗಾಯಗೊಂಡಿದ್ದು, ಜೋದ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೊಂದಿಗೆ ಇದ್ದ ಸೋದರಳಿಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅವರ ಪಾರ್ಥಿವ ಶರೀರ ಪ್ರಸ್ತುತ ಉದಯಪುರದಲ್ಲಿದೆ. ಅವರ ಕುಟುಂಬ ಸದಸ್ಯರು ಇಂದು ವಿಶೇಷ ವಿಮಾನದಲ್ಲಿ ಚೆನ್ನೈಗೆ ತರಲಾಗುವುದು ಎಂದು ತಿಳಿಸಿದ್ದಾರೆ. ಅಭಿಮಾನಿಗಳು ಮತ್ತು ಚಲನಚಿತ್ರ ಗಣ್ಯರಿಗೆ ಗೌರವ ಸಲ್ಲಿಸಲು ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಇರಿಸಿದ ನಂತರ ಅಂತ್ಯಕ್ರಿಯೆ ನಡೆಯಲಿದೆ.
ಅವರು ‘ಸೂಪರ್ ಗುಡ್ ಫಿಲ್ಟ್’ ಬ್ಯಾನರ್ ಅಡಿಯಲ್ಲಿ ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ 100ಕ್ಕೂ ಹೆಚ್ಚು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದರು.
ಇವರು ಪ್ರಸಿದ್ಧ ದಕ್ಷಿಣ ಭಾರತದ ನಟ ಜೀವಾ ಮತ್ತು ಜಿತನ್ ರಮೇಶ್ ಅವರ ತಂದೆಯಾಗಿದ್ದಾರೆ. ಇವರ ನಿಧನಕ್ಕೆ ರಜನಿಕಾಂತ್, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗದ ಪ್ರಮುಖ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.


