
ಪ್ರಗತಿವಾಹಿನಿ ಸುದ್ದಿ : ಕೆಎಫ್ಡಿ ಸೋಂಕಿನಿಂದ ಬಳಲುತ್ತಿದ್ದ ಶಿವಮೊಗ್ಗ ಹುಲ್ಲೆಯ ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಕೆಎಫ್ಡಿ ಸೋಂಕಿನಿಂದ ಇದು ಈ ವರ್ಷದ ಮೊದಲ ಬಲಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ಕೊನೇರಿಪುರದ 55 ವರ್ಷದ ಮಹಿಳೆಗೆ ಜನವರಿ 23ರಂದು ಕೆಎಫ್ಡಿ ಪಾಸಿಟಿವ್ ಬಂದಿತ್ತು. ನಂತರ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿತ್ತು. ಗುಣಮುಖರಾಗಿದ್ದ ಅವರು ಜನವರಿ 29ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮತ್ತೆ ರೋಗದ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಫೆಬ್ರವರಿ 5 ರಂದು ಮಣಿಪಾಲಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 14ರಂದು ಮೃತಪಟ್ಟಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.