ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (80) ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೆಂಕಟರಮಣಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸುಮಾರು 6 ಗಂಟೆಯ ವೇಳೆಗೆ ತೀವ್ರ ಹೃದಯಾಘಾತ ಸಂಭವಿಸಿ ಅವರು ವಿಧಿವಶರಾಗಿದ್ದಾರೆ ಎಂದು ಕೌಟುಂಬಿಕ ಮೂಲಗಳು ಪ್ರಕಟಿಸಿವೆ. ಸದ್ಯ ವೆಂಕಟರಮಣಪ್ಪ ಅವರ ಪುತ್ರ ಎಚ್.ವಿ. ವೆಂಕಟೇಶ್ ಅವರು ಪಾವಗಡ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ.
ವೆಂಕಟರಮಣಪ್ಪ ಅವರು 2008 ರ ಅವಧಿಯಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ, 2018 ರಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟು ನಾಲ್ಕು ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.
ಗುರುಭವನದಲ್ಲಿ ಇಂದು ಮಧ್ಯಾಹ್ನ ಮೃತರ ಪಾರ್ಥೀವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


