
ಪ್ರಗತಿವಾಹಿನಿ ಸುದ್ದಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಯಡಮೊಗೆ ಗ್ರಾಮದ ಸಾಲಿಮಕ್ಕಿಯ ಮಂಜುನಾಥ ಶೆಟ್ಟಿ, ಕಾವ್ರಾಡಿ ಗ್ರಾಮದ ಕಂಡೂರಿನ ನದೀಮ್ ಕರಾಣಿ, ಯಡಮೊಗೆ ಗ್ರಾಮದ ಹನೆಬಚ್ಚಲು ನಿವಾಸಿಗಳಾದ ನಾಗರಾಜ ಭೋವಿ ಹಾಗೂ ವೆಂಕಟರಮಣ ಭೋವಿ ಬಂಧಿತ ಆರೋಪಿಗಳು.
ಸಿದ್ದಾಪುರ-ಶಿವಮೊಗ್ಗ ಜಿಲ್ಲಾ ರಸ್ತೆ ಸಮೀಪ ಫೆ.4ರಂದು ಚಿರತೆಯೊಂದನ್ನು ಕೊಂದಿರುವ ಬಗ್ಗೆ ಶಂಕರನಾರಾಯಣ ವಲಯದಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿ ಶಂಕರನಾರಾಯಣ ವಲಯ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿ ತನಿಖೆ ನಡೆಸಿ ಮೇ 21 ರಂದು ಆರೋಪಿ ಮಂಜುನಾಥ ಶೆಟ್ಟಿಯನ್ನು ಬಂಧಿಸಿ ವಿಚಾರಣೆ ನಡೆಸಿದರು.
ಆತ ನೀಡಿದ ಮಾಹಿತಿಯಂತೆ ಉಳಿದ ಮೂವರು ಆರೋಪಿಗಳನ್ನು ಬಂಧಿಸಲಾಯಿತು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಬಂಧಿತರಿಂದ ಚಿರತೆಯ 4 ಕಾಲಿನ ಉಗುರು ಹಾಗೂ ಮೂಳೆಯ ಬಿಡಿ ಭಾಗಗಳು, ಬಂದೂಕು, 5 ಜೀವಂತ ಗುಂಡುಗಳು, ಎರಡು ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕುಂದಾಪುರ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.

