*ಮಹಾಶಿವರಾತ್ರಿಯಂದೇ ಪ್ರಮಾದ: ದೇವಾಲಯಕ್ಕೆ ನುಗ್ಗಿ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ನಾಡಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಶಿವ ಭಕ್ತರು ಭಕ್ತರು ಶಿವನ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ, ಪುನಸ್ಕಾರಗಳಲ್ಲಿ ತೊಡಗಿ ಭಕ್ತ-ಭಾವ ಸಮರ್ಪಿಸುತ್ತಿದ್ದಾರೆ. ಈ ನಡುವೆ ಗದಗ ಜಿಲ್ಲೆಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ.
ಶಿವಲಿಂಗ, ನಂದಿ ವಿಗ್ರಹಗಳನ್ನು ಭಗ್ನಗೊಳಿಸಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ನಿನ್ನೆಯಷ್ಟೇ ಗ್ರಾಮಸ್ಥರು ದೇವಸ್ಥಾನಕ್ಕೆ ಸುಣ್ಣ-ಬಣ್ಣ ಬಳಿದು, ಅಲಂಕರಿಸಿ ಹೋಗಿದ್ದರು. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಗ್ರಾಮಸ್ಥರು ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದಾಗ ದೇವಸ್ಥಾನದಲ್ಲಿರುವ ದೇವರ ವಿಗ್ರಹ ಭಗ್ನಗೊಂಡಿರುವುದನ್ನು ಕಂಡು ಶಾಕ್ ಆಗಿದ್ದಾರೆ.
ರಾತ್ರೋರಾತ್ರಿ ದೇವಸ್ಥಾನಕ್ಕೆ ನುಗ್ಗಿರುವ ದುಷ್ಕರ್ಮಿಗಳು ಶ್ರೀರಾಮಲಿಂಗೇಶ್ವರ, ನಂದಿ ವಿಗ್ರಹ ಹಾಗೂ ದೇವಾಲದ ಹಿಂಭಾಗದಲ್ಲಿರುವ ಹೊನ್ನಮ್ಮದೇವಿ ವಿಗ್ರಹಗಳನ್ನು ವಿರೂಪಗೊಳಿಸಿದ್ದಾರೆ.
ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.


