Latest

ಕೊನೆಗೂ ಪೊಲೀಸರ ಬಲೆಗೆ ಬಿದ್ದ ಗ್ಯಾಂಗ್ ಸ್ಟರ್ ದುಬೆ

ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಕಾನ್ಪುರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 8 ಪೊಲೀಸರನ್ನು ಹತ್ಯೆ ಮಾಡಿ ತಲೆಮರಿಸಿಕೊಂಡಿದ್ದ ಗ್ಯಾಂಗಸ್ಟರ್​ ವಿಕಾಸ್​ ದುಬೆಯನ್ನು ಉತ್ತರ ಪ್ರದೇಶ ಪೊಲೀಸರು ಉಜ್ಜಯಿನಿಯಲ್ಲಿ ಬಂಧಿಸಿದ್ದಾರೆ.

ವಿಕಾಸ್ ದುಬೆ ಉಜ್ಜೈನ್ ನಲ್ಲಿರುವ ಮಹಾಕಾಲ್ ದೇವಸ್ಥಾನಕ್ಕೆ ಹೋಗಿದ್ದನು. ದೇವಸ್ಥಾನದ ಭದ್ರತಾ ಸಿಬ್ಬಂದಿ ದುಬೆಯನ್ನು ಗುರುತಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವಸ್ಥಾನದಿಂದ ಹೊರ ಬರೋಷ್ಟರಲ್ಲಿ ಬಂದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Home add -Advt

ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು.ಈ ವೇಳೆ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ 4 ಪೊಲೀಸರು ಮೃತಪಟ್ಟಿದ್ದರು. ಇದೇ ಸಂದರ್ಭದಲ್ಲಿ ದುಬೆ ಬೆಂಬಲಿಗರು ಪೊಲೀಸರ ಬಳಿಯಿದ್ದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು.

ಈ ಘಟನೆ ನಂತರ ವಿಕಾಸ್​ ತಲೆಮೆರಿಸಿಕೊಂಡಿದ್ದ. ಈತನಿಗಾಗಿ ಪೊಲೀಸರು ಬಲೆ ಬೀಸಿದ್ದರು. ಈ ಮಧ್ಯೆ ಆತನ ಆಪ್ತ ಅಮರ್, ಸಹಚರರಾದ ಪ್ರಭಾತ್ ಹಾಗೂ ರಣಬೀರ್​​ನನ್ನು ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಈಗ ವಿಕಾಸ್ ದುಬೆ​ನನ್ನು ಪೊಲೀಸರು ಬಂಧಿಸಿದ್ದಾರೆ.

ಮಧ್ಯ ಪ್ರದೇಶದ ಉಜ್ಜಯಿನಿಯಲ್ಲಿ ವಿಕಾಸ್​ ಅಡಗಿರುವ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದ್ದಾರೆ. ಸದ್ಯ, ಈತನನ್ನು ಕಾನ್ಪುರಕ್ಕೆ ಕರೆತರಲಾಗುತ್ತಿದ್ದು, ಶೀಘ್ರವೇ ಕೋರ್ಟ್​ ಮುಂದೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

Related Articles

Back to top button