*ಶುಕ್ರವಾರ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅಂಗನವಾಡಿ ಸುವರ್ಣ ಮಹೋತ್ಸವ*

ಗಣ್ಯರ ಉಪಸ್ಥಿತಿಯಲ್ಲಿ ಹಲವು ಯೋಜನೆಗಳಿಗೆ ಚಾಲನೆ
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನಸಿನ ಮೂರು ಐತಿಹಾಸಿಕ ಯೋಜನೆಗಳಿಗೆ ಚಾಲನೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅಂಗನವಾಡಿ (ಐಸಿಡಿಎಸ್) ಯೋಜನೆಯ ಸುವರ್ಣ ಮಹೋತ್ಸವ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಉಪಸ್ಥಿತಿಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ. ಜಿಪರಮೇಶ್ವರ ಸೇರಿದಂತೆ ರಾಜ್ಯದ ವಿವಿಧ ಸಚಿವರು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
30 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು ಸಹ ಭಾಗವಹಿಸುವರು.
ಏನೇನು ಕಾರ್ಯಕ್ರಮ?
ಅಂದು ನಡೆಯಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಮಕ್ಕಳ ದಿನಾಚರಣೆ, ವಿಶ್ವ ಹಿರಿಯ ನಾಗರಿಕ ದಿನಾಚರಣೆ, ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂರು ಮಹಾತ್ವಾಕಾಂಕ್ಷಿ ಯೋಜನೆಗಳ ಲೋಕಾರ್ಪಣೆ ನಡೆಯಲಿದೆ.
ಮಕ್ಕಳ ದಿನಾಚರಣೆಯ ನಿಮಿತ್ತ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರದಾನ, ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳಿಗೆ ರಾಜ್ಯ ಪ್ರಶಸ್ತಿ ಪ್ರದಾನ, ಹಿರಿಯ ನಾಗರಿಕರಿಗೆ ಪ್ರಶಸ್ತಿ ಪ್ರದಾನ, ಉತ್ತಮ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಪ್ರಶಸ್ತಿ ಪ್ರದಾನ, ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ಕಿರುಚಿತ್ರ ಬಿಡುಗಡೆ, ಜೊತೆಗೆ ಕಾರ್ಪೋರೇಟ್ ಮೈ ಸ್ಟ್ಯಾಂಪ್ ಬಿಡುಗಡೆ ಮಾಡಲಾಗುವುದು.
ಬಳಿಕ ಗೃಹಲಕ್ಷ್ಮೀ ವಿವಿದೋದ್ದೇಶ ಸಹಕಾರ ಸಂಘದ ಉದ್ಘಾಟನೆ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಮತ್ತು ಭದ್ರತೆಗಾಗಿ ಅಕ್ಕಪಡೆ ಯೋಜನೆಯ ಘೋಷಣೆ ಹಾಗೂ 5000 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್ಕೆಜಿ, ಯುಕೆಜಿ) ಆರಂಭಿಸುವ ಘೋಷಣೆ ಮಾಡಲಾಗುವುದು.
ಯೋಜನೆಗಳ ಪರಿಚಯ
- ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯೂ ಯಶಸ್ವಿಯಾಗಿ ಸಾಗುತ್ತಿದ್ದು, ಸುಮಾರು 1 ಕೋಟಿ 24 ಲಕ್ಷದ 12 ಸಾವಿರದ ಫಲಾನುಭವಿಗಳಿಗೆ ಇದುವರೆಗೂ 52 ಸಾವಿರ ಕೋಟಿ ರೂಪಾಯಿಗೂ ಅಧಿಕ ಹಣವನ್ನು ಸಂದಾಯ ಮಾಡಲಾಗಿದೆ. ಇದೀಗ ಈ ಯೋಜನೆಯ ಮುಂದುವರಿದ ಭಾಗವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಸ್ಥಾಪಿಸಲಾಗುತ್ತಿದೆ. ಫಲಾನುಭವಿಗಳು/ಸದಸ್ಯರು ಷೇರುದಾರರಾಗಿರುತ್ತಾರೆ. ಈ ಮಹಿಳಾ ಸಹಕಾರಿ ಬ್ಯಾಂಕ್ ಕನಿಷ್ಠ ರೂ. 1,000 ಕೋಟಿ ಕಾರ್ಯನಿರತ ಬಂಡವಾಳವನ್ನು ಹೊಂದುವ ನಿರೀಕ್ಷೆಯಿದೆ. ಇದರಿಂದಾಗಿ ರಾಜ್ಯಾದ್ಯಂತ ಮಹಿಳೆಯರಲ್ಲಿ ಆರ್ಥಿಕ ಸ್ವಾತಂತ್ರ್ಯವನ್ನು ಹೆಚ್ಚಿಸಲು ಅನುಕೂಲವಾಗುತ್ತದೆ. - ಅಕ್ಕ ಪಡೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸದಾ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುತ್ತಾ ಬಂದಿದ್ದು, ಈ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲು, ಇಡೀ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಅಕ್ಕ ಪಡೆ ಯೋಜನೆಯನ್ನು ಇಲಾಖೆ ಮುಖಾಂತರ ಪರಿಚಯಿಸಲಾಗುತ್ತಿದೆ. ಪ್ರತಿಯೊಂದು ಅಕ್ಕ ಪಡೆಯು ತರಬೇತಿ ಪಡೆದ 10 ಮಹಿಳೆಯರನ್ನು ಒಳಗೊಂಡಿರುತ್ತದೆ. ವಾಹನ ವ್ಯವಸ್ಥೆ ಹೊಂದಿರುವ ಈ ತಂಡವು ಎರಡು ಪಾಳಿಗಳಲ್ಲಿ ದಿನದ 24/7 ಕಾರ್ಯನಿರ್ವಹಿಸುತ್ತದೆ. ಶಾಲಾ ಬಾಲಕಿಯರು, ಹದಿಹರೆಯದ ಹುಡುಗಿಯರು, ಕೆಲಸ ಮಾಡುವ ಮಹಿಳೆಯರು ಮತ್ತು ಎಲ್ಲಾ ವಯೋಮಾನದ ಮಹಿಳೆಯರ ಸುರಕ್ಷತೆಯತ್ತ ಗಮನಹರಿಸುವ ಅಕ್ಕ ಪಡೆಯು ರಾಜ್ಯ ಗೃಹ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕದಾದ್ಯಂತ ಮಹಿಳೆಯರಲ್ಲಿ ಹೆಚ್ಚಿನ ಆತ್ಮವಿಶ್ವಾಸ ತುಂಬುವ ಗುರಿಯನ್ನು ಹೊಂದಿದೆ. - ಅಂಗನವಾಡಿ ಕೇಂದ್ರಗಳಲ್ಲಿ (ಎಲ್ಕೆಜಿ / ಯುಕೆಜಿ) / ಪೂರ್ವ ಪ್ರಾಥಮಿಕ ತರಗತಿಗಳ ಆರಂಭ
ದೇಶದಲ್ಲಿಯೇ ಮೊದಲ ಬಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಮತ್ತು ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿದೆ ಮತ್ತು ಈ ಕ್ರಮವು ಮಕ್ಕಳಲ್ಲಿ ಪ್ರಾಥಮಿಕ ಕಲಿಕೆಯನ್ನು ಹೆಚ್ಚಿಸುತ್ತಿದೆ. ಈ ಯೋಜನೆಯನ್ನು 2025ರ ನವೆಂಬರ್ನಲ್ಲಿ ರಾಜ್ಯಾದ್ಯಂತ 5,000 ಅಂಗನವಾಡಿ ಕೇಂದ್ರಗಳಿಗೆ ವಿಸ್ತರಿಸಲಾಗುತ್ತಿದೆ. ಈ ಯೋಜನೆಯಿಂದ 03 ರಿಂದ 06 ವರ್ಷ ವಯಸ್ಸಿನ 01 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪ್ರಯೋಜನವಾಗಲಿದೆ.
