Kannada NewsKarnataka NewsLatest

*ಸರ್ಕಾರಿ ನೌಕರರ ವರ್ಗಾವಣೆಗೆ ಹೊಸ ನಿಯಮ: ಮಹತ್ವದ ಮಾರ್ಗಸೂಚಿ ಹೊರಡಿಸಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿದ್ದ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಮಾರ್ಗಸೂಚಿಯನ್ನು ಹೊರಡಿಸಿದೆ. ಇನ್ನು ಮುಂದೆ ಯಾವುದೇ ಅಧಿಕಾರಿ ಅಥವಾ ನೌಕರರನ್ನು ಮುಂದಿನ ಹುದ್ದೆ (Next Posting) ಸೂಚಿಸದೆ ವರ್ಗಾವಣೆ ಮಾಡಬಾರದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.


ಅಬಕಾರಿ ಇಲಾಖೆಯ ಉಪ ಆಯುಕ್ತ ಕೆ. ಅರುಣ್ ಕುಮಾರ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಈ ಸುತ್ತೋಲೆಯನ್ನು ಹೊರಡಿಸಿದೆ. ನ್ಯಾಯಾಲಯದ ನಿರ್ದೇಶನದಂತೆ, ಯಾವುದೇ ನೌಕರರನ್ನು ಸ್ಥಳನಿಯುಕ್ತಿ ನೀಡದೆ ಅನಿರ್ದಿಷ್ಟಾವಧಿಗೆ ಕಡ್ಡಾಯ ನಿರೀಕ್ಷಣೆಯಲ್ಲಿಡುವುದು ಕಾನೂನುಬಾಹಿರ ಎಂದು ಸರ್ಕಾರ ತಿಳಿಸಿದೆ.

Home add -Advt


ಇದುವರೆಗೆ ಕೆಲವು ಸಂದರ್ಭಗಳಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬಳಿಕ ಹೊಸ ಹುದ್ದೆಗೆ ನಿಯೋಜನೆ ಮಾಡದೆ ಕಡ್ಡಾಯ ನಿರೀಕ್ಷಣೆಯಲ್ಲಿಡಲಾಗುತ್ತಿತ್ತು. ಇದರಿಂದ ನೌಕರರ ಹಕ್ಕುಗಳಿಗೆ ಧಕ್ಕೆಯಾಗುವುದರ ಜೊತೆಗೆ ಆಡಳಿತಾತ್ಮಕ ಕಾರ್ಯಚಟುವಟಿಕೆಗಳ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗುತ್ತಿತ್ತು.
ಹೊಸ ಮಾರ್ಗಸೂಚಿಯ ಪ್ರಕಾರ, ಸಾಮಾನ್ಯ ಸಂದರ್ಭಗಳಲ್ಲಿ ವರ್ಗಾವಣೆ ಆದೇಶದ ಜೊತೆಗೆ ಮುಂದಿನ ಹುದ್ದೆಯನ್ನು ಕಡ್ಡಾಯವಾಗಿ ಸೂಚಿಸಬೇಕು. ಇದರಿಂದ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಆಡಳಿತಾತ್ಮಕ ಸ್ಪಷ್ಟತೆ ಹೆಚ್ಚಲಿದೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.


ಆದರೆ, ಕಾನೂನು ಸಂಬಂಧಿತ ಸಮಸ್ಯೆಗಳು, ಅಮಾನತು, ಹಣಕಾಸು ದುರ್ಬಳಕೆ, ಅಧಿಕಾರ ದುರುಪಯೋಗ ಅಥವಾ ಗಂಭೀರ ಇಲಾಖಾ ವಿಚಾರಣೆಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಮಾತ್ರ ಅಧಿಕಾರಿಗಳನ್ನು ತಾತ್ಕಾಲಿಕವಾಗಿ ಕಡ್ಡಾಯ ನಿರೀಕ್ಷಣೆಯಲ್ಲಿಡಲು ಅವಕಾಶ ನೀಡಲಾಗಿದೆ. ಅಂತಹ ಸಂದರ್ಭಗಳಲ್ಲಿಯೂ ಗರಿಷ್ಠ ಒಂದು ತಿಂಗಳಿಗಿಂತ ಹೆಚ್ಚು ಕಾಲ ನಿರೀಕ್ಷಣೆಯಲ್ಲಿಡಬಾರದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.


ಅತ್ಯಂತ ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ಸೂಕ್ತ ಕಾರಣಗಳನ್ನು ಲಿಖಿತವಾಗಿ ದಾಖಲಿಸಿ, ಮುಖ್ಯಮಂತ್ರಿಯವರ ಪೂರ್ವಾನುಮೋದನೆ ಪಡೆದು ಗರಿಷ್ಠ ಮೂರು ತಿಂಗಳವರೆಗೆ ಕಡ್ಡಾಯ ನಿರೀಕ್ಷಣೆಯಲ್ಲಿಡಬಹುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.


ಈ ಆದೇಶವು ನೌಕರರ ಹಕ್ಕುಗಳ ರಕ್ಷಣೆಗೆ ಪೂರಕವಾಗುವುದರ ಜೊತೆಗೆ, ಇಲಾಖೆಗಳ ಕಾರ್ಯನಿರ್ವಹಣೆಯಲ್ಲಿ ಶಿಸ್ತು ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ನಿರೀಕ್ಷೆ ಇದೆ. ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುವ ಅಸ್ಪಷ್ಟತೆಗಳಿಗೆ ತೆರೆ ಎಳೆದು, ನೌಕರರಿಗೆ ನ್ಯಾಯಸಮ್ಮತ ಆಡಳಿತ ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.


ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿರುವ ಈ ಸುತ್ತೋಲೆಯನ್ನು ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರಿಗೆ ಕಳುಹಿಸಲಾಗಿದೆ.

Related Articles

Back to top button