Kannada NewsLatest

ಬಿಮ್ಸ್ ನ‌ ಫಾರ್ಮಾಸಿಸ್ಟ್ ಮೇಲೆ ಕ್ರಮ; ಹಲವು ಕಟ್ಟುನಿಟ್ಟಿನ ಸೂಚನೆ ನೀಡಿದ ಕಾರಜೋಳ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್, ರೆಮಿಡಿಸಿವಿರ್ ಒದಗಿಸುವುದರ ಜತೆಗೆ ಕೋವಿಡ್ ನಿಯಂತ್ರಣಕ್ಕೆ ಸರಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ (ಮೇ. 6) ನಡೆದ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದಲ್ಲದೇ ಮಾರ್ಗಸೂಚಿ ಪಾಲಿಸಲು ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳಬೇಕು. ಆಕ್ಸಿಜನ್ ಲಭ್ಯತೆ ಬಗ್ಗೆ ನಿರಂತರ ನಿಗಾ ವಹಿಸಬೇಕು. ಖಾಸಗಿ ಅಥವಾ ಸರಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಬಾರದು. ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ 24 ತಾಸು ಕೆಲಸ ಮಾಡಬೇಕು ವೈದ್ಯರು ಸ್ವತಃ ಕೋವಿಡ್ ವಾರ್ಡುಗಳಿಗೆ ಹೋಗಿ ನಿಯಮಿತವಾಗಿ ಪರಿಶೀಲಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಗೋಕಾಕ, ಸವದತ್ತಿ ಹಾಗೂ ಬೆಳಗಾವಿ ಸೇರಿದಂತೆ ಕೆಲ ತಾಲ್ಲೂಕುಗಳಲ್ಲಿ ಸೋಂಕಿನ‌ ಪ್ರಮಾಣ ದಿಢೀರ್ ಹೆಚ್ಚಳವಾಗಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಸಚಿವರು, ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ತಪಾಸಣೆಗೆ ಅಗತ್ಯವಿರುವ ಪ್ರಯೋಗಾಲಯದ ಸ್ಥಾಪನೆಗೆ ಅಗತ್ಯವಿರುವ ಪ್ರಸ್ತಾವವನ್ನು ಕಳಿಸಿದರೆ ಇದಕ್ಕೆ ಸರಕಾರದ ಮಟ್ಟದಲ್ಲಿ ಮಂಜೂರಾತಿ ಒದಗಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ಮೊದಲ ಲಸಿಕೆ ಪಡೆದುಕೊಂಡಿರುವವರಿಗೆ ಆದ್ಯತೆ ಮೇರೆಗೆ ಎರಡನೇ ಡೋಸ್ ಲಸಿಕೆ‌ ನೀಡಬೇಕು. ಲಸಿಕೆ ವ್ಯರ್ಥವಾಗದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು.

ಬಿಮ್ಸ್ ಗೆ ಇನ್ನೊಂದು ಆಕ್ಸಿಜನ್ ಘಟಕ- ಪ್ರಸ್ತಾವಕ್ಕೆ ಸೂಚನೆ:

ಬಿಮ್ಸ್ ಗೆ ಇನ್ನೊಂದು ಆಕ್ಸಿಜನ್ ಸಂಗ್ರಹ ಘಟಕ ಸ್ಥಾಪಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗಿದೆ. ಈ‌ ಕುರಿತು ಪ್ರಸ್ತಾವ ಸಲ್ಲಿಸಲು ತಿಳಿಸಿದರು. ಓ.ಎನ್.ಜಿ.ಸಿ‌ ಆಕ್ಸಿಜೆನ್ ಘಟಕವನ್ನು ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸ್ಥಾಪಿಸಲು ಮನವಿ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸ್ಥಳ ಗುರುತಿಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕೂಡಲೇ ಪತ್ರ ಬರೆಯುವಂತೆ ನಿರ್ದೇಶನ ನೀಡಿದರು.

ಆಕ್ಸಿಜನ್ ಕೊರತೆಯಾಗದಂತೆ ಹೆಚ್ಚುವರಿ ಟ್ಯಾಂಕರ್ ಅಥವಾ ಚಾಲಕರನ್ನು ನಿಯೋಜಿಸಲು ಸೂಚನೆ ನೀಡಿದರು. ಕೆಲವು ಕಡೆಗಳಲ್ಲಿ ರೋಗಿಗಳಿಗೆ ನಿಗದಿತ‌ ಪ್ರಮಾಣಕ್ಕಿಂತ ಹೆಚ್ಚಿನ ಆಕ್ಸಿಜನ್ ಬಳಕೆ ಮಾಡಲಾಗುತ್ತಿದೆ ಎಂದು ದೂರುಗಳಿವೆ. ಆದ್ದರಿಂದ ಈ ಬಗ್ಗೆ ಆಸ್ಪತ್ರೆಗಳಲ್ಲಿ ವೈದ್ಯರು ನಿಗಾ ವಹಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ಅವರು ಬಿಮ್ಸ್ ಅಧಿಕಾರಿಗಳಿಗೆ ನಿರ್ದೆಶನ ನೀಡಿದರು.

ವಾರ್ ರೂಮ್ ಚುರುಕುಗೊಳಿಸಲು ನಿರ್ದೇಶನ:

ಸೋಂಕಿತರಿಗೆ ತುರ್ತು ಚಿಕಿತ್ಸೆ ಮತ್ತು ಬೆಡ್ ಒದಗಿಸುವುದಕ್ಕೆ ಸಂಬಂಧಿಸಿದಂತೆ ವಾರ್ ರೂಮ್ ನಲ್ಲಿ ಸಮರ್ಪಕವಾಗಿ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ವಾರ್ ರೂಮ್ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಚುರುಕುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟಾರೆ 102 ಆಂಬ್ಯುಲೆನ್ಸ್ ಗಳಿವೆ.‌ ಇವುಗಳ ಸಂಚಾರದ ಮೇಲೆ ನಿಗಾವಹಿಸಬೇಕು. ಸದ್ಬಳಕೆ ಮಾಡಿಕೊಳ್ಳಲು ಕಡ್ಡಾಯವಾಗಿ ಲಾಗ್ ಬುಕ್ ನಿರ್ವಹಿಸಲು ತಿಳಿಸಿದರು. ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಒದಗಿಸಲು‌ ವೆಬ್ ಸೈಟ್ ಅಭಿವೃದ್ಧಿಪಡಿಸಲು ತಿಳಿಸಿದರು.

ಸಕ್ಕರೆ ಕಾರ್ಖಾನೆಗಳಿಂದ ಸಿಲಿಂಡರ್ ಬಳಕೆಗೆ ಸಲಹೆ:

ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಆಕ್ಸಿಜನ್ ಸಿಲಿಂಡರ್ ಗಳನ್ನು ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದುಕೊಂಡು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಕಲ್ಪಿಸಬೇಕು. ಪರಿಸ್ಥಿತಿ ಸುಧಾರಿಸಿದ ಬಳಿಕ ಆಯಾ ಕಾರ್ಖಾನೆಗಳಿಗೆ ಸಿಲಿಂಡರ್ ಗಳನ್ನು ಹಿಂದಿರುಗಿಸಬೇಕು.‌ ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಎಲ್ಲರೂ ಸಹಕಾರ ನೀಡಲಿದ್ದು, ಇದನ್ನು‌ ಬಳಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಮಹಾರಾಷ್ಟ್ರದಲ್ಲಿ ಇಥೆನಾಲ್ ಘಟಕ ಹೊಂದಿರುವ ಸಕ್ಕರೆ ಕಾರ್ಖಾನೆಗಳು ಆಕ್ಸಿಜನ್ ಉತ್ಪಾದಿಸಿ ಸರಬರಾಜು ಮಾಡುತ್ತಿವೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.

ಇನ್ನು ಕೆಲವು ದಿನಗಳಲ್ಲಿ ರೆಮಿಡಿಸಿವಿರ್ ಬೆಳಗಾವಿಯಲ್ಲಿ ಉತ್ಪಾದನೆ ಯಾಗಲಿದ್ದು, ಇದರಿಂದ ಕೊರತೆ ನೀಗಲಿದೆ ಎಂದರು. ಆರೋಗ್ಯ ಇಲಾಖೆಯ ಸಿಬ್ಬಂದಿ ಕೊರತೆಗೆ ತಕ್ಷಣವೇ ಕ್ರಮ‌ಕೈಗೊಳ್ಳುವಂತೆ ಹೇಳಿದರು. ಸಹಾಯವಾಣಿ ಸಮರ್ಪಕವಾಗಿ ಬಳಸಬೇಕು. ಸಹಾಯ ಅಥವಾ ಮಾಹಿತಿ ಕೇಳುವ ಸಾರ್ವಜನಿಕರಿಗೆ ತಕ್ಷಣವೇ ಮಾಹಿತಿಯನ್ನು ಒದಗಿಸಬೇಕು. ಪ್ರತಿ ಕರೆಗಳಿಗೂ ಸೂಕ್ತ ಸ್ಪಂದನೆ ಇರಬೇಕು.

ಕೆ.ಎಂ.ಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರು 200 ಆಕ್ಸಿಜನ್ ಬೆಡ್ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಇದರ ಪ್ರಯೋಜನ ಪಡೆಯುವಂತೆ ಸಚಿವರು ತಿಳಿಸಿದರು.

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದಂತೆ ಏನೇ ಅವಶ್ಯಕತೆಯಿದ್ದರೆ ತಕ್ಷಣವೇ ತಮ್ಮ ಗಮನಕ್ಕೆ ತರುವಂತೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಉಮೇಶ್ ಕತ್ತಿ ಅವರು, ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಇರುವ ಬೆಡ್ ಗಳ ಹಂಚಿಕೆಗೆ ಒಂದು ಸಮಿತಿ ರಚಿಸಬೇಕು. ಅದರ ಮೂಲಕವೇ ಬೆಡ್ ಹಂಚಿಕೆ ಮಾಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ 25 ಸಕ್ಕರೆ ಕಾರ್ಖಾನೆಗಳಿದ್ದು, ಅವರಿಂದ ಸಿಲಿಂಡರ್ ಪಡೆದುಕೊಳ್ಳಬೇಕು ಎಂದರು.

ಕರ್ತವ್ಯ ನಿರ್ಲಕ್ಷ್ಯ; ಫಾರ್ಮಾಸಿಸ್ಟ್ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ:

ಇದೇ ವೇಳೆ ಮಾತನಾಡಿದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ ಅವರು, ಬಿಮ್ಸ್ ನಲ್ಲಿ 850 ಆಕ್ಸಿಜನ್ ಬೆಡ್ ಗಳಿದ್ದು, ಅವುಗಳಿಗೆ ಸಮರ್ಪಕ ಆಕ್ಸಿಜನ್ ಪೂರೈಕೆ ವ್ಯವಸ್ಥೆ ಮಾಡಿದರೆ ಸಮಸ್ಯೆಯನ್ನು ಪರಿಹರಿಸಬಹುದು ಎಂದು ಹೇಳಿದರು.

ಈ ಬಗ್ಗೆ ಹಲವಾರು ಬಾರಿ ಸಚಿವರ ಗಮನಕ್ಕೆ ತರಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು. ಬಿಮ್ಸ್ ನಲ್ಲಿ ಇರುವ ಸಮಸ್ಯೆಗಳ ಕುರಿತು ಸ್ಥಳೀಯ ಶಾಸಕರ ಗಮನಕ್ಕೆ ತಂದರೆ ತ್ವರಿತವಾಗಿ ಬಗೆಹರಿಸಲು ಸಾಧ್ಯವಾಗುತ್ತದೆ ಎಂದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಬಂಧಿಕರು ಕೂಡ ಕೋವಿಡ್ ವಾರ್ಡುಗಳಿಗೆ ಹೋಗುತ್ತಿರುವುದಕ್ಕೆ ಕಡಿವಾಣ ಹಾಕುವಂತೆ ಸೂಚನೆ ನೀಡಿದರು.

ಬಿಮ್ಸ್ ನ‌ ಫಾರ್ಮಾಸಿಸ್ಟ್ ಅವರು ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಫಾರ್ಮಾಸಿಸ್ಟ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಜಿಲ್ಲಾ ಸರ್ಜನ್ ಅವರಿಗೆ ಸೂಚನೆ ನೀಡಿದರು.

ಆಂಬ್ಯುಲೆನ್ಸ್ ಸೇವೆ ಒದಗಿಸಲು ಸಾವಿರಾರು ರೂಪಾಯಿ ಹಣವನ್ನು ಅಕ್ರಮವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಹೇಳಿದರು.

ಬಿಮ್ಸ್ ನಲ್ಲಿ ಬೆಡ್ ಗಳ ಸಂಖ್ಯೆ ಹೆಚ್ಚಿಸುವ ಮೂಲಕ ಸೋಂಕಿತರಿಗೆ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಬೇಕು ಎಂದರು. ತಾಲ್ಲೂಕು ಮಟ್ಟದಲ್ಲಿ ಸೋಂಕಿತರ ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ನೂರು‌ ಬೆಡ್ ಗಳ ಆಸ್ಪತ್ರೆ ಆರಂಭಿಸಬೇಕು. ಇದರಿಂದ ಜಿಲ್ಲಾ ಕೇಂದ್ರದ ಮೇಲೆ ಒತ್ತಡ ಕಡಿಮೆಯಾಗಲಿದೆ ಎಂದು ಚನ್ನಮ್ಮನ ಕಿತ್ತೂರು ಶಾಸಕ ಮಹಾಂತೇಶ ದೊಡಗೌಡ್ರ ತಿಳಿಸಿದರು. ಜಿಲ್ಲಾಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಾರ್ ರೂಮ್ ಹಾಗೂ ಅದರ ಬಳಕೆ ಕುರಿತು ‌ಹೆಚ್ಚಿನ ಮಾಹಿತಿಯನ್ನು ಜನರಿಗೆ ನೀಡಬೇಕು ಎಂದು ಸಲಹೆ ನೀಡಿದರು.

ನಗರದ ಎಲ್ಲ ಪ್ರದೇಶದಲ್ಲಿ ಪ್ಯೂಮಿಗೇಷನ್ ಮಾಡುವಂತೆ ಸಂಸದೆ ಮಂಗಲಾ ಅಂಗಡಿ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾರ್ಗಸೂಚಿ ಉಲ್ಲಂಘಿಸಿದರೆ ಕೇಸ್ ದಾಖಲು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button