
ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಇದುವರೆಗೂ ರೂ.1,06,066 ಕೋಟಿ ಖರ್ಚು ಮಾಡಿದೆ. ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಹಣ ವ್ಯಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿಯ ವಿಧಾನಮಂಡಲದ ಅಧಿವೇಶನದ ವಿಧಾನ ಸಭೆ ಕಲಾಪಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಗೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದರು.
ಸಾಮಾಜಿಕ ಹಾಗೂ ಅರ್ಥಿಕ ಅಸಮತೋಲನ ಸರಿಪಡಿಸುವ ಸಲುವಾಗಿಯೇ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಒಟ್ಟು ಜನಸಂಖ್ಯೆಯಲ್ಲಿ ದಕ್ಷಿಣ ಭಾಗದಲ್ಲಿ ಶೇ.58 ರಷ್ಟು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಶೇ.42 ರಷ್ಟು ಜನಸಂಖ್ಯೆಯಿದೆ. ಆದರೆ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಡಿ ಶೇ.43.63 ರಷ್ಟು ಹಣವನ್ನು ಉತ್ತರ ಕರ್ನಾಟಕ ಭಾಗಕ್ಕೆ ಖರ್ಚು ಮಾಡಿದೆ.
ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಾದ್ಯಂತ 1,24,12,543 ಫಲಾನುಭವಿಗಳು ಇದ್ದಾರೆ. ಈ ಪೈಕಿ ಉತ್ತರ ಕರ್ನಾಟಕ ಭಾಗದಲ್ಲಿ 58,92,156 ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ರೂ.52,400 ಕೋಟಿ ಖರ್ಚು ಮಾಡಿದ್ದು, ಇದರಲ್ಲಿ ಉತ್ತರ ಕರ್ನಾಟಕ ಭಾಗದ ಫಲಾನುಭವಿಗಳ ಖಾತೆಗೆ ರೂ.24,631 ಕೋಟಿ ಜಮೆ ಮಾಡಿದೆ.
ಗೃಹಜ್ಯೋತಿ ಯೋಜನೆಯಡಿ ರಾಜ್ಯದ್ಯಂತ 1,65,24,547 ಮನೆಗಳಿಗೆ 200 ಯುನಿಟ್ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಪೈಕಿ ಉತ್ತರ ಕರ್ನಾಟಕ ಭಾಗದ 56,70,211 ಮನೆಗಳು ಉಚಿತ ವಿದ್ಯುತ್ ಪಡೆಯುತ್ತಿವೆ. ಇದಕ್ಕಾಗಿ ರಾಜ್ಯದ್ಯಂತ ರೂ.20,639 ಕೋಟಿ ವೆಚ್ಚ ಮಾಡಿದ್ದು ಈ ಪೈಕಿ ರೂ.6038 ಉತ್ತರ ಕರ್ನಾಟಕ ಭಾಗಕ್ಕೆ ಖರ್ಚಾಗಿದೆ.
ಯುವನಿಧಿ ಯೋಜನೆಯಡಿ ರಾಜ್ಯಾದ್ಯಂತ 2,84,802 ಕೋಟಿ ಫಲಾನುಭವಿಗಳಿದ್ದಾರೆ. ಈ ಪೈಕಿ ಉತ್ತರ ಕರ್ನಾಟಕದಲ್ಲಿ 1,73,722 ನಿರುದ್ಯೋಗಿ ಫಲಾನುಭವಿಗಳು ಯೋಜನೆಯಡಿ ಭತ್ಯೆ ಪಡೆಯುತ್ತಿದ್ದಾರೆ. ಯೋಜನೆಗೆ ರಾಜ್ಯದಲ್ಲಿ ರೂ.750 ಕೋಟಿ ಖರ್ಚಾಗಿದ್ದು, ರೂ.456 ಕೋಟಿಯನ್ನು ಉತ್ತರ ಕರ್ನಾಟಕ ಫಲಾನುಭವಿಗಳ ಖಾತೆ ಜಮೆ ಮಾಡಲಾಗಿದೆ. ಇದೇ ರೀತಿ ಅನ್ನಭಾಗ್ಯ ಯೋಜನೆಯಡಿ ಉತ್ತರ ಕರ್ನಾಟಕಕ್ಕೆ ರೂ.7848 ಕೋಟಿ, ಶಕ್ತಿ ಯೋಜನೆಯಡಿ ರೂ.7027 ಕೋಟಿ ವ್ಯಯಿಸಲಾಗಿದೆ ಎಂದರು.
ಉತ್ತರ ಕರ್ನಾಟಕದ 10 ಜಿಲ್ಲೆಗಳ ತಲಾ ಆದಾಯ ರೂ.2 ಲಕ್ಷಕ್ಕಿಂತ ಕಡಿಮೆ:
ರಾಜ್ಯದ ಜನಸಂಖ್ಯೆ 6.95 ಕೋಟಿ ಎಂದು ಅಂದಾಜಿಸಲಾಗಿದೆ. ಈ ಪೈಕಿ ಉತ್ತರ ಕರ್ನಾಟಕ ಭಾಗದ ಜನಸಂಖ್ಯೆ 2,96,28,767 ಆಗಿದೆ. ಸುಮಾರು 4 ಕೋಟಿಗೂ ಅಧಿಕ ಜನರು ದಕ್ಷಿಣ ಕರ್ನಾಟಕ ಭಾಗದಲ್ಲಿ ವಾಸವಾಗಿದ್ದಾರೆ. 31 ಜಿಲ್ಲೆಗಳ ಪೈಕಿ 14 ಜಿಲ್ಲೆಗಳು ಉತ್ತರ ಕರ್ನಾಟಕ ಭಾಗದಲ್ಲಿವೆ. 224 ವಿಧಾನಸಭೆ ಕ್ಷೇತ್ರಗಳ ಪೈಕಿ 97 ವಿಧಾನಸಭೆ ಕ್ಷೇತ್ರಗಳು ಉತ್ತರ ಕರ್ನಾಟಕದಲ್ಲಿವೆ. ರಾಜ್ಯದ ಸರಾಸರಿ ತಲಾ ಆದಾಯ ರೂ.3,39,813 ಗಳಾಗಿದೆ. ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಫಲವಾಗಿ ತಲಾ ಆದಾಯ ಹೆಚ್ಚಾಗಿದೆ. ಆದರೆ ಉತ್ತರ ಕರ್ನಾಟಕದ 10 ಜಿಲ್ಲೆಗಳ ತಲಾ ಆದಾಯ ರೂ.2 ಲಕ್ಷಕ್ಕಿಂತ ಕಡಿಮೆಯಿದೆ. ಕಲಬುರ್ಗಿ ತಲಾ ಆದಾಯದಲ್ಲಿ ಕೊನೆಯ ಸ್ಥಾನದಲ್ಲಿದೆ. ಇದು ಪ್ರಾದೇಶಿಕ ಅಸಮತೋಲವನ್ನು ಎತ್ತಿ ತೋರಿಸುತ್ತದೆ. ಅಸಮಾನತೆ ಇದ್ದರೆ ಸಂವಿಧಾನ ಧ್ಯೇಯೊದ್ದೇಶಗಳು ಈಡೇರಿಕೆಯಾಗುವುದಿಲ್ಲ. ಸ್ವಾತಂತ್ರ್ಯ ಪಡೆದಿದ್ದಕ್ಕೆ ಸಾರ್ಥಕತೆ ಇರುವುದಿಲ್ಲ ಎಂದು ಮುಖ್ಯಮುಂತ್ರಿ ಸಿದ್ದರಾಮಯ್ಯ ಹೇಳಿದರು.
ಹೈನುಗಾರಿಕೆ ಆಸಕ್ತಿ ಕಡಿಮೆ : ಮುಖ್ಯಮಂತ್ರಿ ವಿಶ್ಲೇಷಣೆ
ತಲಾ ಆದಾಯದಲ್ಲಿ ಉತ್ತರ ಕರ್ನಾಟಕ ಭಾಗ ಹಿಂದುಳಿದಿರುವಿಕೆ ಬಗ್ಗೆ ವಿಶ್ಲೇಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 1985ರಲ್ಲಿ ನಾನು ಹೈನುಗಾರಿಕೆ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಅಂದಿನಿಂದಲೂ ಉತ್ತರ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಗೆ ಆಸಕ್ತಿ ಕಡಿಮೆಯಿದೆ ಎಂದರು.
ಬೆಂಗಳೂರು ಸಹಕಾರಿ ಹಾಲು ಒಕ್ಕೂಟದಲ್ಲಿ ದಿನ ಒಂದಕ್ಕೆ 17 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತದೆ. ಆದರೆ ಕಲಬುರ್ಗಿ, ಯಾದಗಿರಿ, ಬೀದರ್ ರಾಯಚೂರು ಸಹಕಾರಿ ಹಾಲು ಒಕ್ಕೂಟದಲ್ಲಿ ದಿನ ಒಂದಕ್ಕೆ ಕೇವಲ 67 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತದೆ. ರಾಜ್ಯದ ಎಲ್ಲಾ ಸಹಕಾರಿ ಒಕ್ಕೂಟಗಳಲ್ಲಿ ದಿನ ಒಂದಕ್ಕೆ 1 ಕೋಟಿ ಲೀಟರ್ ಹಾಲು ಸಂಗ್ರಹಣೆಯಾದರೆ, ಇದರಲ್ಲಿ ಉತ್ತರ ಕರ್ನಾಟಕ ಭಾಗದ ಸಹಕಾರಿ ಹಾಲು ಒಕ್ಕೂಟಗಳಲ್ಲಿ ಕೇವಲ 10 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತದೆ.
ಹೈನುಗಾರಿಕೆ ಆದಾಯದ ಉತ್ತಮ ಮೂಲವಾಗಿದೆ. ರಾಜ್ಯ ಸರ್ಕಾರವು ಇದಕ್ಕೆ ಪ್ರೋತ್ಸಾಹ ನಿಡುತ್ತಿದ್ದು, ರೈತರಿಗೆ ಪ್ರತಿ ಲೀಟರ್ಗೆ ರೂ.7 ಪ್ರೋತ್ಸಾಹ ಧನ ನೀಡುತ್ತಿದೆ. ಈ ಇದಕ್ಕಾಗಿ ಪ್ರತಿದಿನ ರೂ.5 ಕೋಟಿ ವೆಚ್ಚವಾಗುತ್ತದೆ. ಉತ್ತರ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆ ಹೆಚ್ಚಾದರೆ ಜನರ ಆದಾಯವು ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಿಪ್ರಾಯಪಟ್ಟರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ರೂ.24,778 ಕೋಟಿ ಅನುದಾನ:
ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ 1990ರಲ್ಲಿ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಯಿತು. 2013ರಲ್ಲಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು 371(ಜೆ) ಅಡಿ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿತು. ತದ ನಂತರ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿüವೃದ್ಧಿ ಮಂಡಳಿ(ಕೆ.ಕೆ.ಆರ್.ಡಿ.ಬಿ)ಯಾಗಿ ಮರುನಾಮಕರಣ ಮಾಡಲಾಗಿದ್ದು, ಇದುವರೆಗೂ ರೂ.24,778 ಕೋಟಿ ಅನುದಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
371(ಜೆ) ತಿದ್ದುಪಡಿಯ ನಂತರ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಹೆಚ್.ಕೆ.ಪಾಟೀಲ್ ಅವರ ಅಧ್ಯಕ್ಷತೆಯ ಸಮಿತಿ ಮಾಡಿ ವರದಿ ಪಡೆಯಲಾಯಿತು. ಈ ವರದಿಯಲ್ಲಿ ಸೂಚಿಸಿದ ಮಾದರಿಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಎ ಹಾಗೂ ಬಿ ಗ್ರೂಪ್ ಹುದ್ದೆಗಳಲ್ಲಿ ಶೇ.75 ರಷ್ಟು, ಸಿ ಗ್ರೂಪ್ ಹುದ್ದೆಗಳಲ್ಲಿ ಶೇ.80 ಹಾಗೂ ಡಿ ಗ್ರೂಪ್ ಹುದ್ದೆಗಳಲ್ಲಿ ಶೇ.85 ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ಶೇ.8 ರಷ್ಟು ಮೀಸಲಾತಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿಯನ್ನು ಹೈದರಾಬಾದ್ ಕರ್ನಾಟಕ ಅಭ್ಯರ್ಥಿಗಳಿಗೆ ನೀಡಲಾಗಿದೆ.
ಇದರ ಪರಿಣಾಮವಾಗಿ ಇದುವರೆಗೂ ಈ ಭಾಗದ ವಿದ್ಯಾರ್ಥಿಗಳಿಗೆ 10,000 ವೈದ್ಯಕೀಯ, 31,000 ಇಂಜಿನಿಯರಿಂಗ್, ಡೆಂಟಲ್ ಹೋಮಿಯೋಪತಿ ಸೇರಿದಂತೆ ಇತರೆ ವ್ಯಾಸಾಂಗಗಳಿಗೆ 12,000 ಸೀಟುಗಳು ಲಭ್ಯವಾಗಿವೆ. ಉನ್ನತ ವ್ಯಾಸಾಂಗದಲ್ಲಿ ಒಟ್ಟು 51,606 ವಿದ್ಯಾರ್ಥಿಗಳಿಗೆ ಲಾಭವಾಗಿದೆ. ರಾಜ್ಯ ಸರ್ಕಾರ 900 ಕೆ.ಪಿ.ಎಸ್ ಶಾಲೆಗಳನ್ನು ತೆರೆಯಲು ಅನುಮೊದನೆ ನೀಡಿದೆ. ಈ ಫೈಕಿ 300 ಶಾಲೆಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆರೆಯಲಾಗುವುದು. ಇದರೊಂದಿಗೆ ಈ ಭಾಗದಲ್ಲಿ ಖಾಲಿಯಿರುವ 32,000 ಹುದ್ದೆಗಳ ಭರ್ತಿಗೂ ಅನುಮೋದನೆ ನೀಡಲಾಗಿದೆ ಎಂದರು.
ಡಾ.ನಂಜುಡಪ್ಪ ವರದಿಯ ಅನುಷ್ಠಾನದ ಕುರಿತು ಅಧ್ಯಯನ ನಡೆಸಲು ಆರ್ಥಿಕ ತಜ್ಞ ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಬರುವ ಜನವರಿಯಲ್ಲಿ ತನ್ನ ವರದಿ ನೀಡಲಿದೆ. ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ ಆರ್ಥಿಕ ತಜ್ಞೆ ಪ್ರೊ.ಛಾಯಾ ದೇವಣಗಾಂವ್ಕರ್ ಅವರ ಸಮಿತಿ 400 ಪುಟಗಳ ವರದಿ ನೀಡಿದೆ. ಈ ಎರಡು ವರದಿಗಳ ಶಿಫಾರಸ್ಸುಗಳನ್ನು ಯಥಾವತ್ತಾಗಿ ಸರ್ಕಾರ ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆ ಕುರಿತು ಪರಿಶೀಲನೆ:
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮಾದರಿಯಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಪ್ರತಿ ವರ್ಷ ರೂ.5000 ಕೋಟಿ ಅನುದಾನ ನೀಡುವಂತೆ ಶಾಸಕ ಎನ್.ಹೆಚ್.ಕೋನರೆಡ್ಡಿ ನೇತೃತ್ವದಲ್ಲಿ ಈ ಭಾಗದ ಎಲ್ಲಾ ಶಾಸಕರು ಮನವಿ ನೀಡಿದ್ದಾರೆ. ಪ್ರೊ.ಗೋವಿಂದರಾವ್ ಅವರ ವರದಿ ಬಳಿಕ ಈ ಕುರಿತು ಪರೀಶಿಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ನೀಡಿದರು.


