*ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

* *ರಾಜಾಜಿನಗರದಲ್ಲಿ ಕರ್ಮಣಿ ಉತ್ಸವಕ್ಕೆ ಚಾಲನೆ ನೀಡಿದ ಸಚಿವರು*
* *ಮೂರು ದಿನಗಳ ಕಾಲ ನಡೆಯಲಿರುವ ಕರ್ಮಣಿ ಉತ್ಸವ*
ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು:* ಮಹಿಳೆಯರ ಆರ್ಥಿಕ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ ಆಗಲಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ರಾಜಾಜಿನಗರದ ಶ್ರೀ ರಾಮ ಮಂದಿರದ ಆಟದ ಮೈದಾನದಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿರುವ ಕರ್ಮಣಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಡಿಜಿಟಲ್ ಮಾರ್ಕೆಟಿಂಗ್ ಗ್ರಾಮಾಂತರ ಮಹಿಳೆಯರಿಗೆ ಅನುಕೂಲ ಆಗಲಿದೆ, ಮುಂದಿನ ದಿನಗಳಲ್ಲಿ ಆ್ಯಪ್ ಬಗ್ಗೆ ತಿಳಿಸಲು ಕಾರ್ಯಗಾರ ಹಮ್ಮಿಕೊಳ್ಳಲಾಗುವುದು ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೆ ತರುತ್ತದೆ. ಕಾಂಗ್ರೆಸ್ ಪಕ್ಷದ ಸರ್ಕಾರಗಳು ಮಹಿಳೆಯರ ಪರ ಸದಾ ಚಿಂತಿಸುತ್ತದೆ. ಅಂಗನವಾಡಿ ಕೇಂದ್ರಗಳನ್ನು ಆರಂಭಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಏಳಿಗೆಗೆ ಶ್ರಮಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಹೇಳಿದರು.
ನಿಗಮದ ಅಧ್ಯಕ್ಷರಾದ ಪದ್ಮಾವತಿ ಅವರು ಐದು ಬಾರಿ ಕಾರ್ಪೋರೆಟರ್ ಆಗಿ ಬೆಂಗಳೂರಿನಲ್ಲಿ ಮನೆ ಮನೆಗೆ ಪರಿಚಿತರು. ಮಹಿಳೆ ರಾಜಕೀಯಕ್ಕೆ ಬರುವುದು ವಿರಳ, ಪದ್ಮಾವತಿ ಅವರು ರಾಜಾಜಿನಗರದಲ್ಲಿ ಐದು ಬಾರಿ ಕಾರ್ಪೋರೆಟರ್ ಆಗಿದ್ದು ಸಾಧನೆಯೇ. ಚಾಕ ಚಕ್ಯತೆ, ಚಾಣಾಕ್ಷತನದಿಂದ ಪದ್ಮಾವತಿ ಅವರು ಕೆಲಸ ಮಾಡುತ್ತಿದ್ದಾರೆ ಎಂದರು.
ಮಹಿಳಾ ಸಬಲೀಕರಣಕ್ಕಾಗಿ ಕರ್ಮಣಿ ಉತ್ಸವ, ಗೃಹಲಕ್ಷ್ಮಿ ಡಿಜಿಟಲ್ ಅನಾವರಣ ಮಾಡಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನಮ್ಮ ಸರ್ಕಾರ ಎಲ್ಲಾ ರೀತಿಯ ಕೆಲಸ ಮಾಡುತ್ತಿದೆ ಎಂದರು.
* *ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಗೆ ಚಾಲನೆ*

ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಆರಂಭಿಸಲಾಗಿರುವ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಗೆ ಚಾಲನೆ ನೀಡಲಾಯಿತು. ಬಳಿಕ ನಿಗಮದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.
ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ರಾಮಲಿಂಗ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪದ್ಮಾವತಿ, ಚಿತ್ರನಟಿ ರಾಗಿಣಿ ದ್ವಿವೇದಿ, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


