Kannada NewsKarnataka NewsLatest

*ಗೃಹಜ್ಯೋತಿ ಯೋಜನೆಗೆ ಚಾಲನೆ; ಶೂನ್ಯ ಬಿಲ್ ವಿತರಣೆ*

ಸ್ವಾವಲಂಬಿ ಬದುಕಿಗೆ “ಗ್ಯಾರಂಟಿ” ಯೋಜನೆಗಳು ಪೂರಕವಾಗಿವೆ: ಸಚಿವ ಸತೀಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗೃಹಜ್ಯೋತಿ ಯೋಜನೆಗಾಗಿ ಬೆಳಗಾವಿ ಜಿಲ್ಲೆಗೆ ಪ್ರತಿವರ್ಷಕ್ಕೆ 516 ಕೋಟಿ ರೂಪಾಯಿಗಳನ್ನು ಸರಕಾರವು ನೀಡಲಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4 ರಿಂದ 5 ಸಾವಿರ ರೂಪಾಯಿ ಖರ್ಚು ಮಾಡಲಿದೆ. ಇದು ಮಕ್ಕಳ ಶಿಕ್ಷಣ ಹಾಗೂ ಕುಟುಂಬ ನಿರ್ವಹಣೆಗೆ ಬಳಕೆಯಾಗಬೇಕು. ಅಂದಾಗ ಮಾತ್ರ ಸರಕಾರದ ಗ್ಯಾರಂಟಿ ಯೋಜನೆಗಳು ಸಾರ್ಥಕವಾಗಲಿವೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಗರದ ಕುಮಾರ್ ಗಂಧರ್ವ ಕಲಾಮಂದಿರದಲ್ಲಿ ಶನಿವಾರ(ಆ.5) 200 ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಗ್ಯಾರಂಟಿ ಯೋಜನೆಯಾಗಿರುವ “ಗೃಹಜ್ಯೋತಿ” ಯೋಜನೆಗೆ ಚಾಲನೆ ನೀಡಿ, ಫಲಾನುಭವಿಗಳಿಗೆ ಶೂನ್ಯ ವಿದ್ಯುತ್ ಬಿಲ್ ವಿತರಿಸಿ ಅವರು ಮಾತನಾಡಿದರು.

ಚುನಾವಣೆಯಲ್ಲಿ ನೀಡಿರುವ ಗ್ಯಾರಂಟಿಯ ಪ್ರಕಾರ “ಗೃಹಜ್ಯೋತಿ” ಯೋಜನೆಯನ್ನು ಅನುಷ್ಢಾನಗೊಳಿಸುವ ಮೂಲಕ ನಮ್ಮ ಸರಕಾರವು ನುಡಿದಂತೆ ನಡೆದಿದೆ. ಮೂರು‌ ತಿಂಗಳ ಅವಧಿಯಲ್ಲಿ ಜಾರಿಗೊಳಿಸಲಾಗುತ್ತಿದೆ. ಇನ್ನುಳಿದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.

ಇಷ್ಟೊಂದು ದೊಡ್ಡ ಮೊತ್ತವನ್ನು ಸರಕಾರ ಹೇಗೆ ಹೊಂದಾಣಿಕೆ‌ ಮಾಡಲಿದೆ ಎಂಬ ಆತಂಕವಿತ್ತು. ಆದರೆ ಮುಖ್ಯಮಂತ್ರಿಗಳು ಇದನ್ನು ಸುಗಮವಾಗಿ ಜಾರಿಗೊಳಿಸುವ ಮೂಲಕ ನಮ್ಮ ಸರಕಾರ ಬಡವರ ಪರ ಎಂಬುದನ್ನು ಸಾಬೀತುಪಡಿಸಿದೆ.
ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.

ಗೃಹಜ್ಯೋತಿ ಯೋಜನೆಯಿಂದ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು.
ಬೆಳಗಾವಿಯಲ್ಲಿ ಹತ್ತು ಲಕ್ಷಕ್ಕೂ ಅಧಿಕ ಗ್ರಾಹಕರಿಗೆ ಇದರ ಪ್ರಯೋಜನೆ ದೊರಕಲಿದ್ದು, ಇದುವರೆಗೆ ಶೇ.80ರಷ್ಟು ಗ್ರಾಹಕರು ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.

ಗ್ಯಾರಂಟಿ ಯೋಜನೆಗಳು ಸಾರ್ಥಕವಾಗಬೇಕು:

ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಉತ್ತಮ ಬದುಕು ರೂಪಿಸಲು ಮುಂದಾಗಬೇಕು. ಬಸವಣ್ಣನವರ ಸಮಾನತೆ; ಡಾ. ಅಂಬೇಡ್ಕರ್ ಅವರ ಸಂವಿಧಾನವನ್ನು ಗೌರವಿಸುವಂತಹ ಸಂಸ್ಕಾರ ಹಾಗೂ ಶಿಕ್ಷಣವನ್ನು ನೀಡಬೇಕು ಎಂದು ಕರೆ ನೀಡಿದರು.
ಮುಂಬರುವ ದಿನಗಳಲ್ಲಿ ಇನ್ನಷ್ಟು ಜನಪರ ಯೋಜನೆಗಳನ್ನು ಸರಕಾರ ಜಾರಿಗೊಳಿಸಲಿದೆ. ಸರಕಾರ ವಿನಿಯೋಗಿಸುವ ಇಷ್ಟು ದೊಡ್ಡ ಮೊತ್ತದ ಹಣ ಸದ್ಬಳಕೆಯಾಗಬೇಕು. ಸರಕಾರದ ದುಡ್ಡು ಸಾರ್ವಜನಿಕರ ದುಡ್ಡೇ ಆಗಿರುವುದರಿಂದ ಅದನ್ನು ಇತಿಮಿತಿಯಲ್ಲಿ ಬಳಸಬೇಕು ಎಂದು ಸಚಿವ ಜಾರಕಿಹೊಳಿ ಕಿವಿಮಾತು ಹೇಳಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರು, ಗೃಹಜ್ಯೋತಿಯು ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಕೇವಲ ಮೂರು ತಿಂಗಳಲ್ಲಿ ಮೂರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸರಕಾರ ತನ್ನ ಭರವಸೆಯನ್ನು ಈಡೇರಿಸಿದೆ.ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ಯೋಜನೆಗಳು ಪೂರಕವಾಗಿವೆ ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜತೆಗೆ ಅಭಿವೃದ್ಧಿಯತ್ತ ದಾಪುಗಾಲು ಹಾಕೋಣ ಎಂದು ಚನ್ನರಾಜ್ ಹಟ್ಟಿಹೊಳಿ ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಆಸಿಫ್(ರಾಜು) ಸೇಠ್ ಅವರು ಮಾತನಾಡಿ, ಬಡವರ ಹಿತರಕ್ಷಣೆಗಾಗಿ ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಗೃಹಜ್ಯೋತಿ ಯೋಜನೆಯು ಪ್ರತಿ ಕುಟುಂಬಕ್ಕೆ ತಲುಪಿಸಲಾಗುವುದು. ಪ್ರತಿ ತಿಂಗಳು ಬೆಳಗಾವಿ ಜಿಲ್ಲೆಯಲ್ಲಿ ‌45 ಕೋಟಿ ರೂಪಾಯಿ ವೆಚ್ಚವನ್ನು ಸರಕಾರ ಭರಿಸಲಿದೆ. ಗೃಹಲಕ್ಷ್ಮೀ ಯೋಜನೆ ಕೂಡ ಇನ್ನು ಕೆಲವೇ ದಿನಗಳಲ್ಲಿ ಅನುಷ್ಠಾನಗೊಳ್ಳಲಿದೆ. ಬಡವರಪರ ತತ್ವ-ಸಿದ್ಧಾಂತವನ್ನು ಪಾಲಿಸಿಕೊಂಡು ಬರುತ್ತಿರುವುದರಿಂದ ಇಂತಹ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯ ಎಂಜಿನಿಯರ್ ವಿ.ಪ್ರಕಾಶ್ ಅವರು, ರಾಜ್ಯದಲ್ಲಿ 2.20 ಕೋಟಿ ಗೃಹಬಳಕೆಯ ಗ್ರಾಹಕರಿಗೆ ಹಾಗೂ ಬೆಳಗಾವಿ ಜಿಲ್ಲೆಯ 10.65 ಲಕ್ಷ ಗ್ರಾಹಕರಿಗೆ ಈ ಯೋಜನೆಯ ಲಾಭ ದೊರಕಲಿದೆ ಎಂದು ತಿಳಿಸಿದರು.

ನೋಂದಣಿ ಪ್ರಕ್ರಿಯೆ ಎಲ್ಲೆಡೆ ಚುರುಕಿನಿಂದ ನಡೆದಿದ್ದು, ಎಲ್ಲ ಅರ್ಹರಿಗೆ ಯೋಜನೆಯ ಲಾಭವನ್ನು ತಲುಪಿಸಲಾಗುವುದು ಎಂದು ತಿಳಿಸಿದರು.

ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ, ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ, ವಿಧಾನಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಪೃಥ್ವಿ ಕತ್ತಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕರಾದ ಸಿದ್ದು ಹುಲ್ಲೋಳಿ ಮತ್ತಿತರರು ಉಪಸ್ಥಿತರಿದ್ದರು.

ಹೆಸ್ಕಾಂ ಅಧೀಕ್ಷಕ ಎಂಜಿನಿಯರ್ ಪ್ರವೀಣಕುಮಾರ್ ಸ್ವಾಗತಿಸಿದರು. ಸರ್ವಮಂಗಳ ಅರಳಿಮಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಮಹಾನಗರ ಪಾಲಿಕೆಯ ಸದಸ್ಯರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button