Politics

*ಒಂದು‌ ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌

ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Home add -Advt

ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ‌ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ವಿರೋಧ ಪಕ್ಷದವರಿಗೆ ಮಾತನಾಡುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ.‌ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ನಮ್ಮ ಯೋಜನೆಗಳನ್ನೇ ಕಾಪಿ ಮಾಡಿಕೊಂಡು ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದರು ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Related Articles

Back to top button