
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ಘೋಷಿಸಿದೆ. ಕೊರೊನಾದಿಂದ ಜನರು ಸಂಕಷ್ಟಕ್ಕೀಡಾಗಿರುವುದರಿಂದ ರಾಜ್ಯದ ಜನತೆಗೆ ಉಚಿತವಾಗಿ ಲಸಿಕೆ ನೀಡುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಕುಮಾರಸ್ವಾಮಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸರಣಿ ಟ್ವೀಟ್ ಮೂಲಕ ರಾಜ್ಯದ ಜನತೆಗೆ ಉಚಿತ ಲಸಿಕೆ ನೀಡಲು ಸರ್ಕಾರವನ್ನು ಆಗ್ರಹಿಸಿದ್ದಾರೆ. ಸಧ್ಯದ ಸ್ಥಿತಿಯಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ರಾಜ್ಯದಲ್ಲಿ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕು ಎಂದು ಮನವಿ ಮಾಡಿದ್ದಾರೆ.
ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು ಎಂದು ಸಿಎಂ ಯಡಿಯೂರಪ್ಪನವರಿಗೆ ಕೋರಿದ್ದಾರೆ. ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ. ಸರಿಸುಮಾರು 2.50 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ 2 ಸಾವಿರ ಕೋಟಿ ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಅಷ್ಟೇನು ಹೊರೆಯೆನಿಸದು.
ಹಾಗಾಗಿ ರಾಜ್ಯದ ಪ್ರತಿಯೊಬ್ಬರಿಗೂ ಪಲ್ಸ್ ಪೋಲಿಯೋ ಲಸಿಕೆ ಮಾದರಿಯಲ್ಲಿ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಉತ್ತಮ ಎಂದು ಸಲಹೆ ನೀಡಿದ್ದಾರೆ.
ಔಷಧ ಅಂಗಡಿ ಸಿಬ್ಬಂದಿಯಿಂದಲೇ ರೆಮ್ ಡಿಸಿವಿರ್ ಅಕ್ರಮ ಮಾರಾಟ; ಬೃಹತ್ ಗ್ಯಾಂಗ್ ಬಂಧಿಸಿದ ಸಿಸಿಬಿ