Latest

ಹಿಂದಿ ಹೇರಿಕೆ ವಿಚಾರ: ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಾಗಬಾರದು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಂದಿ ದಿವಸ್ ಆಚರಣೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದು, ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ಖಂಡಿಸಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ ಎಂದಿದ್ದಾರೆ.

ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳಾಗುತ್ತಾರೆ.

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು ಎಂದು ಹೇಳಿದ್ದಾರೆ.

Home add -Advt

ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು ಎಂದು ಗುಡುಗಿದ್ದಾರೆ.

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ ಎಂದಿದ್ದಾರೆ.

Related Articles

Back to top button