Latest

ಸೋಂಕಿತರ ಮನೆ ಮುಂದೆ ಎಚ್ಚರಿಕೆ ಫಲಕ ಸಾಮಾಜಿಕ ತಾರತಮ್ಯಕ್ಕೆ ಕಾರಣ: ಹೆಚ್ ಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕದ ಬಗ್ಗೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ನವಯುಗದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಗುಡುಗಿರುವ ಕುಮಾರಸ್ವಾಮಿ, ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಧೈರ್ಯ, ಜಾಗೃತಿ, ಅರಿವು ಮೂಡಿಸಬೇಕು‌. ಮನೆಯಿಂದ ಹೊರಬಾರದಂತೆ ಅವರ ಜವಾಬ್ದಾರಿ ತಿಳಿಸಿಕೊಡಬೇಕು. ಅದು ಬಿಟ್ಟು ಇಂಥ ಅಪಮಾನಿಸುವ ಪರಿಪಾಠ ಬೇಡ. ಈ ನಿಟ್ಟಿನಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಗಮನ ಹರಿಸಲಿ ಎಂದಿದ್ದಾರೆ.

ಇನ್ನು ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರ ಚಿಕಿತ್ಸೆ ನಿರಾಕರಿಸುತ್ತಿರುವ ಬಗ್ಗೆಯೂ ಪ್ರಸ್ತಾಪಿಸಿರುವ ಕುಮಾರಸ್ವಾಮಿ, ಚಿಕಿತ್ಸೆ ನಿರಾಕರಿಸುವುದು ಯಾವುದೇ ಆಸ್ಪತ್ರೆಯ ತಪ್ಪು. ಆದರೆ ಅದೇ ಕಾರಣಕ್ಕೆ ಸರ್ಕಾರ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ. ಆರೋಗ್ಯದ ಈ ತುರ್ತು ಪರಿಸ್ಥಿತಿಯಲ್ಲಿ ಅದರಿಂದ ಲಾಭವೂ ಇಲ್ಲ. ಅಷ್ಟಕ್ಕೂ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಇರುವುದು MCIಗೆ. ಸರ್ಕಾರಕ್ಕಲ್ಲ ನೆನಪಿರಲಿ ಎಂದು ಹೇಳಿದ್ದಾರೆ.

ಈ ಪರಿಸ್ಥಿಯಲ್ಲಿ ಮೆಡಿಕಲ್ ಕಾಲೇಜುಗಳ ಮೇಲೆ ರೋಷಾವೇಶ ತೋರುವುದನ್ನು ಬಿಟ್ಟು ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅವರ ಸೇವೆ ಪಡೆಯುವತ್ತ ಸರ್ಕಾರ ಗಮನಹರಿಸಲಿ‌. ಅವರ ಅಗತ್ಯಗಳನ್ನು ಪೂರೈಸುವತ್ತ ಗಮನ ಹರಿಸಲಿ. ಈ ಮೂಲಕ ಕೊರೊನಾ ವೈರಸ್ ವಿರುದ್ಧ ಸಾಂಘಿಕ ಹೋರಾಟ ನಡೆಸಲಿ ಎಂದು ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button