Politics

*ನಾಳೆ ರಾಜ್ಯಕ್ಕೆ ಕೇಂದ್ರದ ನೂತನ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗಮನ*

ಅದ್ಧೂರಿ ಸ್ವಾಗತಕ್ಕೆ ಜೆಡಿಎಸ್ ಕಾರ್ಯಕರ್ತರ ಸಿದ್ಧತೆ; ಈ ಸಂಭ್ರಮದಲ್ಲಿ ನಾನು ಭಾಗಿ ಎಂದ ನಿಖಿಲ್ ಕುಮಾರಸ್ವಾಮಿ

ಪ್ರಗತಿವಾಹಿನಿ ಸುದ್ದಿ: ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದು, ಆ ಸಂಭ್ರಮದಲ್ಲಿ ನಾನು ಕೂಡ ಭಾಗಿಯಾಗುತ್ತೇನೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷದ ರಾಜ್ಯದ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು; ನಾಳೆ ಬೆಳಗ್ಗೆ (ಶುಕ್ರವಾರ) 11.50ಕ್ಕೆ ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅವರ ಸ್ವಾಗತಕ್ಕೆ ಎಲ್ಲಾ ಸಿದ್ಧತೆಗಳನ್ನು ಕಾರ್ಯಕರ್ತರು ಮಾಡಿಕೊಳ್ಳುತ್ತಿರುವುದು ನನಗೆ ಸಂತಸ ಉಂಟು ಮಾಡಿದೆ ಎಂದರು.

ವಿಮಾನ ನಿಲ್ದಾಣದಿಂದ ಪಕ್ಷದ ರಾಜ್ಯ ಕಚೇರಿ ಜೆಪಿ ಭವನಕ್ಕೆ ಬರಲಿರುವ ಅವರು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಸೌಹಾರ್ದ ಭೇಟಿ ಮಾಡಲಿದ್ದಾರೆ. ಬಳಿಕ ಮಾಜಿ ಪ್ರಧಾನಿಗಳಾದ ದೇವೇಗೌಡರ ಮನೆಗೆ ತೆರಳಿ ತಂದೆ ತಾಯಿಯ ಆಶೀರ್ವಾದ ಪಡೆಯಲಿದ್ದಾರೆ. ನಂತರ ತಿರುಪತಿಗೆ ತೆರಳಲಿದ್ದಾರೆ ಎಂದು ನಿಖಿಲ್ ಅವರು ಮಾಹಿತಿ ನೀಡಿದರು.

ಭಾನುವಾರ ತಮಗೆ ರಾಜಕೀಯ ಜನ್ಮ ನೀಡಿದ ರಾಮನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬಳಿಕ ತಮಗೆ ರಾಜಕೀಯ ಶಕ್ತಿ ತುಂಬಿದ ಮಂಡ್ಯದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಎರಡೂ ಕಡೆ ನಮ್ಮ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಭೆಗಳನ್ನು ಹಮ್ಮಿಕೊಂಡಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿದ್ದಾರೆ. ಎರಡು ಸಲ ರಾಜ್ಯದ ಮುಖ್ಯಮಂತ್ರಿಯಾಗಿ ಬಡವರ ಪರ, ರೈತರ ಪರ ಕೆಲಸ ಮಾಡಿರುವ ಕುಮಾರಸ್ವಾಮಿ ಅವರಿಗೆ ಈ ಅವಕಾಶ ದೊರಕಿರುವುದು ಅತ್ಯಂತ ಸಂತೋಷದ ಸಂಗತಿ. ಅತ್ಯಂತ ಪ್ರಮುಖ ಸ್ಥಾನವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ನಿರೀಕ್ಷೆ ಇದೆ, ವಿಶ್ವಾಸ ಇದೆ. ಕುಮಾರಸ್ವಾಮಿ ಅವರು ಈಗಾಗಲೇ ಕೆಲಸ ಆರಂಭ ಮಾಡಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಎದ್ದು ಕೆಲಸ ಮಾಡುತ್ತಿದ್ದಾರೆ. ಉಕ್ಕು ಸಚಿವಾಲಯದಲ್ಲಿ ನಮ್ಮ ರಾಜ್ಯಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕುವ ಮೂಲಕ ಕೆಲಸ ಆರಂಭ ಮಾಡಿದ್ದಾರೆ ಎಂದು ನಿಖಿಲ್ ಅವರು ತಿಳಿಸಿದರು.

ಮಂಡ್ಯ ಜಿಲ್ಲೆಯ ಎಲ್ಲ ಜನತೆ, ನಾಯಕರಿಗೆ ಧನ್ಯವಾದಗಳನ್ನು ಹೇಳುತ್ತೇನೆ. 2018ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸಂಖ್ಯೆಯ ಶಾಸಕರನ್ನು ಆಯ್ಕೆ ಮಾಡಿದ್ದರು. ಅದೇ ರೀತಿ ಈ ಸಲ ಕುಮಾರಸ್ವಾಮಿ ಅವರನ್ನು ಹೆಚ್ಚಿನ ಅಂತರದಲ್ಲಿ ಆಯ್ಕೆ ಮಾಡಿದ್ದಾರೆ. ರಾಮನಗರದಲ್ಲಿ ರಾಜಕೀಯ ಬದುಕನ್ನು ಕಟ್ಟಿಕೊಟ್ಟ ಜನತೆಗೂ ಧನ್ಯವಾದಗಳನ್ನು ಹೇಳುತ್ತೇನೆ ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಪರವಾಗಿ ದೇಶದ ಮತ್ತು ರಾಜ್ಯದ ಜನತೆ ಐತಿಹಾಸಿಕ ತೀರ್ಪು ನೀಡಿದ್ದಾರೆ. ಕಳೆದ ಎರಡು ಅವಧಿಗಳಲ್ಲಿ ಮೋದಿ ಅವರು ಅನೇಕ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಮತ್ತೆ ಮೋದಿಯವರು ಪ್ರಧಾನಿ ಆಗಲು ಜನ ತೀರ್ಪು ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ದೇವೇಗೌಡರು ಮೋದಿ ಅವರ ನಾಯಕತ್ವ ಮೆಚ್ಚಿ ಮೈತ್ರಿ ಭಾಗವಾಗಲು ತೀರ್ಮಾನ ಮಾಡಿದರು. ಚಾಮರಾಜನಗರ, ಹಾಸನ ಹೊರತುಪಡಿಸಿ ಹಳೇ ಮೈಸೂರು ಭಾಗದಲ್ಲಿ ಎಲ್ಲಾ ಕಡೆ ಮೈತ್ರಿ ಯಶಸ್ವಿಯಾಗಿದೆ. ಜನತೆಯ ವಿಶ್ವಾಸ ಉಳಿಸಿಕೊಳ್ಳುತ್ತೇವೆ ಎಂದು ನಿಖಿಲ್ ಅವರು ತಿಳಿಸಿದರು.

*

ಪಕ್ಷದ ಸಂಘಟನೆಗೆ ದುಡಿಯುತ್ತೇನೆ:

ಮುಂದಿನ ದಿನಗಳಲ್ಲಿ ಜೆಡಿಎಸ್ ಸಂಘಟನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವೆ. 2019ರಲ್ಲಿ ಅನಿರೀಕ್ಷಿತವಾಗಿ ನಾನು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾದೆ. ರಾಜಕಾರಣ ದೊಡ್ಡ ಜವಾಬ್ದಾರಿ. ಪ್ರಾದೇಶಿಕ ಪಕ್ಷ ನಿಭಾಯಿಸುವ ಜವಾಬ್ದಾರಿ ಕೂಡ ದೊಡ್ಡದು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇನೆ. ಸಿನಿಮಾಗಳಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

*

ನಮ್ಮ ನಡೆ ಉತ್ತಮವಾಗಿರಬೇಕು

ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಅವರು; ನಮ್ಮ ನಡೆ ಉತ್ತಮವಾಗಿ ಇರಬೇಕು. ಸಾರ್ವಜನಿಕ ಜೀವನಕ್ಕೆ ಬಂದ ಮೇಲೆ ಜನ ನಮ್ಮನ್ನು ಗಮನಿಸುತ್ತಿರುತ್ತಾರೆ. ನಮ್ಮ ನಡೆ ಉತ್ತಮವಾಗಿ ಇರುವಂತೆ ನೋಡಿಕೊಳ್ಳಬೇಕು. ಅವರ ಪ್ರಕರಣ ಈಗಾಗಲೇ ತನಿಖೆ ನಡೆಯುತ್ತಿದೆ. ಈಗಲೇ ಆ ವಿಚಾರದ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ ಎಂದರು.

*

ಚನ್ನಪಟ್ಟಣದ ಅಭ್ಯರ್ಥಿ ಬಗ್ಗೆ ವರಿಷ್ಠರು ನಿರ್ಧಾರ ಮಾಡುತ್ತಾರೆ

ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಅಭ್ಯರ್ಥಿ ಯಾರು ಆಗಬೇಕೆಂದು ವರಿಷ್ಠರು ನಿರ್ಧಾರ ಮಾಡುತ್ತಾರೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ರಾಜ್ಯ, ರಾಷ್ಟ್ರೀಯ ನಾಯಕರು ಕೂತು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಎರಡೂ ಪಕ್ಷಗಳ ನಾಯಕರ ಅಭಿಪ್ರಾಯ ಪಡೆದು ಅಂತಿಮವಾಗಿ ಆ ವರದಿಯನ್ನು ವರಿಷ್ಠರಿಗೆ ಸಲ್ಲಿಕೆ ಮಾಡುತ್ತೇವೆ. ಸದ್ಯಕ್ಕೆ ಅಲ್ಲಿ ನನ್ನ ಸ್ಪರ್ಧೆ ಚರ್ಚೆ ಅಪ್ರಸ್ತುತ. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್ ಕೂಡ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅಭ್ಯರ್ಥಿ ಯಾರಾಗಬೇಕೆಂದು ಎರಡು ಪಕ್ಷಗಳ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ನಿಖಿಲ್ ಅವರು ತಿಳಿಸಿದರು.

ಗ್ಯಾರಂಟಿ ನಿಲ್ಲಿಸುತ್ತೇವೆ ಎನ್ನುವುದು ಉದ್ದಟತನ:

ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವ ಬಗ್ಗೆ ಕಾಂಗ್ರೆಸ್‌ ನಾಯಕರೇ ಮಾತನಾಡುತ್ತಿದ್ದಾರೆ. ಇಂತಹ ಉದ್ಧಟತನದ ಮಾತುಗಳನ್ನು ಆಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯ ಹಾಗೂ ದೇಶದಲ್ಲಿ ನಮ್ಮ ಹೋರಾಟ ಇರುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

*

ಹಾಸನದ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು, ಈ ಸೋಲನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಚುನಾವಣೆಯಲ್ಲಿ ಗೆಲುವು ಸೋಲು ಸಹಜ. ಸೋತ ಮಾತ್ರಕ್ಕೆ ನಾವು ಕೈ ಕಟ್ಟಿ ಮನೆಯಲ್ಲಿ ಕೂರುವುದಿಲ್ಲ. ಹಾಸನದಲ್ಲಿ ಪಕ್ಷವನ್ನು ನಂಬಿಕೊಂಡ ಹಲವಾರು ಕಾರ್ಯಕರ್ತರು ಇದ್ದಾರೆ. ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುತ್ತೇವೆ ಎಂದು ನಿಖಿಲ್ ಅವರು ತಿಳಿಸಿದರು.

ಹಾಸನ ಜಿಲ್ಲೆಯಲ್ಲಿ ಮುಂದೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ. ಕಾರ್ಯಕರ್ತರಿಗೆ ಧೈರ್ಯ ತುಂಬಿ ಪಕ್ಷವನ್ನು ಬಲಪಡಿಸುತ್ತೇವೆ ಎಂದು ಅವರು ಹೇಳಿದರು.

ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ಕೋಲಾರ ಕ್ಷೇತ್ರದ ನೂತನ ಸಂಸದ ಮಲ್ಲೇಶ್ ಬಾಬು ಹಾಗೂ ರಾಜ್ಯದಲ್ಲಿ ಗೆದ್ದಿರುವ ಮೈತ್ರಿಕೂಟದ ಎಲ್ಲಾ ಸಂಸದರು, ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದ ಎಸ್.ಎಲ್.ಭೋಜೆಗೌಡರು, ಕೆ.ವಿವೇಕಾನಂದ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಜವರಾಯಿಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button