
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರೈತ ಸಂಘಟನೆಗಳು ಕರೆ ನೀಡಿರುವ ನಾಳಿನ ಕರ್ನಾಟಕ ಬಂದ್ ಗೆ ಸಾರಿಗೆ ಸಂಸ್ಥೆಗಳ ಬೆಂಬಲವಿಲ್ಲ, ರಾಜ್ಯಾದ್ಯಂತ ಬಸ್ ಸಂಚಾರ ಎಂದಿನಂತೆ ಇರಲಿದೆ ಎಂದು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಸವದಿ, ರಾಜ್ಯಾದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿರಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ , ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಎಂದಿನಂತೆ ಬಸ್ ಸಂಚಾರ ಮುಂದುವರೆಯಲಿದೆ. ಜನತೆಗೆ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಹೇಳಿದರು.
ಬಂದ್ ಹಿನ್ನೆಲೆಯಲ್ಲಿ ಬಸ್ಸುಗಳಿಗೆ ಮತ್ತು ಇತರ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟು ಮಾಡಲು ಮುಂದಾದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಗೆ ಪೂರಕವಾಗಿಯೇ ಎ.ಪಿ.ಎಂ.ಸಿ.ಕಾಯ್ದೆ, ಭೂ ಸುಧಾರಣಾ ಮಸೂದೆಗಳನ್ನು ಜಾರಿಗೆ ತಂದಿದೆ. ಈ ಬಗ್ಗೆ ಪ್ರತಿಭಟನಾನಿರತರ ಮನವೊಲಿಸಲು ಮುಖ್ಯಮಂತ್ರಿಗಳು ಸಭೆಯನ್ನು ನಡೆಸಿದ್ದರು. ನಿನ್ನೆ ವಿಧಾನಮಂಡಲದ ಕಲಾಪದಲ್ಲಿಯೂ ಈ ಮಸೂದೆಗಳಿಂದ ರೈತರಿಗೆ ಉಂಟಾಗಲಿರುವ ಲಾಭಗಳ ಬಗ್ಗೆಯೂ ನಮ್ಮ ಸರ್ಕಾರ ಸ್ಪಷ್ಟನೆ ನೀಡಿತ್ತು. ಆದರೂ ಸಾರ್ವಜನಿಕರಿಗೆ ತೊಂದರೆ ಉಂಟಾಗುವ ರೀತಿಯಲ್ಲಿ ಬಂದ್ ನಡೆಸಲು ನಿರ್ಧರಿಸಿರುವುದು ದುರ್ದೈವದ ಸಂಗತಿ ಎಂದರು.
ಕೊರೋನಾ ಸೋಂಕಿನಿಂದಾಗಿ ರಾಜ್ಯದ ಜನರು ಪರಿತಪಿಸುತ್ತಿರುವ ಈ ಸಂದರ್ಭದಲ್ಲಿ ಇಂತಹ ಪ್ರತಿಭಟನೆ, ಬಂದ್ ಗಳನ್ನು ನಡೆಸುವುದು ಸರಿಯಲ್ಲ. ಬಂದ್ ನಡೆಸುವ ನಿರ್ಧಾರವನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಕೈಬಿಡಬೇಕು ಎಂದು ಮನವಿ ಮಾಡಿದರು.