
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಶ್ವದ ಮುಂಚೂಣಿಯ ಎಲೆಕ್ಟ್ರಾನಿಕ್ ತಯಾರಿಕಾ ಕಂಪನಿ ಹಾನ್ ಹಾಯ್ ಟೆಕ್ನಾಲಜಿ ಗ್ರೂಪ್ (ಫಾಕ್ಸ್ ಕಾನ್) ಕಂಪೆನಿಯು ರಾಜ್ಯದಲ್ಲಿ ಗಣನೀಯ ಗಾತ್ರದ ಹೂಡಿಕೆ ಮಾಡಲು ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಇದರಿಂದ ರಾಜ್ಯದಲ್ಲಿ 1 ಲಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆ ಇದ್ದು, ಉದ್ಯಮ ಸ್ಥಾಪನೆಗಾಗಿ ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕುಗಳಲ್ಲಿ 300 ಎಕರೆ ಭೂಮಿ ಗುರುತಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವು ಫಾಕ್ಸ್ ಕಾನ್ ಗೆ ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುವುದಾಗಿ ತಿಳಿಸಿದರು. ಅತ್ಯಾಧುನಿಕ ತಂತ್ರಜ್ಞಾನಗಳ ಪರಿಣತಿಗೆ ಹೆಸರಾದ ಕಂಪೆನಿ ಫಾಕ್ಸ್ ಕಾನ್ ರಾಜ್ಯದಲ್ಲಿ ಹೂಡಿಕೆ ಮಾಡುತ್ತಿರುವುದು ಸಂತಸ ತಂದಿದೆ. ಕರ್ನಾಟಕದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿವೆ. ಐಟಿಐಗಳನ್ನು ಇತ್ತೀಚೆಗಷ್ಟೇ ಉನ್ನತೀಕರಿಸಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಕುರಿತು ತರಬೇತಿ ನೀಡಲಾಗುತ್ತಿದೆ. ಅಂತೆಯೇ ಜಿ.ಟಿ.ಟಿ.ಸಿ, ಪಾಲಿಟೆಕ್ನಿಕ್ ಗಳು ಹಾಗೂ ಎಂಜಿನಿಯರಿಂಗ್ ಕಾಲೇಜುಗಳು ಅತ್ಯುತ್ತಮ ತಾಂತ್ರಿಕ ಶಿಕ್ಷಣವನ್ನು ನೀಡುವ ಮೂಲಕ ಕೌಶಲ್ಯಯುತ ಮಾನವ ಸಂಪನ್ಮೂಲ ಸೃಜಿಸಲಾಗುತ್ತಿದೆ ಎಂದು ವಿವರಿಸಿದರು.
ಬೆಂಗಳೂರಿನಲ್ಲಿ ಸುಮಾರು 400 ಸರ್ಕಾರಿ ಹಾಗೂ ಖಾಸಗಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳಿದ್ದು, ಜಗತ್ತಿನಲ್ಲಿಯೇ ಅತಿ ಹೆಚ್ಚು. ಅಂತೆಯೇ ರಾಜ್ಯವು ಅತ್ಯುತ್ತಮ ಸೆಮಿ-ಕಂಡಕ್ಟರ್ ನೀತಿಯನ್ನು ಹೊಂದಿದ್ದು, ಈ ವಲಯದಲ್ಲಿಯೂ ಹೂಡಿಕೆ ಮಾಡುವ ಕುರಿತು ಪರಿಶೀಲಿಸುವಂತೆ ಸಲಹೆ ನೀಡಿದರು.
ಇದಲ್ಲದೆ ತಾಂತ್ರಿಕ ತರಬೇತಿ ನೀಡುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಫಾಕ್ಸ್ ಕಾನ್ ಅಧ್ಯಕ್ಷ ಯಂಗ್ ಲಿಯು ರಾಜ್ಯದಲ್ಲಿ ಹೂಡಿಕೆ ಮಾಡುವ ಕುರಿತಾಗಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದರು. ಸೆಮಿಕಂಡಕ್ಟರ್ ವಲಯದಲ್ಲಿ ಹೂಡಿಕೆಯ ಕುರಿತು ಪರಿಶೀಲಿಸುವುದಾಗಿ ಅವರು ತಿಳಿಸಿದರು.
ಫಾಕ್ಸ್ ಕಾನ್ ಕಂಪೆನಿಯು ವಿಶ್ವದ ಅತಿ ದೊಡ್ಡ ಎಲೆಕ್ಟ್ರಾನಿಕ್ ತಯಾರಿಕಾ ಕಂಪೆನಿಯಾಗಿದ್ದು, 2022 ರಲ್ಲಿ NT$ 6 trillion ಗೂ ಹೆಚ್ಚು ವಹಿವಾಟು ನಡೆಸಿದೆ. ಜಗತ್ತಿನ ಫಾರ್ಚೂನ್ 500 ಕಂಪೆನಿಗಳಲ್ಲಿ 20ನೇ ಸ್ಥಾನದಲ್ಲಿದೆ. ವಿಶ್ವದ 24 ದೇಶಗಳಲ್ಲಿ 173 ಕ್ಯಾಂಪಸ್ ಗಳನ್ನು ಹೊಂದಿರುವ ಕಂಪೆನಿಯು ಮುಖ್ಯವಾಗಿ ಸ್ಮಾರ್ಟ್ ಫೋನ್, ಟಿವಿ ಗಳು, ಗೇಮ್ ಕನ್ಸೋಲ್ಸ್, ಕ್ಲೌಡ್ ಮತ್ತು ನೆಟ್ ವರ್ಕಿಂಗ್ ಉತ್ಪನ್ನಗಳು, ಕಂಪ್ಯೂಟಿಂಗ್ ಉತ್ಪನ್ನಗಳು ಮತ್ತು ಇತರ ಬಿಡಿ ಭಾಗಗಳ ಉತ್ಪಾದನೆಯಲ್ಲಿ ತೊಡಗಿದೆ.
ಸಭೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ.ಇ.ವಿ. ರಮಣರೆಡ್ಡಿ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್ನ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ