ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೆಶದ ಹತ್ರಾಸ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದ್ದು, ಈವರೆಗೆ 107 ಜನ ಸಾವನ್ನಪ್ಪಿದ್ದಾರೆ.
ಹತ್ರಾಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದ ರಾತಿ ಭನ್ ಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಏಕಾಏಕಿ ಕಾಲ್ತುಳಿತವುಂಟಾಗಿ ಈ ದುರಂತ ಸಂಭವಿಸಿದೆ.
ಹೆಚ್ಚಿನ ಜನರು ಸತ್ಸಂಗದಲ್ಲಿ ಭಾಗವಹಿಸಿದ್ದರಿಂದ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿ ಹಲವರು ಅಸ್ವಸ್ಥತೆಯಿಂದ ಹೊರಗೆ ಓಡಲಾರಂಭಿಸಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎನ್ನಲಾಗುತ್ತಿದೆ. ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ಈ ಅವಘಡ ಸಂಭವಿಸಿದೆ.
ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಆಗ್ರಾ ಎಡಿಜಿ ಹಾಗೂ ಅಲಿಘರ್ ಕಮಿಷ್ನರ್ ನೇತೃತ್ವದಲ್ಲಿ ತನಿಖೆ ನಡೆಸಲು ಸೂಚಿಸಿದ್ದಾರೆ.