
ಪ್ರಗತಿವಾಹಿನಿ ಸುದ್ದಿ: ಹೇಮಾವತಿ ಲಿಂಕ್ ಕೆನಲ್ ಯೋಜನೆಗೆ ವಿರೋಧಿಸಿ ತುಮಕೂರಿನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ರೈತರಿಗೆ ಜನಪ್ರತಿನಿಧಿಗಳು, ಸ್ವಾಮೀಜಿಗಳು ಸಾಥ್ ನೀಡಿದ್ದು, ಹೋರಾಟ ತೀವ್ರಗೊಂಡಿದೆ.
ಹೇಮಾವತಿ ನದಿ ನೀರನ್ನು ಕೆನಲ್ ಯೋಜನೆ ಮೂಲಕ ರಾಮನಗರಕ್ಕೆ ಹರಿಸುವ ಉದ್ದೇಶಿತ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ತುಮಕೂರು ಜಿಲ್ಲೆಯ ರೈತರ ಹಾಗೂ ಜಿಲ್ಲೆಯ ಜನರ ವಿರೋಧದ ನಡುವೆಯೂ ಕೆನಲ್ ಕಾಮಗಾರಿ ಆರಂಭವಗಿದ್ದು, ತಕ್ಷಣ ಕಾಮಗಾರಿ ಸ್ಥಗಿತಗೊಳಿಸುವಂತೆ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಗುಬ್ಬಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಶಾಸಕ ಸುರೇಶ್ ಗೌಡ, ವಿವಿಧ ಮಠಾಧೀಶರು ಪಾಲ್ಗೊಂಡಿದ್ದು, ಪ್ರತಿಭಟನೆ ಉಗ್ರಸ್ವರೂಪ ಪಡೆದಿದೆ. ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗಳಿಗೆ ಬೆಂಕಿ ಹಚ್ಚಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಕೆನಲ್ ಕಾಮಗಾರಿ ಸ್ಥಳಕ್ಕೆ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಮಾರ್ಗ ಮಧ್ಯೆ ತಡೆದಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.