
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಿ ಗ್ರಾಮದ ಬಳಿ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ನಡೆಯುತ್ತದೆ. ಆದರೆ ಸತತವಾಗಿ ಬಿಳುತ್ತಿರುವ ಮಳೆಗೆ ಏಕಾಏಕಿ ನೀರು ಹೆಚ್ಚಳ ಆಗಿದ್ದರಿಂದ ಮಣ್ಣಿನ ರಸ್ತೆ ಕೊಚ್ಚಿ ಹೋಗಿದ್ದರಿಂದ ಸಂಚಾರ ಸ್ಥಗಿತಗೊಂಡಿದೆ. ಇದರ ಪರಿಣಾಮ ಬೆಳಗಾವಿ- ಜಾಂಬೋಟಿ, ಚೋರ್ಲಾ ಮಾರ್ಗವಾಗಿ ಗೋವಾಕ್ಕೆ ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದೆ.
ಹಳೆ ಸೇತುವೆ ಬೀಳಿಸಿ ಹೊಸ ಸೇತುವೆ ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ನದಿಯಲ್ಲಿ ಮಣ್ಣಿನ ರಸ್ತೆ ನಿರ್ಮಿಸಿ ಸಂಚಾರಕ್ಕೆ ಅನುವು ಮಾಡಲಾಗಿತ್ತು. ನೀರಿನ ಹರಿವು ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ರಸ್ತೆ ಕೊಚ್ಚಿ ಹೋಗಿದೆ.
ನಿರ್ಮಾಣ ಹಂತದ ಸೇತುವೆ ಕೂಡ ಭಾಗಶಃ ಮುಳುಗಡೆಯಾಗಿದೆ. ಮಳೆಗಾಲ ಮುಗಿಯುವವರೆಗೂ ರಸ್ತೆ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ಬೆಳಗಾವಿ, ಖಾನಾಪುರ, ರಾಮನಗರ ಮಾರ್ಗವಾಗಿ ಸವಾರರು ಗೋವಾಗೆ ಹೋಗುತ್ತಿದ್ದಾರೆ.