
ಪ್ರಗತಿವಾಹಿನಿ ಸುದ್ದಿ: ದೇಶದ ಹಲವೆಡೆ ಭಾರಿ ಮಳೆ, ಪ್ರವಾಹ ಪರುಸ್ಥಿತಿ ಎದುರಾಗಿದೆ. ಅದರಲ್ಲಿಯೂ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಹಠಾತ್ ಪ್ರವಾಹವುಂಟಾಗಿದ್ದು, ಕಟ್ಟಡಗಳು, ಮನೆಗಳ ಸಮೇತ ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಊರಿಗೆ ಊರೇ ಮಣ್ಣಿನಲ್ಲಿ ಹೂತುಹೋಗಿವೆ.
ಹಿಮಾಚಲ ಪ್ರದೇಶದ ಕಾಂಗ್ರಾ ಹಾಗೂ ಕುಲ್ಲು ಜಿಲ್ಲೆಗಳಲ್ಲಿ ವರುಣಾರ್ಭಟ ಬೆನ್ನಲ್ಲೇ ಇದ್ದಕ್ಕಿದ್ದಂತೆ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, ಗುಡ್ದಗಲ ಸಮೇತ ಪ್ರವಾಹದ ನೀರು ಗ್ರಾಮಗಳಿಗೆ ಅಪ್ಪಳಿಸಿದೆ. ಪರಿಣಾಮ ಜನರು ಪ್ರವಾದ ಅಬ್ಬರಕ್ಕೆ ಕೊಚ್ಚಿ ಹೋಗಿದ್ದಾರೆ.
ಕಾಂಗ್ರಾ ಜಿಲ್ಲೆಯ ಮನುನಿ ಖಾಡ್ ನಲ್ಲಿ ಇಂದಿರಾ ಪ್ರಿಯದರ್ಶಿನಿ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಟ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ 15ಕ್ಕೂ ಹೆಚ್ಚು ಜನರು ಏಕಾಏಕಿ ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಹಲವರು ನಾಪತ್ತೆಯಾಗಿದ್ದಾರೆ. ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಕುಲ್ಲು ಜಿಲ್ಲೆಯಲ್ಲಿ ಪ್ರವಾಹಕ್ಕೆ ಮೂವರು ಕೊಚ್ಚಿ ಹೋಗಿದ್ದಾರೆ. ಹಲವು ಮನೆಗಳು, ವಾಹನಗಳ ಕೆಸರು ಮಣ್ಣಿನಲ್ಲಿ ಹೂತು ಹೋಗಿವೆ. ರಸ್ತೆಗಳು ಕೆಸರುಮಯವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.