*ಶಿಕ್ಷಕರ ನೇಮಕಾತಿ ಸಮಸ್ಯೆ; ಆದ್ಯತೆಯ ಮೇರೆಗೆ ಪರಿಶೀಲಿಸಿ ಬಗೆಹರಿಸುವ ಭರವಸೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2022 ರ ಶಿಕ್ಷಕರ ನೇಮಕಾತಿಯಲ್ಲಿ ದಾಖಲೆ ಪರಿಶೀಲನೆ ವೇಳೆ ಆದ ಸಮಸ್ಯೆಯನ್ನು ಸರಿಪಡಿಸುವಂತೆ ಜನತಾದರ್ಶನ ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳು ಸಿಎಂ ಸಿದದ್ರಾಮಯ್ಯ ಅವರನ್ನು ಮನವಿ ಮಾಡಿದರು.
2022 ರ ಶಿಕ್ಷಕರ ನೇಮಕಾತಿಯಲ್ಲಿ ಸುಮಾರು 1800 ವಿವಾಹಿತ ಮಹಿಳಾ ಅಭ್ಯರ್ಥಿಗಳು ತಂದೆಯ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರು. ದಾಖಲೆ ಪರಿಶೀಲನೆಯ ಸಂದರ್ಭದಲ್ಲಿ ಈ ವಿವಾಹಿತ ಮಹಿಳೆಯರ ಜಾತಿ ಮೀಸಲಾತಿಯನ್ನು ರದ್ದುಗೊಳಿಸಿ ಸಾಮಾನ್ಯ ವರ್ಗಕ್ಕೆ ಸೇರಿಸಿರುತ್ತಾರೆ.
ತಾವು ನೇಮಕಾತಿ ಅಧಿಸೂಚನೆಯನ್ವಯ ಮಾಹಿತಿಯನ್ನು ಭರ್ತಿ ಮಾಡಿದ್ದು, ಅದರಲ್ಲಿ ಕೇವಲ ಆರ್.ಡಿ. ಸಂಖ್ಯೆಯನ್ನು ಮಾತ್ರ ನಮೂದಿಸಲು ಅವಕಾಶವಿದೆ. ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ತಮ್ಮ ಮೀಸಲಾತಿಯಿಂದ ಹೊರಗಿಟ್ಟು, ಸಾಮಾನ್ಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿದ್ದು ಇದನ್ನು ಸರಿಪಡಿಸುವಂತೆ ಕೆಲವು ಅಭ್ಯರ್ಥಿಗಳು ಮನವಿ ಸಲ್ಲಿಸಿದರು. ಈ ಸಮಸ್ಯೆಯನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಇದೇ ವೇಳೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ಮುಷ್ತಾಕ್ ಅವರು ತಮಗೆ ಮಂಜೂರಾಗಿರುವ ನಿವೇಶನವನ್ನು ಬೇರೆಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದನ್ನು ಬಿಡಿಸಿಕೊಡುವಂತೆ ಮನವಿ ಮಾಡಿದರು.
ಈ ಕುರಿತು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚಿಸಿದರು.




